ಕೆ.ಆರ್ ಪೇಟೆ: ಹಾಸನದ ಅಶ್ಲೀಲ ವಿಡಿಯೋ ಪ್ರಕರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಶುಕ್ರವಾರ ಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.
ಶಾಸಕ ಹೆಚ್.ಟಿ ಮಂಜು ಹಾಗೂ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಿ.ರಮೇಶ್ ನೇತೃತ್ವದಲ್ಲಿ ಪ್ರವಾಸಿ ಮಂದಿರ ವೃತ್ತದಲ್ಲಿ ಜಮಾವಣೆಗೊಂಡ ನೂರಾರು ಜೆಡಿಎಸ್ ಕಾರ್ಯಕರ್ತರು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ವಿರುದ್ಧ ಧಿಕ್ಕಾರ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಅಶ್ಲೀಲ ವಿಡಿಯೋಗಳನ್ನು ವ್ಯವಸ್ಥಿತವಾಗಿ ಹಂಚಿಕೆ ಮಾಡುವ ಮೂಲಕ ಮಹಿಳೆಯರು ಮಾನ ಹರಾಜು ಹಾಕಿದ್ದಾರೆಂದು ಜೆಡಿಎಸ್ ಕಾರ್ಯಕರ್ತರು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮತ್ತು ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡರ ಪ್ರತಿಕೃತಿ ದಹಿಸಿದರು.
ಈ ವೇಳೆ ಮಾತನಾಡಿದ ಶಾಸಕ ಹೆಚ್.ಟಿ ಮಂಜು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯವನ್ನು ಜೆಡಿಎಸ್ ಪಕ್ಷ ಬೆಂಬಲಿಸುವುದಿಲ್ಲ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ಆದರೆ ಆಶ್ಲೀಲ ವಿಡಿಯೋಗಳ ಪೆನ್ಡ್ರೈವ್ ಗಳನ್ನು ವ್ಯವಸ್ಥಿತವಾಗಿ ಹಂಚಿಕೆ ಮಾಡಿ ರಾಜ್ಯದ ಮಹಿಳೆಯರ ಮಾನವನ್ನು ದೇಶ ವಿದೇಶಗಳಲ್ಲಿ ಹರಾಜು ಹಾಕಿದವರಿಗೂ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.

ಮಂಡ್ಯ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಿ.ರಮೇಶ್, ತಾಲೂಕು ಅಧ್ಯಕ್ಷ ಎ.ಎನ್ ಜಾನಕೀರಾಂ, ಮನ್ಮುಲ್ ನಿರ್ದೇಶಕ ಡಾಲು ರವಿ, ಮಾಜಿ ಅಧ್ಯಕ್ಷ ಎಂ.ಬಿ ಹರೀಶ್ ಸೇರಿದಂತೆ ನೂರಾರು ಜೆಡಿಎಸ್ ಕಾರ್ಯಕರ್ತರು ಇದ್ದರು.





