ಮಂಡ್ಯ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಇಂದು(ಏ.೫) ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ತಾವು ಸ್ವತಂತ್ರ ಅಭ್ಯರ್ಥಿಯಾಗಿದ್ದ ವೇಳೆ ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸಿದ ಬಗ್ಗೆ ಮತ್ತು ಮುಂದಿನ ದಿನಗಳಲ್ಲಿ ಕೈಗೊಳ್ಳಲಿರುವ ಕಾರ್ಯಕ್ರಮಗಳ ಬಗೆಗಿನ ಸಂಪೂರ್ಣ ಮಾಹಿತಿಯನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ನಾನು ಮೊದಲ ಬಾರಿಗೆ ಸಂಸದೆಯಾಗಿ-ಅದೂ ಸ್ವತಂತ್ರ ಅಭ್ಯರ್ಥಿಯಾಗಿ ಇಷ್ಟೆಲ್ಲ ಅಭಿವೃದ್ಧಿ ಕೆಲಸಗಳನ್ನು ಮಾಡಲು ಸಾಧ್ಯವಾಯಿತು. ಇದೇ ವೇಳೆ ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಿರಂತರ ಬೆಂಬಲ ಮತ್ತು ಬದ್ಧತೆ ತೋರಿದ ಪ್ರತಿಯೊಬ್ಬರಿಗೂ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.
ಸುಮಲತಾ ಅಂಬರೀಶ್ ಅವರು ತಾವು ಅಧಿಕಾರಾವಧಿಯಲ್ಲಿ ಮಾಡಿ ಪ್ರಗತಿ ಕಾರ್ಯಗಳ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಸುಮಲತಾ ಅವರ ಟ್ವೀಟ್ನಲ್ಲೇನಿದೆ?
ಎಲ್ಲರಿಗೂ ನನ್ನ ನಮಸ್ಕಾರಗಳು, ಮಂಡ್ಯ ಲೋಕಸಭಾ ಕ್ಷೇತ್ರದ ಪ್ರಗತಿಗಾಗಿ ತಮ್ಮೆಲ್ಲರ ಬೆಂಬಲ ಹಾಗೂ ಸಹಕಾರದೊಂದಿಗೆ ಆರಂಭಿಸಿರುವ ಅಭಿವೃದ್ಧಿಯ ಪಯಣದಲ್ಲಿ ಕಂಡಿರುವ ಯಶಸ್ಸು ಹಾಗೂ ಮುಂದಿರುವ ಗುರಿಯ ಕುರಿತು ಹಂಚಿಕೊಳ್ಳುವ ಅವಕಾಶ ಲಭಿಸಿರುವುದು ನನ್ನ ಸೌಭಾಗ್ಯ ಎಂದು ಭಾವಿಸುತ್ತೇನೆ. ಸ್ವಾಭಿಮಾನಿ ಮಂಡ್ಯ ಜನತೆಯ ಸಮರ್ಪಿತ ಪ್ರತಿನಿಧಿಯಾಗಿ, ನಿಮ್ಮ ಯೋಗಕ್ಷೇಮಕ್ಕೆ ನನ್ನ ಬದ್ಧತೆ ನಮ್ಮ ಮಂಡ್ಯ ಹಿಂದೆಂದಿಗಿಂತಲೂ ಹೆಚ್ಚಿನ ಪ್ರಗತಿಯನ್ನು ಸಾಧಿಸುವಂತೆ ಮಾಡಲು ಸಾಧ್ಯವಾಗಿಸಿದೆ. ಓರ್ವ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ತಮ್ಮೆಲ್ಲರ ಆಶೀರ್ವಾದದಿಂದ ಈ ಕಾವೇರಿ ಹರಿಯುವ ಪುಣ್ಯಭೂಮಿಯ ಸೇವೆ ಮಾಡಲು ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡು, ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಇರುವ ಅಡೆತಡೆಗಳ ವಿರುದ್ಧ ಗಟ್ಟಿಯಾಗಿ ಧ್ವನಿಯೆತ್ತಿರುವ ಬಗ್ಗೆ ಹಾಗೂ ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಿದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಮ್ಮ ಮುಂದಿಡುತ್ತಿದ್ದೇನೆ.
ನಮ್ಮ ಮಂಡ್ಯದ ಸಮಗ್ರ ಅಭಿವೃದ್ಧಿಗೆ ನಿಮ್ಮ ನಿರಂತರ ಬೆಂಬಲ ಮತ್ತು ಬದ್ಧತೆಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ನಾನು ಮೊದಲ ಬಾರಿಗೆ ಸಂಸದೆಯಾಗಿ-ಅದೂ ಸ್ವತಂತ್ರ ಅಭ್ಯರ್ಥಿಯಾಗಿ ಇಷ್ಟೆಲ್ಲ ಅಭಿವೃದ್ಧಿ ಕೆಲಸಗಳನ್ನು ಮಾಡಲು ಸಾಧ್ಯವಾಯಿತು. ನಮ್ಮ ಮಂಡ್ಯದ ಸರ್ವಾಂಗೀಣ ಅಭಿವೃದ್ಧಿಯೇ ನನ್ನ ಗುರಿ. ವಿಕಸಿತ ಮಂಡ್ಯಕ್ಕಾಗಿ ಎಲ್ಲರೂ ಜೊತೆಯಾಗಿ ಕೆಲಸ ಮಾಡೋಣ ಎಂದು ಸುದೀರ್ಘವಾಗಿ ಬರೆದುಕೊಂಡಿದ್ದಾರೆ.





