Mysore
23
broken clouds

Social Media

ಶನಿವಾರ, 28 ಫೆಬ್ರವರಿ 2026
Light
Dark

ಟಿಪ್ಪರ್ ಹರಿದು ರೈತ ಸಾವು; ಪರಿಹಾರಕ್ಕೆ ಆಗ್ರಹಿಸಿ ಮೃತ ಸಂಬಂಧಿಕರ ಪ್ರತಿಭಟನೆ

ಭಾರತೀನಗರ: ರಸ್ತೆ ಕಾಮಗಾರಿಗೆ ಜಲ್ಲಿ ಸಾಗಿಸುತ್ತಿದ್ದ ಟಿಪ್ಪರ್ ಹರಿದು ರೈತ ಸಂಘದ ಕಾರ್ಯಕರ್ತ ಮೃತಪಟ್ಟಿರುವ ಘಟನೆ ಕರಡಕೆರೆ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಗ್ರಾಮದ ರೈತ ನಿಂಗೇಗೌಡ (೫೫) ಮೃತ ದುರ್ದೈವಿ. ಮಂಗಳವಾರ ಬೆಳಿಗ್ಗೆ ೧೦ರ ಸಮಯದಲ್ಲಿ ನಿಂಗೇಗೌಡ ಜಾನುವಾರುಗಳಿಗೆ ತನ್ನ ಟಿವಿಎಸ್ ಮೊಪೆಡ್‌ನಲ್ಲಿ ಮೇವನ್ನು ತೆಗೆದುಕೊಂಡು ಬಂದು ಮನೆಯ ಬಳಿ ಮೊಪೆಡ್ ನಿಲ್ಲಿಸಿ, ಮೇವು ಇಳಿಸುವ ಸಂದರ್ಭ ರಸ್ತೆ ಕಾಮಗಾರಿಗೆ ಜಲ್ಲಿ ಸಾಗಿಸುತ್ತಿದ್ದ ಟಿಪ್ಪರ್ ಜಲ್ಲಿಯನ್ನು ಕೆಳಗೆ ಸುರಿಯಲು ಹಿಂಬದಿಗೆ ಚಲಿಸುವಾಗ ಚಾಲಕನ ನಿರ್ಲಕ್ಷ್ಯದಿಂದಾಗಿ ರೈತ ನಿಂಗೇಗೌಡನ ಮೇಲೆ ಹರಿದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯ ಅಧಿಕಾರಿ ಆನಂದ್ ಅವರು ರಜೆಯಲ್ಲಿದ್ದ ಕಾರಣ ಮದ್ದೂರು ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳಾದ ವೆಂಕಟೇಗೌಡ ಹಾಗೂ ಶಶಿಕುಮಾರ್ ಅವರು ಸ್ಥಳಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದರು.

ಪರಿಹಾರಕ್ಕಾಗಿ ಪ್ರತಿಭಟನೆ:
ಈ ಅವಘಡಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣವಾಗಿದ್ದು, ರಸ್ತೆ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರು ಹಾಗೂ ಟಿಪ್ಪರ್ ಮಾಲೀಕ ಸ್ಥಳಕ್ಕೆ ಆಗಮಿಸಿ, ರೈತ ನಿಂಗೇಗೌಡ ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ಅಲ್ಲಿಯವರೆಗೂ ಮೃತ ನಿಂಗೇಗೌಡರ ದೇಹವನ್ನು ಸ್ಥಳದಿಂದ ತೆರವುಗೊಳಿಸುವುದಿಲ್ಲ ಎಂದು ಗ್ರಾಮಸ್ಥರು ಪಟ್ಟು ಹಿಡಿದರು. ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳು ಗುತ್ತಿಗೆದಾರರು ಹಾಗೂ ಟಿಪ್ಪರ್ ಮಾಲೀಕರಿಗೆ ದೂರವಾಣಿ ಮೂಲಕ ಸ್ಥಳಕ್ಕೆ ಆಗಮಿಸುವಂತೆ ತಿಳಿಸಿದರು.

ನಂತರ ಸ್ಥಳಕ್ಕೆ ಆಗಮಿಸಿದ ಗುತ್ತಿಗೆ ಪಡೆದಿದ್ದ ಎಸ್‌ಸಿಸಿ ಕಂಪನಿ ಅಧಿಕಾರಿ ಮೃತನ ಕುಟುಂಬಕ್ಕೆ ತಾತ್ಕಾಲಿಕವಾಗಿ ೨.೫ ಲಕ್ಷ ಪರಿಹಾರ ನೀಡುವುದಾಗಿ ಮತ್ತು ಉಳಿಕೆ ಹಣವನ್ನು ವಿಮೆ ಮೂಲಕ ಕೊಡಿಸಿಕೊಡುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಹಿಂಪಡೆದರು. ನಂತರ ಮೃತ ದೇಹವನ್ನು ಸ್ಥಳದಿಂದ ತೆರವುಗೊಳಿಸಿ ಭಾರತೀನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶವ ಪರೀಕ್ಷೆ ನಡೆಸಿ, ವಾರಸುದಾರರಿಗೆ ಒಪ್ಪಿಸಲಾಯಿತು.
ಈ ಸಂಬಂಧ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

Tags:
error: Content is protected !!