ಮಂಡ್ಯ: ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರಿಂದು ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿವಿಧ ಇಲಾಖೆಗಳ ಸವಲತ್ತುಗಳನ್ನು ವಿತರಿಸಿದರು.
ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನರಿಗೆ ಯಂತ್ರ ಚಾಲಿತ ತ್ರಿಚಕ್ರ ವಾಹನ-13, ಬ್ಯಾಟರಿ ಚಾಲಿತ ವೀಲ್ ಚೇರ್- 11, ಶ್ರವಣ ಸಾಧನ- 15, ವೀಲ್ ಚೇರ್- 04, ಟ್ರೈಸೈಕಲ್-02, ಕ್ರಚಸ್೯-04 ಹಾಗೂ ವಾಕರ್- 02 ಒಟ್ಟು 50 ವಿಶೇಷಚೇತನರಿಗೆ ಸಾಧನ ಸಲಕರಣೆಗಳನ್ನು ವಿತರಿಸಿ ಸಾಧನ ಸಲಕರಣೆಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದರು.
ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆಗೆ ಎಂ.ಎಂ.ಯು ಕಟ್ಟಡ ಕಾರ್ಮಿಕರು ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ನೀಡಲು ಮೂರು ಮೊಬೈಲ್ ಮೆಡಿಕಲ್ ಯುನಿಟ್ ವಾಹನಗಳು ಜಿಲ್ಲೆಗೆ ಮಂಜೂರಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ನೀಡಿದರು.
ಸರ್ಕಾರ ಮಕ್ಕಳು ಹಾಗೂ ಸಾರ್ವಜನಿಕರಲ್ಲಿ ಜ್ಞಾನಾರ್ಜನೆಯನ್ನು ಹೆಚ್ಚಿಸಬೇಕು ಎಂದು ಜಿಲ್ಲೆಯಲ್ಲಿ ಹೆಚ್ಚುವರಿಯಾಗಿ 255 ಗ್ರಾಮಗಳಲ್ಲಿ ಗ್ರಂಥಾಲಯವನ್ನು ಪ್ರಾರಂಭಿಸಿದ್ದು, ಇಂದು ಸಚಿವರು ಹೆಚ್ಚುವರಿ 255 ಗ್ರಂಥಾಲಯಗಳಿಗೆ ಪ್ರತಿ ಗ್ರಂಥಾಲಯಕ್ಕೆ 2 ಲಕ್ಷ ರೂ ವೆಚ್ಚದ ಪುಸ್ತಕಗಳನ್ನು ಸಾಂಕೇತಿವಾಗಿ ವಿತರಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಸಚಿವ ಎನ್.ಚಲುವರಾಯಸ್ವಾಮಿ ಅವರು, ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಯೋಜನೆಗಳ ಬಗ್ಗೆ ಸದರಿ ಸಾಲಿನಲ್ಲಿ ವಿಶೇಷ ನಿಗಾ ವಹಿಸಲಾಗುವುದು. ಪ್ರತಿವಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಂದ ವರದಿ ಪಡೆಯಲಾಗುವುದು. ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ನಿಗದಿಪಡಿಸಿರುವ ಗುರಿಯನ್ನು ಶೇ100ರಷ್ಟು ಸಾಧನೆ ಮಾಡಲು ಕಾರ್ಯಪ್ರವೃತ್ತರಾಗಬೇಕು ಎಂದರು.
ಮಳೆಗಾಲ ಪ್ರಾರಂಭವಾಗಿದ್ದು, ಯಾವುದೇ ಮಳೆ ಹಾನಿ ಅವಘಡವಾಗದಂತೆ ಮುನ್ನೆಚ್ಚರಿಕೆ ವಹಿಸಿ. ಕೇಂದ್ರ ಸ್ಥಾನದಲ್ಲಿ ವಾಸ್ತವ್ಯ ಹೂಡಿ ಸಾರ್ವಜನಿಕರ ಕಷ್ಟಗಳಿಗೆ ಸ್ಪಂದಿಸಿ ಎಂದರು.





