ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಡಿಸೆಂಬರ್ 20, 21 ಮತ್ತು 22ರಂದು ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭರ್ಜರಿ ತಯಾರಿ ಮಾಡಿಕೊಳ್ಳಲಾಗುತ್ತಿದೆ.
ಕನ್ನಡ ಸಾಹಿತ್ಯ ಸಮ್ಮೇಳನಕ್ಕೆಂದೇ 100 ಎಕರೆ ವಿಶಾಲವಾದ ಸ್ಥಳವನ್ನು ಅಂತಿಮಗೊಳಿಸಲಾಗಿದೆ.
ಸಮ್ಮೇಳನಕ್ಕೆ ಗುರುತಿಸಿರುವ ಅಮರಾವತಿ ಹೋಟೆಲ್ ಹಾಗೂ ಸ್ಯಾಂಜೋ ಹಿಂಭಾಗದ ಜಾಗವು ಬೆಂಗಳೂರು-ಮೈಸೂರು ಹೆದ್ದಾರಿಗೆ ಹೊಂದಿಕೊಂಡಿದೆ.
ಈ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹೊರರಾಜ್ಯಗಳಿಂದ ಬರುವವರಿಗೆ ತುಂಬಾ ಅನುಕೂಲವಾಗಲಿದೆ. ಇಲ್ಲಿ ವಾಹನಗಳ ನಿಲುಗಡೆಗೂ ಸಾಕಷ್ಟು ಸ್ಥಳಾವಕಾಶ ಇದ್ದು, ಇದು ಸಮ್ಮೇಳನಕ್ಕೆ ಸೂಕ್ತ ಜಾಗ ಎಂಬ ನಿರ್ಣಯಕ್ಕೆ ಬರಲಾಗಿದೆ.
ಇನ್ನು ಈ ವರ್ಷದ ನುಡಿಜಾತ್ರೆಗೆ 30 ಕೋಟಿ ಅನುದಾನವನ್ನು ಸರ್ಕಾರದಿಂದ ಒದಗಿಸಲಾಗುತ್ತದೆ. ಅದರ ಮಿತಿಯೊಳಗೆ ಎಲ್ಲಾ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಇನ್ನು ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ 28 ಸಮಿತಿಗಳನ್ನು ರಚನೆ ಮಾಡಲಾಗಿದ್ದು, ಸಚಿವರು ಹಾಗೂ ಶಾಸಕರಿಗೆ ವಿವಿಧ ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಗಿದೆ.