ಮಂಡ್ಯ: ತಾಲ್ಲೂಕಿನ ಆಲಕೆರೆ ಗ್ರಾಮದಲ್ಲಿ ಇಂದು ಶ್ರೀ ವೀರಭದ್ರೇಶ್ವರ ಅಗ್ನಿ ಕೊಂಡೋತ್ಸವದ ನಿಮಿತ್ತ ಪೂರ್ವಭಾವಿ ಸಭೆ ನಡೆಸುವ ಸಂದರ್ಭದಲ್ಲಿ ಶಾಸಕ ರವಿಕುಮಾರ್ ಅವರಿಗೆ ವಿದ್ಯಾರ್ಥಿನಿಯೋರ್ವಳು ಶಾಲೆಯಲ್ಲಿ ಇರುವ ಸಮಸ್ಯೆಗಳ ಬಗ್ಗೆ ಗಮನಕ್ಕೆ ತಂದಿದ್ದಾಳೆ.
ಆಲಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ನಮನ ಎಂಬ ವಿದ್ಯಾರ್ಥಿನಿಯು ನಮಮ್ ಶಾಲೆಯಲ್ಲಿ ಶಿಕ್ಷಕರ ಕೊರತೆಯಿದೆ. ಹಾಗಾಗಿ ಸರಿಯಾದ ಸಮಯಕ್ಕೆ ಪಾಠ-ಪ್ರವಚನಗಳು ನಡೆಯುತ್ತಿಲ್ಲ. ಹೀಗಾಗಿ ಖಾಲಿಯಿರುವ ಶಿಕ್ಷಕರ ಹುದ್ದೆಗೆ ಹೊಸ ಶಿಕ್ಷಕರನ್ನು ನಿಯೋಜಿಸುವಂತೆ ಮನವಿ ಮಾಡಿದ್ದಾಳೆ. ಇದರ ಜೊತೆಗೆ ಶಾಲೆಯ ಕೊಠಡಿ ಕೂಡ ಶಿಥಿಲಗೊಂಡಿದೆ. ಆದ್ದರಿಂದ ನಾವು ಭಯದಲ್ಲೇ ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಶಿಥಿಲಗೊಂಡಿರುವ ಕಟ್ಟಡವನ್ನು ಸರಿಪಡಿಸಿ ಎಂದು ಶಾಸಕರ ಗಮನಕ್ಕೆ ತಂದರು. ಈ ವೇಳೆ ಶಾಸಕ ರವಿಕುಮಾರ್ ಅವರು ಕ್ಷಣದಲ್ಲೇ ಶಾಸಕರ ಅನುದಾನದಲ್ಲಿ 5 ಲಕ್ಷ ಅನುದಾನವನ್ನು ಮಂಜೂರು ಮಾಡಿ ಶಾಲೆಗೆ ಶಿಕ್ಷಕರನ್ನು ನಿಯೋಜಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.





