Mysore
19
few clouds
Light
Dark

ಹೆಣ್ಣು ಭ್ರೂಣ ಹತ್ಯೆ ಪ್ರಕರಣ:12 ಆರೋಪಿಗಳ ಬಂಧನ

ಮಂಡ್ಯ: ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳ ಆರೋಪಿಗಳನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸ್ ವಿಶೇಷ ತಂಡ ಯಶಸ್ವಿಯಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳಾದ ಅಭಿಷೇಕ್,ವಿರೇಶ್‌ ಸೇರಿದಂತೆ ಪುಟ್ಟರಾಜು,ಕುಮಾರ್, ಶಾರದಮ್ಮ, ದಾಸೇಗೌಡ,ಲ್ಯಾಬ್ ಸತ್ಯ, lಮೀನಾ, ಮಲ್ಲಿಕಾರ್ಜುನ್, ಸೋಮಶೇಖರ್, ರತ್ನಮ್ಮ, ಪ್ರೇಮ ಆಲಿಯಾಸ್ ಪಾರ್ವತಿರವರನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದರು.

ಹೆಣ್ಣು ಭ್ರೂಣವನ್ನು ಅಕ್ರಮವಾಗಿ ಸ್ಕ್ಯಾನಿಂಗ್ ಮೂಲಕ ಪತ್ತೆ ಮಾಡುವುದು ಆಶಾ ಕಾರ್ಯಕರ್ತರು,ಖಾಸಗಿ ಲ್ಯಾಬ್ ಟೆಕ್ನಿಷಿಯನ್ಸ್‌ಗಳ ಮೂಲಕ ಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆ ಮಾಡುತ್ತಿರುವ ಬಗ್ಗೆ ಹಾಗೂ ಸಹಕರಿಸುತ್ತಿದ್ದವರ ಮೇಲೆ ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದವು.

ಪಾಂಡವಪುರದ ಆರೋಗ್ಯ ಇಲಾಖೆ ವಸತಿಗೃಹದಲ್ಲಿ ಗ್ರೂಪ್ ಡಿ ಮಹಿಳಾ ನೌಕರರಾದ ಅಶ್ವಿನಿರವರ ಮನೆಯಲ್ಲಿ ನಡೆದಿದ್ದ ಪ್ರಕರಣದಲ್ಲಿ 19 ಆರೋಪಿಗಳ ಪೈಕಿ 12 ಆರೋಪಿಗಳನ್ನು ಬಂಧಿಸಲಾಗಿತ್ತು. ಇನ್ನುಳಿದ ಏಳು ಆರೋಪಿಗಳು ತಲೆಮರೆಸಿಕೊಂಡಿದ್ದರು, ಮೇಲುಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರಕರಣದಲ್ಲಿ ಏಳು ಆರೋಪಿಗಳ ಪೈಕಿ ಮೂವರನ್ನು ಬಂಧಿಸಲಾಗಿತ್ತು ನಾಲ್ವರು ತಲೆಮರಸಿಕೊಂಡಿದ್ದರು. ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೆಣ್ಣು ಭ್ರೂಣ ತಪಾಸಣೆ ಮಾಡಲು ತೆರಳುತ್ತಿದ್ದಾಗ ದಾಳಿ ಮಾಡಿದ್ದ ಪ್ರಕರಣದಲ್ಲಿ ನಾಲ್ವರು ಆರೋಪಿಗಳ ಪೈಕಿ ಮೂವರನ್ನು ಬಂಧಿಸಲಾಗಿತ್ತು ಮತ್ತೋರ್ವ ನಾಪತ್ತೆಯಾಗಿ ದ್ದನು,ಅದೇ ರೀತಿ ಮೈಸೂರು ನಗರದ ಉದಯಗಿರಿ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರಕರಣ ಹಾಗೂ ಬೆಂಗಳೂರು ನಗರದ ಬೈಯಪ್ಪನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು,
ಈ ಎಲ್ಲಾ ಪ್ರಕರಣಗಳಲ್ಲಿ ತಲೆ ಮರೆಸಿಕೊಂಡ ಆರೋಪಿಗಳ ಪತ್ತೆ ಸಂಬಂಧ ಪೊಲೀಸರ ವಿಶೇಷ ತಂಡವನ್ನು ರಚನೆ ಮಾಡಲಾಗಿತ್ತು. ತಂಡ ಕಾರ್ಯಾಚರಣೆ ನಡೆಸಿ ಪ್ರಮುಖ ಆರೋಪಿಗಳಾದ ಅಭಿಷೇಕ್ ಮತ್ತು ವಿರೇಶ್‌ ರನ್ನು ಬಂಧಿಸಿ ವಿಚಾರಣೆ ನಡೆಸಿದ್ದರಿಂದ ಪ್ರಕರಣದಲ್ಲಿ ಭಾಗಿಯಾಗಿರುವ ಇತರ 10 ಆರೋಪಿಗಳಾದ ಪುಟ್ಟರಾಜು,ಕುಮಾರ್,ಶಾರದಮ್ಮ, ದಾಸೇಗೌಡ, ಲ್ಯಾಬ್ ಸತ್ಯ, ಮೀನಾ, ಮಲ್ಲಿಕಾರ್ಜುನ್, ಸೋಮಶೇಖರ್, ರತ್ನಮ್ಮ, ಪ್ರೇಮ ಆಲಿಯಾಸ್ ಪಾರ್ವತಿರನ್ನ ಬಂಧಿಸಲಾಗಿದೆ ಎಂದು ತಿಳಿಸಿದರು.

ಬಂಧಿತರಿಂದ ಅಕ್ರಮವಾಗಿ ಕೃತ್ಯಕ್ಕೆ ಉಪಯೋಗಿಸಿದ ಎರಡು ಸ್ಕ್ಯಾನಿಂಗ್ ಉಪಕರಣ ಮಾರುತಿ ಎಸ್-ಕ್ರಾಸ್,ಮಾರುತಿ ಸಿಲಾರಿಯೋ ಮತ್ತು ಮಾರುತಿ ಓಮ್ಮಿ ಕಾರು ಹಾಗೂ ಮೂರು ಮೊಬೈಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಅದೇ ರೀತಿ ಪ್ರಕರಣಗಳಲ್ಲಿ ಭಾಗಿಯಾಗಿರುವ ಕೆಲವರು ತಲೆ ಮರೆಸಿಕೊಂಡಿದ್ದು, ಇವರ ಪತ್ತೆ ಕಾರ್ಯಾಚರಣೆ ಮುಂದುವರೆದಿದೆ ಎಂದರು.

ಪತ್ತೆ ಕಾರ್ಯಾಚರಣೆಯಲ್ಲಿ ಭಾಗಿಯಾದ ಪೊಲೀಸ್ ಅಧಿಕಾರಿಗಳ ಕಾರ್ಯವನ್ನು ಶ್ಲಾಘಿಸಿ ತಂಡಕ್ಕೆ ಇಲಾಖೆಯಿಂದ ಪ್ರಶಂಸನಾ ಪತ್ರ ಹಾಗೂ ನಗದು ಬಹುಮಾನ ಘೋಷಣೆ ಮಾಡಲಾಗಿದೆ ಎಂದು ಹೇಳಿದರು.