ಮಂಡ್ಯ

ಸಾಹಿತ್ಯ ಸಮ್ಮೇಳನ| ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ವರ್ಣರಂಜಿತ ಆರಂಭವಿರಲಿ : ಶಾಸಕ ಮಧು ಜಿ.ಮಾದೇಗೌಡ

ಮಂಡ್ಯ: ‘ಸಕ್ಕರೆ ನಗರ’ ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಮ್ಮೇಳನದ ಸರ್ವಾಧ್ಯಕ್ಷರ ಮೆರವಣಿಗೆಗೆ ವರ್ಣರಂಜಿತ ಆರಂಭವಿರಲಿ ಎಂದು ಮೆರವಣಿಗೆ ಸಮಿತಿ ಅಧ್ಯಕ್ಷರೂ ಆದ ವಿಧಾನ ಪರಿಷತ್ತಿನ ಶಾಸಕ ಮಧು ಜಿ.ಮಾದೇಗೌಡ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ‘ಮೆರವಣಿಗೆ ಸಮಿತಿ’ ಸಭೆ ನಡೆಸಿ ಮಾತನಾಡಿದ ಅವರು, ಸಮ್ಮೇಳನಾಧ್ಯಕ್ಷರಿಗೆ ಗೌರವ ಸಲ್ಲಿಸುವುದೆಂದರೆ ಕನ್ನಡ ನಾಡು-ನುಡಿ ಸಾಹಿತ್ಯಕ್ಕೆ ಗೌರವ ಸಲ್ಲಿಸಿದಂತೆ. ಹಾಗಾಗಿ, ಮೆರವಣಿಗೆಯನ್ನು ಯಾವುದೇ ಲೋಪವಿಲ್ಲದಂತೆ ಅರ್ಥಪೂರ್ಣ, ಆಕರ್ಷಕ, ಮತ್ತು ವೈಭವಯುತವಾಗಿ ಆಯೋಜಿಸಬೇಕು. ಮೆರವಣಿಗೆಯ ಯಶಸ್ಸು ಸಮ್ಮೇಳನದ ಯಶಸ್ಸು ಕೂಡ ಆಗಲಿದೆ ಎಂದು ಹೇಳಿದರು.
ಮೆರವಣಿಗೆ ಆರಂಭ
ನಗರದ ಸರ್ ಎಂ.ವಿಶ್ವೇಶ್ವರಯ್ಯರವರ ಪ್ರತಿಮೆ ಮುಂಭಾಗದಿಂದ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಆರಂಭಿಸಬೇಕು. ಆರಂಭ ಸ್ಥಳದಿಂದ ಮುಖ್ಯ ವೇದಿಕೆವರೆಗೆ ಸುಮಾರು 6 ಕಿ.ಮೀ ದೂರವಿದ್ದು, ಕ್ರಮಿಸಲು 3 ರಿಂದ 4 ಗಂಟೆ ಸಮಯ ತೆಗೆದುಕೊಳ್ಳಲಿದೆ. ಕನ್ನಡ ಭಾಷೆಯನ್ನು ಮೆರೆಸುವಂತೆ ಮೆರವಣಿಗೆ ಇರಲಿದ್ದು ಸಂಪೂರ್ಣ ಕನ್ನಡ ಮಯವಾಗಿರಲಿದೆ. ಮೆರವಣಿಗೆ ಸಾಗುವ ದಾರಿಯುದ್ದಕ್ಕೂ ರಸ್ತೆ ಇಕ್ಕೆಲಗಳಲ್ಲಿ ಕನ್ನಡ ಬಾವುಟಗಳಿಂದ ಸಿಂಗಾರ ಮಾಡುವುದು ಹಾಗೂ ಕುಡಿಯುವ ನೀರು, ಕಬ್ಬಿನ ರಸ, ಮಜ್ಜಿಗೆ ಹಾಗೂ ಪಾನಕ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.
ಜಿಲ್ಲೆಯ ಕಲಾತಂಡಗಳಿಗೆ ಆದ್ಯತೆ
ಕನ್ನಡದ ಅಸ್ಮಿತೆ ಸಾರುವಂತೆ ಸಮ್ಮೇಳಾನಾಧ್ಯಕ್ಷರ ರಥ ಅಲಂಕರಿಸಲಾಗುವುದು. ಮೆರವಣಿಗೆಯಲ್ಲಿ ಮಂಡ್ಯ ಜಿಲ್ಲೆ, ಹೊರ ಜಿಲ್ಲೆ, ಗಡಿನಾಡು ಜಿಲ್ಲೆ ಹಾಗೂ ಹೊರ ರಾಜ್ಯಗಳ ಕಲಾತಂಡಗಳಿಗೂ ಅವಕಾಶ ಕಲ್ಪಿಸಲಾಗುವುದು. ಕೀಲು ಕುದುರೆ, ಕರಡಿ ಮಜಲು, ಪೂಜಾ ಕುಣಿತ, ಚಂಡೆ ಕುಣಿತ, ತಮಟೆ, ಡೊಳ್ಳು ಕುಣಿತ, ಕೊಂಬು ಕಹಳೆ ಸೇರಿದಂತೆ ವಿವಿಧ ಪ್ರಕಾರಗಳ ಜನಪದ ಕಲಾವಿದರ ದಂಡು ಮೆರವಣಿಗೆಗೆ ಉತ್ಸಾಹ ಮತ್ತು ಶಕ್ತಿ ತುಂಬಲಿದ್ದು, ಜನಪದ ಶ್ರೀಮಂತಿಕೆಯನ್ನು ಬಿಂಬಿಸಲಿವೆ. ಸ್ಕೌಟ್ಸ್ ಮತ್ತು ಎನ್.ಎಸ್.ಎಸ್. ತಂಡಗಳು ಭಾಗವಹಿಸಲಿವೆ ಎಂದು ಹೇಳಿದರು.
ಸ್ತಬ್ಧಚಿತ್ರ ಮೆರವಣಿಗೆ
ಮೈಸೂರು ದಸರಾ ಮಾದರಿಯಲ್ಲೆ ಸಾಹಿತ್ಯ ಸಮ್ಮೇಳನದ ಮೆರವಣಿಗೆಯಲ್ಲೂ ಸ್ತಬ್ಧಚಿತ್ರಗಳು ಇರಬೇಕು. ಸರ್ಕಾರದ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳು ಹಾಗೂ ಕನ್ನಡ ನಾಡು ನುಡಿ ಸಂಸ್ಕೃತಿ, ಶಿಲ್ಪಕಲೆ, ಸ್ಥಳೀಯ ಸಂಸ್ಕೃತಿ ಬಿಂಬಿಸುವಂತೆ ಸ್ತಬ್ಧಚಿತ್ರಗಳನ್ನು ಕಳುಹಿಸಿಕೊಡುವಂತೆ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗುವುದು. ಅಲ್ಲದೆ, ಪ್ರತಿ ತಾಲ್ಲೂಕುಗಳ ವಿಶೇಷತೆ, ಸಂಸ್ಕೃತಿ ಬಿಂಬಿಸುವಂತೆ ತಲಾ ಒಂದು ಸ್ತಬ್ಧಚಿತ್ರ ಏರ್ಪಾಡು ಮಾಡುವ ಬಗ್ಗೆ ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಲಾಯಿತು.
ಪೂರ್ಣಕುಂಭ
ಪೂರ್ಣಕುಂಭವು ಮೆರವಣಿಗೆಯಲ್ಲಿ 6 ಕಿ.ಮೀ ಕ್ರಮಿಸಬೇಕಿದೆ. ಸುಮಾರು 870 ಮಹಿಳೆಯರು ಪೂರ್ಣಕುಂಭದೊಂದಿಗೆ ಅಷ್ಟೂ ದೂರದವರೆಗೆ ಸಾಗುವುದು ಕಷ್ಟ. ಹಾಗಾಗಿ, ಮೂರು ತಂಡಗಳನ್ನಾಗಿ ವಿಭಾಗಿಸಿ ನಿರ್ದಿಷ್ಟ ದೂರ ಕ್ರಮಿಸದ ನಂತರ ಬೇರೊಂದು ಪೂರ್ಣಕುಂಭ ತಂಡ ಮೆರವಣಿಗೆ ಸೇರುವಂತೆ ಏರ್ಪಾಡು ಮಾಡಬೇಕು ಎಂಬ ಸಲಹೆ ವ್ಯಕ್ತವಾಯಿತು.
ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳೂ ಭಾಗವಹಿಸಲಿ
ಕನ್ನಡ ನಾಡು ನುಡಿ ಸಂಸ್ಕೃತಿ ಬಗ್ಗೆ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ತಿಳಿಸಬೇಕಿದೆ. ಹಾಗಾಗಿ, ಈ ಬಾರಿಯ ಸಾಹಿತ್ಯ ಸಮ್ಮೇಳನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಮತ್ತು ಕಾಲೇಜುಗಳ ಮಕ್ಕಳ ಹೆಚ್ಚಿನ ಭಾಗವಹಿಸಲು ಅನುಕೂಲ ಆಗುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ, ಶಿಕ್ಷಣ ಇಲಾಖೆ, ಎಂಜಿನಿಯರಿಂಗ್ ಮತ್ತು ಮೈದ್ಯಕೀಯ ಕಾಲೇಜುಗಳ ಮುಖ್ಯಸ್ಥರಿಗೆ ಪತ್ರ ಬರೆಯಲಾಗುವುದು ಶಾಸಕ ಮಧು ಜಿ.ಮಾದೇಗೌಡ ಹೇಳಿದರು.
ಸಮಿತಿಯ ಸಂಚಾಲಕ ಕಾರಸವಾಡಿ ಮಹದೇವು ಮಾತನಾಡಿ, ಜಿಲ್ಲೆ, ಹೊರ ಜಿಲ್ಲೆ, ಹೊರ ರಾಜ್ಯಗಳಿಂದ ಕಲಾ ತಂಡಗಳು ಆಗಮಿಸಲಿದ್ದು, ಸುಮಾರು 1000 ಕಲಾವಿದರು ಭಾಗವಹಿಸಲು ಅವಕಾಶ ಕಲ್ಪಿಸಬೇಕು. ವಿವಿಧ ಪ್ರಕಾರಗಳಲ್ಲಿ ಕಲಾತಂಡಗಳಿಗೆ ಅವಕಾಶ ನೀಡುವ ಬಗ್ಗೆ ಚರ್ಚಿಸಿದರು. ಎಂದರು.
ಸಮಿತಿಯ ಉಪಾಧ್ಯಕ್ಷರಾದ ಡಿ.ಪಿ.ಸ್ವಾಮಿ ಅವರು ಮಾತನಾಡಿ, ಎಲ್ಲಾ ಜಿಲ್ಲೆಗಳಿಂದಲೂ ಪ್ರತಿನಿಧಿಕವಾಗಿ ಒಂದು ಕಲಾತಂಡವಿರಬೇಕು. ಗಡಿನಾಡುಗಳಿಂದ ಒಂದೊಂದು ಉತ್ತಮ  ತಂಡಗಳನ್ನು ಕರೆಸಬೇಕು. 87 ಎತ್ತಿನಗಾಡಿಗಳಲ್ಲಿ 87 ಸಮ್ಮೇಳನಾಧ್ಯಕ್ಷರ ಭಾವಚಿತ್ರವನ್ನು ಮೆರವಣಿಗೆ ಮಾಡಬೇಕು ಎಂದರು.
ಸಮಿತಿಯ ಸದಸ್ಯ ವೆಂಕಟಗಿರಿಯ್ಯ ಮಾತನಾಡಿ, ಸಮ್ಮೇಳನದ ದಿನವೇ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಬೇಕು. ಮೆರವಣಿಗೆ ವೈಭವಯುತವಾಗಿ ಇರಬೇಕು. ಮುಖ್ಯ ವೇದಿಕೆಗೆ ಮೆರವಣಿಗೆ ಸುಮಾರು 11 ಗಂಟೆ ವೇಳೆಗೆ ತಲುಪುವುದನ್ನು ದೃಷ್ಟಿಯಲ್ಲಿಟ್ಟುಕೊಂಡು ಮೆರವಣಿಗೆ ಆರಂಭದ ಸಮಯವನ್ನು ನಿರ್ಧರಿಸುವುದು ಸೂಕ್ತ ಎಂದರು. ಜಿಲ್ಲೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ದೊಡ್ಡದಿರುವುದರಿಂದ ಸ್ತಬ್ಧಚಿತ್ರವಿರುವುದು ಸೂಕ್ತ ಎಂದು ಹೇಳಿದರು.
ಡಿ.ದೇವರಾಜ ಅರಸು ಸಂಘಟನೆಯ ಸಂದೇಶ್ ಮಾತನಾಡಿ, ಮೆರವಣಿಗೆಯು ನಗರದಲ್ಲಿ ಸಾಂಸ್ಕೃತಿಕ ವಾತಾವರಣ, ಕನ್ನಡದ ವಾತಾವರಣವನ್ನು ನಿರ್ಮಿಸುವಂತಿರಬೇಕು. ಮೆರವಣಿಗೆ ವೈಭಯುತವಾಗಿ ಇರಬೇಕು. ಕನ್ನಡ ರಥ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಸಂಚರಿಸುವ ಮೂಲಕ ಪ್ರಚಾರ ನಡೆಸಬೇಕು ಎಂದು ಹೇಳಿದರು.
ಜಯ ಕರ್ನಾಟಕ ಸಂಘಟನೆಯ ಪರಿಷತ್ತಿನ ನಾರಾಯಣ್ ಮಾತನಾಡಿ, ಪ್ಲಾಸ್ಟಿಕ್ ಮುಕ್ತ ಮೆರವಣಿಗೆ ಮಾಡುವ ಮೂಲಕ ಪರಿಸರ ಸ್ನೇಹಿ ಸಂದೇಶವನ್ನು ತಲುಪಿಸುವಂತೆ ಆಗಬೇಕು.
ಸಭೆಯಲ್ಲಿ ಐದು ಉಪ ಸಮಿತಿಗಳ ರಚನೆಗೆ ತೀರ್ಮಾನಿಸಲಾಯಿತು
1.ಕಲಾತಂಡಗಳ ಆಯ್ಕೆ ಸಮಿತಿ
2.ಸ್ತಬ್ಧಚಿತ್ರ ಆಯ್ಕೆ ಉಪ ಸಮಿತಿ
3.ಪೂರ್ಣಕುಂಭ ಉಪ ಸಮಿತಿ
4.ದೈಹಿಕ ಶಿಕ್ಷಣ ಶಿಕ್ಷರ ಉಪ ಸಮಿತಿ
5.ಶಾಲಾ-ಕಾಲೇಜು ವಿದ್ಯಾರ್ಥಿಗಳನ್ನು ಕರೆತರುವ ಉಪ ಸಮಿತಿ
ಸಮ್ಮೇಳನದ ಸಮನ್ವಯ ಸಮಿತಿ ಅಧ್ಯಕ್ಷರಾದ ಮೀರಾ ಶಿವಲಿಂಗಯ್ಯ, ಸಮಿತಿಯ ಸದಸ್ಯ ಕಾರ್ಯದರ್ಶಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ನಂದೀಶ್, ಕನ್ನಡ ಸೇನೆ ಮಂಜುನಾಥ್, ಜಿಲ್ಲಾ ಕಸಾಪದ ಹುಸ್ಕೂರು ಕೃಷ್ಣೇಗೌಡ, ಹರ್ಷ, ಅಪ್ಪಾಜಪ್ಪ ಹಾಗೂ ಕೀಲಾರ ಕೃಷ್ಣೇಗೌಡ, ಯೋಗಣ್ಣ, ನಾಗಮ್ಮ, ಕುಬೇರಪ್ಪ ಸೇರಿದಂತೆ ಹಲವರು ಹಾಜರಿದ್ದರು
ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

2 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

2 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

3 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

6 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

6 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

7 hours ago