ಮಂಡ್ಯ: ಇಡೀ ವಿಶ್ವವೇ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧೀಜಿರವರ ಸಾಧನೆ ಗುರುತಿಸಿ ಇಬ್ಬರೂ ವಿಶ್ವನಾಯಕರು ಎಂದು ಒಪ್ಪಿಕೊಂಡಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.
ಮಂಡ್ಯ ಜಿಲ್ಲಾಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ 134ನೇ ಅಂಬೇಡ್ಕರ್ ಜಯಂತಿಯ ಕಾರ್ಯಕ್ರಮವನ್ನು ಸಂವಿಧಾನ ಪೀಠಿಕೆ ಬೋದಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದ ಉನ್ನತ ವ್ಯಕ್ತಿಯಿಂದ ಇಡಿದು ಸಮಾಜದ ಕಟ್ಟ ಕಡೆಯ ವ್ಯಕ್ತಿಯನ್ನು ಗುರಿಯಾಗಿಸಿಕೊಂಡು ಭಾರತೀಯ ಸಂವಿಧಾನವನ್ನು ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ್ದಾರೆ. ಭಾರತೀಯ ಸಂವಿಧಾನ ಯಾವುದೇ ವರ್ಗ ಮತ್ತು ಸಮಾಜಕ್ಕೆ ಸಿಮಿತವಾಗಿಲ್ಲ ಎಂದು ಹೇಳಿದರು.
ವಿಶ್ವಜ್ಞಾನಿ ಡಾ. ವಿ.ಆರ್ ಅಂಬೇಡ್ಕರ್ ರಚಿಸಿದ ಭಾರತೀಯ ಸಂವಿಧಾನವನ್ನು ಅತ್ಯಂತ ಶ್ರೇಷ್ಠ ಸಂವಿಧಾನವೆಂದು ವಿಶ್ವವೇ ಹೇಳಿತು. ಸೂರ್ಯ ಚಂದ್ರ ಇರುವವರೆಗೂ ಅವರು ನೀಡಿರುವ ಕೊಡುಗೆಗಳು ಮತ್ತು ಸಾಧನೆ ಅಜರಾಮರ. ತುಳಿತಕ್ಕೊಳಗಾದವರಿಗೆ ಶಕ್ತಿ ತುಂಬುವ ಕೆಲಸವನ್ನು ಬಾಬಾ ಸಾಹೇಬ್ ಮಾಡಿದ್ದಾರೆ ಎಂದು ತಿಳಿಸಿದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಕಾರ್ಯಕ್ರಮದಲ್ಲಿ ಗೌರವಿಸಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಮಂಡ್ಯ ವಿಧಾನಸಭಾ ಶಾಸಕ ಪಿ.ರವಿಕುಮಾರ್, ಮೈ ಶುಗರ್ ಸಕ್ಕರೆ ಕಂಪನಿ ನಿಯಮಿತ ಅಧ್ಯಕ್ಷ ಸಿ.ಡಿ.ಗಂಗಾಧರ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್ ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಮುಖಂಡರುಗಳು ಉಪಸ್ಥಿತರಿದ್ದರು.