ಮಂಡ್ಯ : ತಾಲ್ಲೂಕಿನ ಬಸರಾಳು ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಗೆ ಜಿ.ಪಂ. ಸಿಇಓ ನಂದಿನಿ ಕೆ.ಆರ್. ಅವರು ಬಿಸಿ ಊಟ ಯೋಜನೆಯಡಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟ ಪರಿಶೀಲನೆ ನಡೆಸಿದರು.
ಮಂಗಳವಾರ ಶಾಲೆಗೆ ಅನಿರೀಕ್ಷಿತ ಭೇಟಿ ನೀಡಿದ ಅವರು, ಶಾಲೆಗೆ ಸರಬರಾಜಾಗಿರುವ ಆಹಾರ ಸಾಮಾಗ್ರಿಗಳ ಗುಣಮಟ್ಟ ಪರಿಶೀಲಿಸಿದರು. ಬಿಸಿ ಊಟ ಯೋಜನೆಯಡಿ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಿಸುತ್ತಿರುವ ಬಗ್ಗೆ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು.
ದಾಸ್ತಾನು ಪರಿಶೀಲನೆ ವೇಳೆ ಅಕ್ಕಿಯ ಗುಣಮಟ್ಟದಲ್ಲಿ ವ್ಯತ್ಯಾಸವಿದ್ದು, ಈ ಬಗ್ಗೆ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ನಡೆಸಿ ವರದಿ ಸಲ್ಲಿಸಲು ಶಿಕ್ಷಣಾಧಿಕಾರಿ, ಮದ್ಯಾಹ್ನ ಉಪಹಾರ ಯೋಜನೆ ರವರಿಗೆ ಸೂಚಿಸಿದರು.
ಇತ್ತೀಚಿಗೆ ಶಾಲೆಗಳಿಗೆ ಸರಬರಾಜು ಮಾಡಲಾಗಿದ್ದ ತೊಗರಿಬೇಳೆ ಮತ್ತು ಎಣ್ಣೆಯನ್ನು ಪರಿಶೀಲನೆ ನಡೆಸಲಾಯಿತು. ನಿಗದಿತ ಅವಧಿಯೊಳಗೆ ಆಹಾರ ಸಾಮಗ್ರಿ ಗಳನ್ನು ಸರಬರಾಜು ಮಾಡುವಂತೆ ಹಾಗೂ ದಸರಾ ರಜೆಯ ಸಂದರ್ಭದಲ್ಲಿ ಆಹಾರ ಸಾಮಗ್ರಿಗಳು ಹಾಳಾಗದಂತೆ ಎಚ್ಚರ ವಹಿಸಲು SOP ಯಂತೆ ಕ್ರಮ ವಹಿಸಲು ಸೂಚಿಸಿದರು.
ಈ ವೇಳೆ ಶಾಲೆಯಲ್ಲಿನ ಶೌಚಾಲಯ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ಇತರೆ ಮೂಲಭೂತ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು. ಶಾಲೆಯಲ್ಲಿನ ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯಗೊಳಿಸಿ, ಗೈರು ಹಾಜರಾದ ವಿದ್ಯಾರ್ಥಿಗಳ ಪೋಷಕರಿಗೆ ತಿಳುವಳಿಕೆ ನೀಡಿ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶವನ್ನು ಉತ್ತಮಗೊಳಿಸಿ ಎಂದು ಶಿಕ್ಷಕರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯೋಪದ್ಯಾಯರಾದ ಮೋಹನ್ ಸೇರಿದಂತೆ ಇತರರು ಹಾಜರಿದ್ದರು.





