ಮಂಡ್ಯ

ಕುರುಬ ಸಮಾಜ ಒಟ್ಟಾಗಿ, ಸಮುದಾಯದ ನಾಯಕರನ್ನು ಉಳಿಸಿಕೊಳ್ಳಿ : ಯತೀಂದ್ರ ಸಿದ್ದರಾಮಯ್ಯ ಕರೆ

ಮಂಡ್ಯ : ಉನ್ನತ ಹುದ್ದೆ ಅಲಂಕರಿಸಿದ ಹಿಂದುಳಿದ ವರ್ಗದವರು ಸಣ್ಣ ತಪ್ಪು ಮಾಡಿದರೆ ಅದನ್ನು ದೊಡ್ಡದಾಗಿ ಬಿಂಬಿಸಿ, ಇಲ್ಲದ ಹಗರಣವನ್ನು ಸೃಷ್ಟಿಸಿ ಅವರನ್ನು ಅಧಿಕಾರದಿಂದ ಕೆಳಗಿಳಿಸುವ ಪ್ರಯತ್ನ ಮಾಡಲಾಗುತ್ತದೆ ಎಂದು ವಿಧಾನ ಪರಿಷತ್ ಶಾಸಕ ಯತೀಂದ್ರ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದರು.

ನಗರದ ಕನಕ ಭವನದಲ್ಲಿ ಜಿಲ್ಲಾ ಕುರುಬರ ಸಂಘದ ಸಹಯೋಗದಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜ ನಿಯಂತ್ರಿಸುವ ಉನ್ನತ ಸ್ಥಾನದಲ್ಲಿ ಎಲ್ಲಾ ಸಮುದಾಯಗಳಿಗೆ ಪ್ರಾತಿನಿಧ್ಯ ಸಿಗಬೇಕು. ಕಾಯಾಂಗ, ನ್ಯಾಯಾಂಗದಲ್ಲಿ ಪ್ರಬಲ ಸಮುದಾಯವರೇ ಇದ್ದಾರೆ. ಮಾಧ್ಯಮದಲ್ಲೂ ಮೇಲ್ವರ್ಗದವರೇ ಇದ್ದಾರೆ. ಉದ್ಯಮಿ, ಕೋಟ್ಯಽಪತಿ ಪಟ್ಟಿಯಲ್ಲಿ ಹಿಂದುಳಿದ ವರ್ಗದವರು ಇಲ್ಲ. ನಾವು ಅವರ ಸ್ಥಾನದಲ್ಲಿ ಕುಳಿತಾಗ ನಿಜವಾದ ಸಮಾನತೆ ಸಿಕ್ಕಂತಾಗುತ್ತದೆ. ಇದಕ್ಕಾಗಿ ನಾವು ಜಾಗೃತರಾಗಬೇಕು. ಇದಕ್ಕೆ ನಾವು ಶಿಕ್ಷಣ ಪಡೆದು ಶಿಕ್ಷಿತರಾಗಬೇಕು ಎಂದು ಹೇಳಿದರು.

ಕುರುಬ ಸಮಾಜ ಒಟ್ಟಾಗಬೇಕು
ರಾಜಕೀಯ ಶಕ್ತಿಯಿಲ್ಲದಿದ್ದರೆ ಕುರುಬ ಸಮುದಾಯ ಮುಂದೆ ಬರಲು ಸಾಧ್ಯವಿಲ್ಲ. ಇದಕ್ಕಾಗಿ ನಾವೆಲ್ಲ ಒಟ್ಟಾಗಿ ಸಮುದಾಯದ ನಾಯಕನ ಪರ ನಿಲ್ಲಬೇಕು. ಸಿದ್ದರಾಮಯ್ಯ ಪರ ನಿಂತ ಹಿಂದುಳಿದ ವರ್ಗದವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಹಿಂದುಳಿದ ವರ್ಗದ ಧ್ವನಿಯಾಗಿ ರಾಜಕೀಯ ಪದವಿ ಬೇಕು.ರಾಜಕೀಯ ಪದವಿ ಇದ್ದರೆ ರಾಜಕೀಯವಾಗಿ ಸಮುದಾಯಕ್ಕೆ ಅನುಕೂಲವಾಗುತ್ತದೆ. ಹೀಗಾಗಿ ಜಾಗೃತರಾಗಿ ಸಮುದಾಯದ ಪರ ಇರುವ ನಾಯಕರನ್ನು ಉಳಿಸಿಕೊಳ್ಳಿ ಎಂದು ಕರೆ ನೀಡಿದರು.

ಹಿಂದುಳಿದ ವರ್ಗದವರು ಸಾವಿರಾರು ವರ್ಷದಿಂದ ಅವಕಾಶದಿಂದ ವಂಚಿತರಾಗಿದ್ದಾರೆ. ರಾಜ್ಯದಲ್ಲಿ ೨೫ ಮಂದಿ ಮುಖ್ಯಮಂತ್ರಿಗಳಾಗಿದ್ದಾರೆ. ಅದರಲ್ಲಿ ಹಿಂದುಳಿದ ವರ್ಗದ ೫ ಜನ ಮಾತ್ರ ಸಿಎಂ ಆಗಿದ್ದಾರೆ. ಅದರಲ್ಲಿ ದಲಿತರು ಸಿಎಂ ಆಗಿಲ್ಲ. ಸಿದ್ದರಾಮಯ್ಯ ಮತ್ತು ಅರಸು ಅವರು ಮಾತ್ರ ೫ ವರ್ಷ ಪೂರೈಸಿದ್ದಾರೆ ಎಂದರು.

ಸಾವಿರಾರು ವರ್ಷಗಳಿಂದ ಕುರುಬ ಸಮುದಾಯಕ್ಕೆ ಅನ್ಯಾಯ ಆಗುತ್ತಿತ್ತು. ಸಂವಿಧಾನ ಜಾರಿಗೆ ಬಂದ ಮೇಲೆ ನಮ್ಮ ಹಕ್ಕುಗಳನ್ನು ಪಡೆಯಲು ಸಾಧ್ಯವಾಯಿತು.ಜಾತಿ ವ್ಯವಸ್ಥೆಯು ಸ್ವಾತಂತ್ರ್ಯ ಬಂದು ೭೫ ವರ್ಷ ಕಳೆದರೂ ಹೋಗಿಲ್ಲ. ಸಮಾಜದಲ್ಲಿ ತಾರತಮ್ಯ ನಡೆಯುತ್ತಲೇ ಇದೆ. ಯಾರು ಪ್ರಭಾವಿಗಳೋ ಅವರಿಗೆ ಅಧಿಕಾರ ಸಿಗುತ್ತಿದೆ. ಈ ಹಿಂದೆ ನ್ಯಾಯಾಲಯದಲ್ಲಿ ನ್ಯಾಯಾಧೀಶರು ಕೂಡ ಪ್ರಭಾವಿಗಳೇ ಇರಬೇಕೆನ್ನುವುದಿತ್ತು. ಆದರೆ, ಅದು ಬದಲಾಗುತ್ತಿದೆ. ಇದಕ್ಕೆ ಸಾಧ್ಯವಾಗಿದ್ದು ಸಂವಿಧಾನದಿಂದ, ಮೊದಲು ಜಾತಿ ವ್ಯವಸ್ಥೆಯಿಂದ ಹೊರಬರಬೇಕು ಎಂದರು.

ರಾಮ ಮನೋಹರ ಲೋಹಿಯಾ ವಿಚಾರ ವೇದಿಕೆ ಅಧ್ಯಕ್ಷ ಬಿ.ಎಸ್.ಶಿವಣ್ಣ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಬೇಡ್ಕರ್ ಬುದ್ಧ ಬಸವ, ಕುವೆಂಪು, ಲೋಹಿಯಾ ಅವರ ವಿಚಾರಧಾರೆಗಳನ್ನು ಅನುಸರಿಸಿ ರಾಜ್ಯವನ್ನು ಸಮಗ್ರವಾಗಿ ಅಭಿವೃದ್ಧಿ ಮಾಡಿ ಮುಖ್ಯಮಂತ್ರಿಯಾಗಿ ರಾಜ್ಯಭಾರ ಮಾಡುತ್ತಿದ್ದಾರೆ ಎಂದರು.

ಅಂದು ಬಸವಣ್ಣ, ಇಂದು ಸಿದ್ದರಾಮಯ್ಯ ಅವರು ದಕ್ಷ ಹಾಗೂ ಸಮರ್ಥ ಮುಖ್ಯಮಂತ್ರಿ ಆಗಿ ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡುವ ಮೂಲಕ ಮಾದರಿ ಮುಖ್ಯಮಂತ್ರಿ ಆಗಿ ಕೆಲಸ ಮಾಡುತ್ತಿದ್ದಾರೆ. ಬಡವರ ನಾಯಕ, ಜಾತಿ ನಾಯಕ ಅಲ್ಲ. ಎಲ್ಲಾ ವರ್ಗಗಳ ನಾಯಕ. ಅಂದು ದೇವರಾಜ ಅರಸು, ಇಂದು ಸಿದ್ದರಾಮಯ್ಯ ಅವರು ರಾಷ್ಟ್ರ ಕಂಡ ಪ್ರಾಮಾಣಿಕ ನಾಯಕ. ಅಂಬೇಡ್ಕರ್ ಸಂವಿಧಾನದ ಪ್ರಕಾರ ಕೆಲಸ ಮಾಡುತ್ತಿದ್ದಾರೆ. ಅವರ ಪರವಾದ ಅಲೆ ಇದೆ. ಕೆಲವು ದೃಶ್ಯ ಮಾಧ್ಯಮದವರು ಸುಳ್ಳು ಅಪಪ್ರಚಾರ ಮಾಡುತ್ತಿದ್ದಾರೆ. ಟಿವಿಯಲ್ಲಿ ಬರುವ ಸುಳ್ಳು ಸುದ್ದಿ ನಂಬಬೇಡಿ. ನಿಮ್ಮೆಲ್ಲರ ಆಶೀರ್ವಾದದಿಂದ ಸಿದ್ದರಾಮಯ್ಯ ಅವರು ಸಾರಥಿಯಾಗಿ ಕೆಲಸ ಮಾಡುತ್ತಾರೆ ಎಂದು ತಿಳಿಸಿದರು.

ಇದನ್ನು ಓದಿ; ಬಹುರೂಪಿಗೆ ಮುನ್ನುಡಿ : ನ.30ರಿಂದ ಪ್ರತಿ ಭಾನುವಾರ ನಾಟಕ ಪ್ರದರ್ಶನ

ರಾಜ್ಯ ಗ್ಯಾರಂಟಿ ಯೋಜನೆಗಳ ಪ್ರಾಽಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಮುಂದೆ ಏನಾಗಬೇಕು ಎಂದು ತೀರ್ಮಾನ ಮಾಡಿ ಪ್ರಯತ್ನ ಪಟ್ಟರೆ ಉನ್ನತ ಸ್ಥಾನಕ್ಕೆ ಬಂದು ಐಎಎಸ್ ಕೆಎಎಸ್ ಸ್ಥಾನಗಳನ್ನು ಅಲಂಕರಿಸಬಹುದು ಎಂದರು.

ರಾಜ್ಯದಲ್ಲಿಯೇ ಮಂಡ್ಯ ಜಿಲ್ಲೆ ಕುರುಬರ ಸಂಘಟನೆಯಲ್ಲಿ ಮೊದಲ ಸ್ಥಾನದಲ್ಲಿದೆ. ಮಾಜಿ ಸಚಿವ ಟಿ.ಮರಿಯಪ್ಪನವರ ಮನೆಯನ್ನು ಸ್ಮಾರಕವಾಗಿ ಮಾಡಿ ಅಭಿವೃದ್ಧಿಪಡಿಸಬೇಕು ಎಂದು ಹೇಳಿದರು.

ಅತಿ ಹೆಚ್ಚು ಬಜೆಟ್ ಮಂಡಿಸಿದ ಸಿದ್ದರಾಮಯ್ಯ ಅವರು ಕುರುಬರಿಗೆ ಮಾತ್ರ ಅಲ್ಲ. ಎಲ್ಲಾ ವರ್ಗದವರಿಗೂ ಕೆಲಸ ಮಾಡಿದ್ದಾರೆ. ಕೆಂಪೇಗೌಡ ಪ್ರಾಽಕಾರ ಮಾಡಿದವರು ಮಣ್ಣಿನ ಮಕ್ಕಳಲ್ಲ ಎಂದು ಹೇಳಿದರು.

ಶಾಸಕ ಪಿ.ರವಿಕುಮಾರ್ ಮಾತನಾಡಿ ಸಾತನೂರು ಗ್ರಾಮದಲ್ಲಿ ಕೋಟಿ ಆಕರ್ಷಕವಾದ ‘ಕನಕ ಧಾಮ ’ ನಿರ್ಮಾಣ ಮಾಡುತ್ತೇವೆ. ಪ್ರತಿಭಾ ಪುರಸ್ಕಾರ ವಿದ್ಯಾರ್ಥಿಗಳಿಗೆ ಸಿಗುತ್ತಿರುವ ಉತ್ತಮ ಪ್ರೋತ್ಸಾಹ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮ ಅಧ್ಯಕ್ಷ ಬಿ. ನಾಗೇಂದ್ರಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹುಚ್ಚೇಗೌಡ, ವಾಣಿಜ್ಯ ಇಲಾಖೆ ಜಂಟಿ ಆಯುಕ್ತ ಮಲ್ಲೇಶ್, ಹಾಸನ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪಟೇಲ್ ಶಿವಪ್ಪ, ಮಂಡ್ಯ ನಗರ ಅಭಿವೃದ್ಧಿ ಪ್ರಾಽಕಾರ ಸದಸ್ಯ ಎನ್, ದೊಡ್ಡಯ್ಯ, ಡಿ ದೇವರಾಜ ಅರಸು ಅಭಿವೃದ್ಧಿ ನಿಗಮ ವ್ಯವಸ್ಥಾಪಕ ನಿರ್ದೇಶಕ ನಟರಾಜು ಸೇರಿದಂತೆ ಇತರರನ್ನು ಸನ್ಮಾನಿಸಲಾಯಿತು.

ಕೆ.ಆರ್.ನಗರ ಶಾಖೆಯ ಕಾಗಿನೆಲೆ ಕನಕಗುರು ಪೀಠದ ಶಿವಾನಂದಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಚ್ಚಿನ್ ಚಲುವರಾಯಸ್ವಾಮಿ, ಕುರುಬರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎಲ್. ಸುರೇಶ್, ಪ್ರಧಾನ ಕಾರ್ಯದರ್ಶಿ ಎಂ.ಜೆ.ಶಶಿಧರ್, ಕೆಪಿಸಿಸಿ ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ.ಸಿ. ಪುಟ್ಟಸ್ವಾಮಿಗೌಡ ಇತರರು ಭಾಗಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

7 hours ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

9 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

10 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

10 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

10 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

10 hours ago