Mysore
24
overcast clouds

Social Media

ಬುಧವಾರ, 19 ಆಗಸ್ಟ್ 2026
Light
Dark

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ, ಕಾವೇರಿ ಕೊಳ್ಳದ ರೈತರಿಗೆ ಪ್ರಸಕ್ತ ಸಾಲಿನಲ್ಲಿ ಕೇವಲ 4 ಕಟ್ಟು ನೀರು ಮಾತ್ರ ಹರಿಸಲು ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಜಲಸಂಪನ್ಮೂಲ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಮುಂಗಾರು ಮಳೆ ಕೈಕೊಟ್ಟಿರುವುದರಿಂದ ಜಲಾಶಯಗಳಲ್ಲಿ ನೀರಿನ ಲಭ್ಯತೆ ನಿರೀಕ್ಷಿತ ಮಟ್ಟದಲ್ಲಿಲ್ಲ. ಈಗ ಹೆಚ್ಚಿನ ನೀರು ಬಿಡುಗಡೆ ಮಾಡಿದರೆ ಮುಂದಿನ ದಿನಗಳಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ತೀವ್ರ ಸಮಸ್ಯೆ ಎದುರಾಗುತ್ತದೆ. ಈ ಹಿನ್ನೆಲೆಯಲ್ಲಿ ಲಭ್ಯವಿರುವ ನೀರನ್ನು ವೈಜ್ಞಾನಿಕವಾಗಿ ಮತ್ತು ಆದ್ಯತೆಯ ಆಧಾರದ ಮೇಲೆ ಬಳಕೆ ಮಾಡುವ ಉದ್ದೇಶದಿಂದ 4 ಕಟ್ಟು ನೀರು ಹರಿಸಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದರು.

ಅರೆ ಖುಷ್ಕಿ ಬೆಳೆಗೆ ಆದ್ಯತೆ
ನೀರಿನ ಕೊರತೆಯನ್ನು ಪರಿಗಣಿಸಿ ರೈತರು ಈ ಹಂಗಾಮಿನಲ್ಲಿ ಹೆಚ್ಚು ನೀರು ಬೇಡುವ ಭತ್ತ, ಕಬ್ಬು ಬದಲಿಗೆ ಅರೆ ಖುಷ್ಕಿ ಬೆಳೆಗಳಿಗೆ ಆದ್ಯತೆ ನೀಡಬೇಕು ಎಂದು ಸಭೆ ಸೂಚಿಸಿತು. ಕಡಿಮೆ ನೀರಿನಲ್ಲಿ ಉತ್ತಮ ಇಳುವರಿ ನೀಡುವ ಬೆಳೆಗಳನ್ನು ಬೆಳೆಯುವ ಮೂಲಕ ಲಭ್ಯವಿರುವ ನೀರನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು. ಕೃಷಿ ಮತ್ತು ನೀರಾವರಿ ಇಲಾಖೆ ಅಧಿಕಾರಿಗಳು ರೈತರಿಗೆ ಸೂಕ್ತ ಬೆಳೆ ಪದ್ಧತಿ ಕುರಿತು ಮಾರ್ಗದರ್ಶನ ನೀಡಲಿದ್ದಾರೆ ಎಂದು ಸಚಿವರು ಹೇಳಿದರು.

ಕೆರೆ-ಕಟ್ಟೆ ತುಂಬಲು ನಿರ್ಧಾರ
ಕೇವಲ ಬೆಳೆಗಳಿಗೆ ಮಾತ್ರವಲ್ಲದೆ, ಕಾವೇರಿ ಕೊಳ್ಳದ ವ್ಯಾಪ್ತಿಯ ಕೆರೆ-ಕಟ್ಟೆಗಳನ್ನು ತುಂಬಿಸುವ ಮೂಲಕ ಅಂತರ್ಜಲ ಮಟ್ಟ ಹೆಚ್ಚಿಸಲು ಸಭೆ ಮಹತ್ವದ ನಿರ್ಧಾರ ಕೈಗೊಂಡಿತು. ಇದರಿಂದ ಮಳೆ ಕೊರತೆಯ ಸಂದರ್ಭದಲ್ಲಿ ರೈತರಿಗೆ ಪರ್ಯಾಯ ನೀರಿನ ಮೂಲ ಲಭ್ಯವಾಗುವುದರ ಜೊತೆಗೆ ಬೋರ್‌ವೆಲ್‌ಗಳ ಮೇಲಿನ ಒತ್ತಡ ಕಡಿಮೆಯಾಗಲಿದೆ ಎಂದು ಸಚಿವರು ಅಭಿಪ್ರಾಯಪಟ್ಟರು.

ರೈತರ ಸಹಕಾರಕ್ಕೆ ಮನವಿ
‘ಪ್ರಸ್ತುತ ಪರಿಸ್ಥಿತಿಯಲ್ಲಿ ನೀರಿನ ಪ್ರತಿಯೊಂದು ಹನಿಯನ್ನೂ ಜವಾಬ್ದಾರಿಯಿಂದ ಬಳಸಬೇಕು. ರೈತರ ಕೃಷಿಗೆ ನೀರು ಒದಗಿಸುವುದರ ಜೊತೆಗೆ ಕುಡಿಯುವ ನೀರಿನ ಭದ್ರತೆಯೂ ಸರ್ಕಾರದ ಆದ್ಯತೆಯಾಗಿದೆ. ಮುಂಗಾರು ಕೊರತೆಯಂತಹ ಪರಿಸ್ಥಿತಿಯಲ್ಲಿ ಸರ್ಕಾರದ ನಿರ್ಧಾರಕ್ಕೆ ರೈತರು ಸಹಕಾರ ನೀಡಬೇಕು. ಲಭ್ಯವಿರುವ 4 ಕಟ್ಟು ನೀರನ್ನು ಪರಿಣಾಮಕಾರಿಯಾಗಿ ಬಳಸಿ, ನೀರು ಉಳಿಸುವ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು‘ ಎಂದು ಸಚಿವ ಚಲುವರಾಯಸ್ವಾಮಿ ಮನವಿ ಮಾಡಿದರು.

ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ, ಕೃಷಿ ಸಚಿವ ನರೇಂದ್ರಸ್ವಾಮಿ, ಶಾಸಕರಾದ ಜಿ.ಟಿ. ದೇವೇಗೌಡ, ರಮೇಶ್ ಬಂಡಿಸಿದ್ದೇಗೌಡ, ರವಿಕುಮಾರ್ ಗಣಿಗ, ದರ್ಶನ್ ಪುಟ್ಟಣ್ಣಯ್ಯ, ಕೆ.ಆರ್. ಪೇಟೆ ಶಾಸಕ ಮಂಜು, ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್ ಮತ್ತು ಹಿರಿಯ ಅಧಿಕಾರಿಗಳು ಹಾಜರಿದ್ದರು.

 

Tags:
error: Content is protected !!