ಮಂಡ್ಯ: ಇಂದಿನಿಂದ ನಾಲ್ಕು ದಿನಗಳ ಕಾಲ ಮಂಡ್ಯದ ಶ್ರೀರಂಗಪಟ್ಟಣ ದಸರಾ ಉತ್ಸವ ನಡೆಯಲಿದೆ.
ಇಂದಿನ ನಾಲ್ಕು ದಿನಗಳ ಕಾಲ ನಡೆಯಲಿರುವ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ನಟ, ನಿರ್ದೇಶಕ ಟಿ.ಎಸ್.ನಾಗಾಭರಣ ಅವರು ಮಧ್ಯಾಹ್ನ 2.30ರಿಂದ 3 ಗಂಟೆಗೆ ಸಲ್ಲುವ ಶುಭ ಲಗ್ನದಲ್ಲಿ ಚಾಲನೆ ನೀಡಲಿದ್ದಾರೆ.
ಶ್ರೀರಂಗಪಟ್ಟಣದ ಕಿರಂಗೂರು ಬಳಿ ಬನ್ನಿಮಂಟಪದಲ್ಲಿ ಪೂಜಾ ಕೈಂಕರ್ಯ ನೆರವೇರಿಸುವ ಮೂಲಕ ಉತ್ಸವಕ್ಕೆ ಚಾಲನೆ ನೀಡಲಾಗುತ್ತದೆ.
ಇದನ್ನು ಓದಿ : ಶ್ರೀರಂಗಪಟ್ಟಣ ದಸರಾಗೆ ಮಹೇಂದ್ರ, ರೂಪ ಹಾಗೂ ಕಾವೇರಿ ಆನೆಗಳು ಆಯ್ಕೆ: ಡಿಸಿಎಫ್ ಪ್ರಭುಗೌಡ
ಇದಾದ ಬಳಿಕ ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮೂಲಕ ಜಂಬೂಸವಾರಿಗೂ ಚಾಲನೆ ನೀಡಲಾಗುತ್ತದೆ. ಶ್ರೀರಂಗಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಜಂಬೂಸವಾರಿ ಮೆರವಣಿಗೆ ಸಾಗಲಿದೆ.
ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಿರುವ ಮಹೇಂದ್ರ ಆನೆ ಅಂಬಾರು ಹೊತ್ತು ಹೆಜ್ಜೆ ಹಾಕಲಿದ್ದಾನೆ. ಬನ್ನಿಮಂಟಪದಿಂದ ಶುರುವಾಗಿ ಶ್ರೀರಂಗನಾಥ ದೇವಾಲಯದವರೆಗೂ ಮೆರವಣಿಗೆ ಸಾಗಲಿದೆ.
ಜಂಬೂಸವಾರಿಗೆ ವಿವಿಧ ಕಲಾತಂಡಗಳು ಸಾಂಸ್ಕೃತಿಕ ವೈಭವದ ಮೆರುಗು ನೀಡಲಿವೆ. ಬ್ಯಾಂಡ್, ಪೂಜಾ ಕುಣಿತ, ವೀರಗಾಸೆ, ನಗಾರಿ, ಜಡೆ ಕೋಲಾಟ, ಗಾರುಡಿ ಗೊಂಬೆ, ತಮಟೆ, ದೊಣ್ಣೆವರಸೆ, ಡೊಳ್ಳು ಕುಣಿತ, ಕಂಸಾಳೆ, ಕೊಂಬು-ಕಹಳೆ ಹಾಗೂ ಸ್ತಬ್ಧಚಿತ್ರಗಳ ಮೆರವಣಿಗೆ ನಡೆಯಲಿದೆ.





