ಮಂಡ್ಯ: ಕೆ.ಆರ್.ಪೇಟೆ ತಾಲ್ಲೂಕು ಕತ್ತರಘಟ್ಟ ಗ್ರಾಮದ ದಲಿತ ಯುವಕ ಜಯಕುಮಾರ್ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿರುವ ಪೊಲೀಸ್ ಅಧಿಕಾರಿಗಳು ಹಾಗೂ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮಂಡ್ಯ ಜಿಲ್ಲಾ ಪ್ರಗತಿಪರ ಸಂಘಟನೆಗಳ ಮಹಾ ಒಕ್ಕೂಟ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಜಿಲ್ಲಾಧಿಕಾರಿ ಕಚೇರಿ ಸಮೀಪ ಆರಂಭಿಸಿದೆ.
ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ಬಿ.ಟಿ.ಲಲಿತಾನಾಯಕ್ ಅವರು, ಮೇ 17 ರಂದು ಜಯಕುಮಾರ್ ಅವರ ಸಾವಿನ ನಂತರ ಅವರ ಮಡದಿ, ನನ್ನ ಗಂಡನನ್ನು ಅನಿಲ್ ಕುಮಾರ್ ಎಂಬವರು ಕೊಲೆ ಮಾಡಿದ್ದಾರೆ ಎಂದು ದೂರು ನೀಡಿದ್ದರೂ, ಪೊಲೀಸ್ ಅಧಿಕಾರಿಗಳು ಆತ್ಮಹತ್ಯೆ ಎಂದು ಬದಲಾಯಿಸಿಕೊಂಡು ಪ್ರಕರಣದ ದಿಕ್ಕು ತಪ್ಪಿಸಿದ್ದಾರೆ. ಕರ್ತವ್ಯಲೋಪ ಎಸಗಿರುವ ಎಲ್ಲ ಪೊಲೀಸ್ ಅಧಿಕಾರಿಗಳನ್ನೂ ಅಮಾನತು ಮಾಡಬೇಕು. ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮವಹಿಸಲು ಜಿಲ್ಲಾಧಿಕಾರಿಗಳೂ ಮುಂದಾಗಿಲ್ಲ. ಆದಕಾರಣ ಡಿಐಜಿ ಬೋರಲಿಂಗಯ್ಯ ಅವರು ಸ್ಥಳಕ್ಕೆ ಆಗಮಿಸಬೇಕು. ಇಲ್ಲವಾದಲ್ಲಿ ಗೃಹ ಸಚಿವರು, ಮುಖ್ಯಮಂತ್ರಿ ಅವರ ಮೇಲೆ ಒತ್ತಡ ಹೇರುವುದಾಗಿ ತಿಳಿಸಿದರು.
ಕೆಎಸ್ಎಸ್ ಮುಖಂಡ ಎಚ್.ಎನ್. ನರಸಿಂಹಮೂರ್ತಿ, ದಸಂಸ ಕೃಷ್ಣ, ದ್ರಾವಿಡ ಕನ್ನಡಿಗರು ಅಭಿ ಒಕ್ಕಲಿಗ, ಎವಿಎಸ್ಎಸ್ನ ಬಾಲರಾಜು, ದ್ರಾವಿಡ ಕನ್ನಡಿಗರು ವಿದ್ಯಾಸಾಗರ, ಎಚ್.ಡಿ. ಜಯರಾಂ, ಕಣಿವೆ ಯೋಗೇಶ್ ಇತರರು ಧರಣಿಯಲ್ಲಿ ಭಾಗವಹಿಸಿದ್ದರು.