ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಡಿಸೆಂಬರ್.20ರಿಂದ 22ರವರೆಗೆ 87ನೇ ಆಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಇಂದು ʼಕನ್ನಡಕ್ಕಾಗಿ ಓಡುʼ ಎಂಬ ಘೋಷಣೆ ಮ್ಯಾರಥಾನ್ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಸುಮಾರು 10,000ಕ್ಕೂ ಅಧಿಕ ಮ್ಯಾರಥಾನ್ ಅಥ್ಲೀಟ್ಗಳ ಜೊತೆ ಇನ್ನಿತರರು ಪಾಲ್ಗೊಂಡಿದ್ದರು. ಮಂಡ್ಯ ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಿಂದ ಸ್ಯಾಂಜೋ ಆಸ್ಪತ್ರೆಯವರೆಗೆ ಈ ಮ್ಯಾರಥಾನ್ ನಡೆಯಿತು.
ಶಾಸಕ ಪಿ. ರವಿಕುಮಾರ್ ಅವರ ನೇತೃತ್ವದಲ್ಲಿ ನಡೆದ ಮ್ಯಾರಥಾನ್ ಓಟದಲ್ಲಿ ಯುವಕರು, ಯುವತಿಯರು, ವಿದ್ಯಾರ್ಥಿಗಳು ಉತ್ಸಾಹದಿಂದ ಹೆಜ್ಜೆ ಹಾಕಿದರು.
ಚಿತ್ರನಟರಾದ ಡಾಲಿ ಧನಂಜಯ್, ನೀನಾಸಂ ಸತೀಶ್, ಸಪ್ತಮಿ ಗೌಡ, ಅವರು ಕೂಡ ಸ್ವಲ್ಪ ದೂರ ಓಡುವ ಮೂಲಕ ಕಾರ್ಯಕ್ರಮಕ್ಕೆ ಉತ್ಸಾಹ ತುಂಬಿದರು.
ಆದಿ ಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಗೌರಿ ಗದ್ದೆ ಆಶ್ರಮದ ವಿನಯ್ ಗುರೂಜಿ, ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯ ಮಧು ಜಿ ಮಾದೇಗೌಡ, ದಿನೇಶ್ ಗೂಳಿಗೌಡ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ, ಜಿಲ್ಲಾಧಿಕಾರಿ ಕುಮಾರ, ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್, ಎಡಿಜಿಪಿ ಅಲೋಕ್ ಕುಮಾರ್, ಐಜಿಪಿ ರವಿಕಾಂತೇಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಕಾರ್ಜುನ ಬಾಲದಂಡಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.