ಕೆ.ಆರ್. ಪೇಟೆ: ಇಲ್ಲಿನ ನಗರ ಬಸ್ ನಿಲ್ದಾಣಕ್ಕೆ ರಾಜ್ಯಾ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ದಿಢೀರ್ ಭೇಟಿ ನೀಡಿ ಸ್ಥಳ ಹಾಗೂ ಮಹಿಳಾ ವಿಶ್ರಾಂತಿ ಕೊಠಡಿ ಪರಿಶೀಲನೆ ನಡೆಸಿದರು.
ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದ ಮಹಿಳಾ ಆಯೋಗದ ಅಧ್ಯಕ್ಷೆ, ಕೆ.ಆರ್.ಪೇಟೆ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಬಸ್ ನಿಲ್ದಾಣದಲ್ಲಿ ಬಸ್ ಕಾಯುತ್ತಿದ್ದ ಕಾಲೇಜು ವಿದ್ಯಾರ್ಥಿಗಳನ್ನು ಮಾತಾಡಿಸಿ ಬಸ್ ವ್ಯವಸ್ಥೆಯ ಬಗ್ಗೆ ವಿಚಾರಿಸಿದರು.
ಹಲವು ವಿದ್ಯಾರ್ಥಿನಿಯರು ತಮ್ಮ ಊರಿಗೆ ಸರಿಯಾಗಿ ಬಸ್ ಸಂಪರ್ಕ ಇಲ್ಲದಿರುವ ಕಾರಣ ವಿದ್ಯಾಭ್ಯಾಸಕ್ಕೆ ತೊಂದರೆ ಉಂಟಾಗುತ್ತಿದೆ, ನಮ್ಮ ಊರಿಗೆ ಸರಿಯಾಗಿ ಬಸ್ ಸಂಪರ್ಕ ಕಲ್ಪಿಸಿಕೊಡಿ ಎಂದು ಕೇಳಿಕೊಂಡರು, ಅನೇಕ ವಿದ್ಯಾರ್ಥಿಗಳು ಬಸ್ ವ್ಯವಸ್ಥೆ ಇದ್ದರೂ ಕೆಲವು ಕಡೆ ಬಸ್ ಚಾಲಕರು ವಾಹನ ನಿಲ್ಲಿಸುತ್ತಿಲ್ಲ ಎಂದರು. ತಕ್ಷಣ ಮಂಡ್ಯ ಕೆ.ಎಸ್.ಆರ್.ಟಿ.ಸಿ ಇಲಾಖೆಯ ಅಧಿಕಾರಿಗಳನ್ನು ಕರೆಸಿ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆ ಕಲ್ಪಿಸಿ ಎಂದು ಸೂಚಿಸಿದರು.
ಬಸ್ ನಿಲ್ದಾಣದಲ್ಲಿ ತಾಯಿ ಮಗುವಿನ ಕೊಠಡಿ ಇಲ್ಲದಿರುವುದನ್ನು ಕಂಡು ಪ್ರತಿ ಬಸ್ ನಿಲ್ದಾಣದಲ್ಲಿ ತಾಯಿ ಮಗುವಿನ ಕೊಠಡಿ ಇರಬೇಕು, ತಾಯಿ ಮಗುವಿನ ಕೊಠಡಿ ಏಕೆ ನಿರ್ಮಿಸಿಲ್ಲ ಎಂದು ಅಧಿಕಾರಿಗಳು ಪ್ರಶ್ನಿಸಿದರು.
ಮಹಿಳಾ ವಿಶ್ರಾಂತಿ ಕೊಠಡಿಗೆ ಭೇಟಿ ನೀಡಿ ಕೊಠಡಿಯ ಶುಚಿತ್ವ ಗಮನಿಸಿ, ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಿ ಎಂದು ಹೇಳಿದರು.
ನಂತರ ಶೌಚಾಲಯಕ್ಕೆ ಭೇಟಿ ನೀಡಿದರು, ಬಸ್ ನಿಲ್ದಾಣದಲ್ಲಿ ಶೌಚಾಲಯಕ್ಕೆ ಶುಲ್ಕ ವಸೂಲಿ ಮಾಡುತ್ತಿದ್ದಾರೆ ಮತ್ತು ಶೌಚಾಲಯದಲ್ಲಿ ಸರಿಯಾಗಿ ಸ್ವಚ್ಛತೆ ಕಾಪಾಡುವುದಿಲ್ಲ ಎಂದು ಸಾರ್ವಜನಿಕರು ದೂರಿದರು, ಸಂಬಂಧಪಟ್ಟ ಸ್ವಚ್ಚತಾ ಸಿಬ್ಬಂದಿಗೆ ಯಾವುದೇ ಕಾರಣಕ್ಕೂ ಮಾಹಿಳೆಯರಿಂದ ಹಣ ವಸೂಲಿ ಮಾಡಬಾರದು ಹಾಗೂ ಶೌಚಾಲಯಕ್ಕೆ ಸೂಕ್ತ ಬಾಗಿಲುಗಳ ವ್ಯವಸ್ಥೆ ಮತ್ತು ಸ್ವಚ್ಚತೆಯನ್ನು ಸರಿಯಾಗಿ ನಿರ್ವಹಣೆ ಮಾಡಿ ಎಂದು ಸೂಚಿಸಿದರು.