Mysore
16
scattered clouds

Social Media

ಶನಿವಾರ, 20 ಡಿಸೆಂಬರ್ 2025
Light
Dark

ಕಾವೇರಿಗಾಗಿ ಕೆಆರ್‌ಎಸ್‌ನಲ್ಲಿ ಮೇಣದಬತ್ತಿ ಮೆರವಣಿಗೆ ನಡೆಸಿದ ರೈತರು

ಮಂಡ್ಯ : ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್.ನಲ್ಲಿ ಕಳೆದ ಎರಡು ದಿನಗಳಿಂದ ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ರೈತರು ಶುಕ್ರವಾರ ಸಂಜೆ ಮೇಣದ ಬತ್ತಿ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು.

ಧರಣಿ ಸ್ಥಳದಿಂದ ಮೆರವಣಿಗೆ ಹೊರಟ ರೈತರು, ಕಾವೇರಿ ಮಾತೆ ಪ್ರತಿಮೆಗೆ ಪೂಜೆ ಸಲ್ಲಿಸಲು ನಿರ್ಧರಿಸಿ ಒಳಗಡೆ ಬಿಡುವಂತೆ ಪೊಲೀಸರನ್ನು ನಿವೇದಿಸಿದರು. ಇದಕ್ಕೆ ಪೊಲೀಸರು ಅನುಮತಿ ನೀಡದಿದ್ದಾಗ ಕಾವೇರಿ ನೀರಾವರಿ ನಿಗಮದ ಸೂಪರಿಂಟೆಂಡೆಂಟ್ ರಘುರಾಮ್ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಲು ಅನುಮತಿ ನೀಡುವಂತೆ ಕೋರಿದರಾದರೂ ಒಳ ಪ್ರವೇಶಕ್ಕೆ ಅನುಮತಿ ನೀಡಲಿಲ್ಲ.
ಈ ಸಂದರ್ಭ ಮಾತನಾಡಿದ ಜಿಲ್ಲಾ ರೈತ ಸಂಘದ ಅಧ್ಯಕ್ಷ ಎ.ಎಲ್. ಕೆಂಪೂಗೌಡ ಅವರು, ನಾವು ಮಳೆಗಾಗಿ ಪ್ರಾರ್ಥಿಸಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಲು ಅವಕಾಶ ನೀಡುವಂತೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳನ್ನು ಕೇಳಿದೆವು. ಆದರೆ, ಅವರು ಅನುಮತಿ ನೀಡಿಲ್ಲ. ನಾವೇನು ಉಗ್ರಗಾಮಿಗಳಾ ಎಂದು ಪ್ರಶ್ನಿಸಿದರು.

ಸರ್ಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದಂತೆ ದೀರ್ಘಾವಧಿ ಬೆಳೆ ಹಾಕದೆ ಭತ್ತವನ್ನು ನಾಟಿ ಮಾಡಿದ್ದೇವೆ. ಹೇಳಿದಂತೆ ನೀರು ಕೊಡಬೇಕು, ಇಲ್ಲದಿದ್ದರೆ ಸೂಕ್ತ ಪರಿಹಾರ ಘೋಷಣೆ ಮಾಡಬೇಕೆಂದು ಆಗ್ರಹಿಸಿದರು.

ಮೆರವಣಿಗೆಯಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ, ರೈತ ಮುಖಂಡರಾದ ಪ್ರಸನ್ನ ಎನ್.ಗೌಡ, ನಾಗರಾಜು, ಮನುಸೋಮಯ್ಯ, ಸುಜಯ್ ಬೋಪಯ್ಯ, ಜಗದೀಶ್, ಎಚ್.ಎಲ್. ಪ್ರಕಾಶ್, ದಯಾನಂದ, ನಾಗರಾಜು, ಮಂಜುನಾಥ್, ಪ್ರಿಯಾ ರಮೇಶ್ ಸೇರಿದಂತೆ ನೂರಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!