Mysore
23
broken clouds
Light
Dark

ನಾಡಪ್ರಭು ಕೆಂಪೇಗೌಡರ ಉತ್ತಮ ಆಡಳಿತ ಹಾಗೂ ಅಭಿವೃದ್ಧಿಯ ಚಿಂತನೆ ಎಲ್ಲರಿಗೂ ಮಾದರಿ: ಎನ್. ಚೆಲುವರಾಯಸ್ವಾಮಿ

ಮಂಡ್ಯ: ನಾಡಪ್ರಭು ಕೆಂಪೇಗೌಡರ ಉತ್ತಮ ಆಡಳಿತ ಹಾಗೂ ಅಭಿವೃದ್ಧಿಯ ಚಿಂತನೆಯಿಂದಾಗಿ ಬೆಂಗಳೂರು ಮಹಾನಗರವು ಅಚ್ಚುಕಟ್ಟಾಗಿ ನಿರ್ಮಾಣವಾಗಿದೆ. ಅವರ ಉತ್ತಮ ಆಡಳಿತ ಹಾಗೂ ಅಭಿವೃದ್ಧಿಯ ಚಿಂತನೆ ಎಲ್ಲರಿಗೂ ಮಾದರಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚೆಲುವರಾಯಸ್ವಾಮಿ ತಿಳಿಸಿದರು.

ಅವರು ಇಂದು(ಜೂ.30) ಮಂಡ್ಯ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆಯ ಸಂಯುಕ್ತಾಶ್ರಯದಲ್ಲಿ ಅಂಬೇಡ್ಕರ್ ಭವನದಲ್ಲಿ ನಡೆದ ಶ್ರೀ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಕೆಂಪೇಗೌಡರ ಪ್ರತಿಮೆಗೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು.

ಪ್ರತಿ ವರ್ಷವೂ ಸರ್ಕಾರದಿಂದ ವಿವಿಧ ಜಯಂತಿಯನ್ನು ಆಚರಿಸುತ್ತಿದ್ದೂ, ನಮ್ಮ ನಾಡಿನ ಅಭಿವೃದ್ಧಿಗೆ ಶ್ರಮಿಸಿದ ವಿವಿಧ ಮಹನೀಯರು ನೀಡಿದ ಕೊಡುಗೆಗೆ ಗೌರವ ಸಲ್ಲಿಸಿ ಮುಂದಿನ ಪೀಳಿಗೆಗೆ ತಿಳಿಸುವುದು ಜಯಂತಿ ಆಚರಣೆಯ ಉದ್ದೇಶವಾಗಿದೆ ಎಂದರು.

ಬೆಂಗಳೂರು ನಗರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುತ್ತಿದ್ದೂ, ಇದಕ್ಕೆ ಕಾರಣ ಕೆಂಪೇಗೌಡರವರ ದೂರದೃಷ್ಟಿ ಹಾಗೂ ರೂಪಿಸಿದ ಯೋಜನೆಗಳು, ನಾಡಪ್ರಭು ಕೆಂಪೇಗೌಡರು ತಮ್ಮ ಆಳ್ವಿಕೆಯ ಅವಧಿಯಲ್ಲಿ ವಿಜಯನಗರ ಸಾಮ್ರಾಜ್ಯದ ಆಳ್ವಿಕೆಯನ್ನು ನೋಡಿ ಪ್ರಭಾವಿತರಾಗಿ, ಹೆಚ್ಚಿನ ಅಭಿವೃದ್ಧಿ ಕಾರ್ಯ ಮಾಡಬೇಕು ಎಂದು ಪಣತೊಟ್ಟು ಬೆಂಗಳೂರು ನಗರವನ್ನು ನಿರ್ಮಿಸಿದರು. ಅವರ ದೃಷ್ಟಿಕೋನ ಎಲ್ಲಾ ವರ್ಗದ ಜನರಿಗೆ ಒಳಿತು ಹಾಗೂ ಅನುಕೂಲವಾಕರವಾಗಿತ್ತು. ಬೆಂಗಳೂರಿನಲ್ಲಿ ಸಮೃದ್ಧಿಯಾಗಿ ಕೆರೆ ಕಟ್ಟೆಗಳ ನಿರ್ಮಾಣದ ಜೊತೆಗೆ ವ್ಯಾಪಾರಕ್ಕೆ ಉತ್ತಮ ಅವಕಾಶ ಕಲ್ಪಿಸಿದ್ದಾರೆ. ನೂರಾರು ವರ್ಷಗಳ ಕಾಲ ಜನರಿಗೆ ಉಪಯೋಗವಾಗುವಂತೆ ಶ್ರಮಿಸಿದ್ದಾರೆ ಎಂದು ಹೇಳಿದರು.

ಪ್ರತಿಯೊಬ್ಬರಲ್ಲೂ ನಮ್ಮ ದೇಶ, ನಮ್ಮ ನಾಡು ಎಂಬ ಮನೋಭಾವನೆ ಬೆಳೆಯಬೇಕು. ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರ ಕೊಡುಗೆ ಇರಬೇಕು. ಸಮಾಜಮುಖಿ ಕೆಲಸ ಮಾಡುವವರನ್ನು ಪ್ರೋತ್ಸಾಹಿಸಿ ಅವರೊಂದಿಗೆ ಕೈ ಜೋಡಿಸಿ ಎಂದರು.


ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಮಾಜಸೇವೆ/ಸಂಘಟನೆಯ ವಿಭಾಗ- ಜ್ಯೋತಿ ನಾಗಣ್ಣಗೌಡ, ರೈತ ಚಳುವಳಿ ನಾಯಕರಾದ- ಎ.ಎಮ್. ಕೆಂಪುಗೌಡ, ಸಮಾಜ ಸೇವೆ/ಯುವ ಸಂಘಟನೆಯ- ತಗ್ಗಳ್ಳಿ ವೆಂಕಟೇಶ್, ರಕ್ತದಾನ ಶಿಬಿರ ಸಂಘಟನೆ- ಎನ್ ಕೆ ಯುವ ಬ್ರಿಗೇಡ್, ಕ್ರೀಡಾ ಕ್ಷೇತ್ರ- ಅರವಿಂದ್ ಎ ಅವರಿಗೆ ಸನ್ಮಾನ ಮಾಡಲಾಯಿತು. ತದನಂತರ ಜಿಲ್ಲಾ ಮಟ್ಟದ ಕೆಂಪೇಗೌಡ ಜಯಂತಿ ಆಚರಣೆ ಅಂಗವಾಗಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು.

ಪ್ರೌಢಶಾಲಾ ವಿಭಾಗದಲ್ಲಿ ಪ್ರಥಮ ಬಹುಮಾನ-ಮದ್ದೂರು ತಾಲೂಕು ಪೂರ್ಣ ಪ್ರಜ್ಞಾ ಕಾನ್ವೆಂಟ್ ಶಾಲೆಯ ಲಿಖಿತಾರಾಜು, ದ್ವಿತೀಯ ಬಹುಮಾನ-ಪಾಂಡವಪುರ ತಾಲೂಕು ಎಲ್ ಕೆ ಆರ್ ಸಿಬಿಎಸ್ಸಿ ಶಾಲೆಯ ಪ್ರಜ್ಞಾ, ತೃತೀಯ ಬಹುಮಾನ- ಮಂಡ್ಯ ಉತ್ತರ ವಲಯದ ದೊಡ್ಡಗರುಡನಹಳ್ಳಿ ಸರ್ಕಾರಿ ಪ್ರೌಢಶಾಲೆ ಆಶಾ ಅವರಿಗೆ ಬಹುಮಾನ ವಿತರಿಸಲಾಯಿತು.

ಪದವಿ ಪೂರ್ವ ಕಾಲೇಜು ವಿಭಾಗದಲ್ಲಿ ಪ್ರಥಮ ಬಹುಮಾನ- ಶ್ರೀರಂಗಪಟ್ಟಣ ತಾಲೂಕು ಅರಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದೀಪಿಕಾ ಜಿ.ಕೆ, ದ್ವಿತೀಯ ಬಹುಮಾನ- ಮದ್ದೂರು ತಾಲೂಕು ಶಿವಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಿಶನ್ ಸಿ.ಎನ್ ಅವರಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಡಾ ಅಧ್ಯಕ್ಷ ನಹೀಮ್, ಜಿಲ್ಲಾಧಿಕಾರಿ ಡಾ ಕುಮಾರ, ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಕ್ ತನ್ವಿರ್ ಆಸೀಫ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎನ್ ಯತೀಶ್, ಅಪರ ಜಿಲ್ಲಾಧಿಕಾರಿ ಡಾ. ಹೆಚ್. ಎಲ್. ನಾಗರಾಜು, ಉಪವಿಭಾಗಾಧಿಕಾರಿ ಶಿವಮೂರ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎನ್. ಉದಯಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷೆ ಮೀರಾಶಿವಲಿಂಗಯ್ಯ ಅವರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು