ಮಂಡ್ಯ

ಧರ್ಮಸ್ಥಳ ಅಪಪ್ರಚಾರ ಖಂಡಿಸಿ ಬೃಹತ್‌ ಪ್ರತಿಭಟನೆ : ಸುಳ್ಳು ಸುದ್ದಿ ಅಬ್ಬಿಸುವವರ ವಿರುದ್ಧ ಕ್ರಮಕ್ಕೆ ಆಗ್ರಹ

ಮಂಡ್ಯ : ಜನರ ಆರಾಧ್ಯ ದೈವ ಶ್ರೀ ಮಂಜುನಾಥಸ್ವಾಮಿ ನೆಲೆಸಿರುವ ಧರ್ಮಸ್ಥಳದ ಬಗ್ಗೆ ಹಾಗೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಿಬಿಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಈ ರೀತಿಯ ಸುಳ್ಳು ಸುದ್ದಿಗಳು ಸಮೂಹ ಮಾಧ್ಯಮಗಳಲ್ಲಿ ಪ್ರಸಾರವಾಗದಂತೆ ಕ್ರಮಕೈಗೊಳ್ಳಬೇಕೆಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಭಕ್ತರು ಸೋಮವಾರ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕಿನಲ್ಲಿ ಜಮಾವಣೆಗೊಂಡ ಮಹಿಳೆಯರು ಹಾಗೂ ನೂರಾರು ಭಕ್ತರು, ಜಯಚಾಮರಾಜೇಂದ್ರ ಒಡೆಯರ್ ವೃತ್ತದ ವರೆಗೆ ಮೆರವಣಿಗೆಯಲ್ಲಿ ಸಾಗಿ ಮಾನವ ಸರಪಳಿ ನಿರ್ಮಿಸಿ, ರಸ್ತೆ ತಡೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಕುಳಿತು, ಕೆಲ ಕಿಡಿಗೇಡಿಗಳು ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಇಲ್ಲಸಲ್ಲದ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದರಲ್ಲದೆ, ಯಾರೋ ಒಬ್ಬ ಅನಾಮಿಕ ತಾನು ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಹೇಳಿದ್ದನ್ನೇ ನಂಬಿ ಸರ್ಕಾರ ಶೋಧ ನಡೆಸುತ್ತಿದೆ. ಎಸ್‌ಐಟಿ ತನಿಖಾ ತಂಡ ರಚಿಸಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಅನಾಮಿಕ ವ್ಯಕ್ತಿ ತೋರಿಸಿದ ೧೬ ಸ್ಥಳಗಳಲ್ಲೂ ಯಾವುದೇ ಶವಗಳಾಗಲಿ, ಅವುಗಳ ಅಸ್ಥಿಪಂಜರವಾಗಲಿ ಸಿಕ್ಕಿಲ್ಲ.

ಇದು ಅನ್ಯಧರ್ಮೀಯರು ಹಿಂದೂ ಧರ್ಮದ ಹೂಡಿರುವ ಕುತಂತ್ರವಾಗಿದ್ದು, ಹಿಂದೂ ಧರ್ಮದ ವಿರುದ್ಧ ಅಪಪ್ರಚಾರ ಮಾಡಲೆಂದೇ ಅನಾಮಿಕ ವ್ಯಕ್ತಿಯನ್ನು ಸೃಷ್ಟಿಸಲಾಗಿದೆ. ಅಲ್ಲದೆ, ಯೂಟ್ಯೂಬ್‌ನಲ್ಲಿ ಸಮೀರ್ ಎಂಬ ವ್ಯಕ್ತಿ ಧರ್ಮಸ್ಥಳ, ಧರ್ಮಾಧಿಕಾರಿಗಳು ಮತ್ತು ಕುಟುಂಬದ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾನೆ. ಅಲ್ಲದೆ, ಅನಾಮಿಕ ಮುಸುಕುಧಾರಿ ವ್ಯಕ್ತಿಯನ್ನು ಮೊದಲು ತನಿಖೆಗೊಳಪಡಿಸಿ ಸತ್ಯಾಸತ್ಯತೆ ತಿಳಿಯಬೇಕೆಂದು ಆಗ್ರಹಿಸಿದರು.

ಕೆಲವು ವರ್ಷಗಳಿಂದ ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ, ಎಂ.ಡಿ.ಸಮೀರ್, ಸಂತೋಷ್ ಶೆಟ್ಟಿ, ಟಿ.ಜಯಂತ, ಅಜಯ್, ಅಂಚನ್ ಮತ್ತು ಅವನ ಸಹಚರರು ಸೇರಿಕೊಂಡು ಶ್ರೀ ಮಂಜುನಾಥ ಸ್ವಾಮಿ ದೇವಾಲಯ ಹಾಗೂ ಡಿ.ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬಸ್ಥರ ಹೆಸರಿಗೆ ಕಳಂಕ ತರುವಂತಹ ಕೀಳುಮಟ್ಟದ ಭಾಷೆಯನ್ನು ಉಪಯೋಗಿಸಿ ವಿಡಿಯೋಗಳ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡುತ್ತಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳ ದೇವಾಲಯವನ್ನು ಗುರಿಯಾಗಿಸಿಕೊಂಡು ಯಾವುದೇ ದಾಖಲೆಗಳಿಲ್ಲದೆ ನಿರಂತರವಾಗಿ ಸುಳ್ಳು ಸುದ್ದಿಗಳನ್ನು ಪ್ರಚಾರ ಮಾಡುತ್ತಿರುವುದರಿಂದ ಶ್ರೀಕ್ಷೇತ್ರದ ಕೋಟ್ಯಂತರ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ಇದರಿಂದಾಗಿ ಈಗಾಗಲೇ ಸಮಾಜದಲ್ಲಿ ಎರಡು ಬಣಗಳು ನಿರ್ಮಾಣವಾಗುವ ಲಕ್ಷಣಗಳು ಗೋಚರಿಸುತ್ತಿವೆ. ಇದು ಮುಂದಿನ ದಿನಗಳಲ್ಲಿ ಈ ಪ್ರಕ್ರಿಯೆಯು ಸಮಾಜದಲ್ಲಿ ಉದ್ವಿಗ್ನತೆ ಮತ್ತು ಶಾಂತಿಭಂಗಕ್ಕೆ ಕಾರಣವಾಗಬಹುದಾಗಿದೆ.

ಅನಾಮಿಕ ವ್ಯಕ್ತಿಯೋರ್ವ ನೀಡಿದ ದೂರಿನ ಆಧಾರದಲ್ಲಿ ರಾಜ್ಯ ಸರ್ಕಾರವು ‘ವಿಶೇಷ ತನಿಖಾ ತಂಡ’ವನ್ನು ರಚಿಸಿ ತನಿಖೆ ನಡೆಸುತ್ತಿರುವುದನ್ನು ಶ್ರೀಕ್ಷೇತ್ರದ ಭಕ್ತವೃಂದದವರಾದ ನಾವೆಲ್ಲರೂ ಗೌರವದಿಂದ ಸ್ವಾಗತಿಸುತ್ತೇವೆ. ಆದರೆ, ಇದೀಗ ಅನಾಮಿಕ ದೂರುದಾರನನ್ನು ಬಳಸಿಕೊಂಡು ಶ್ರೀ ಕ್ಷೇತ್ರದ ಬಗ್ಗೆ ದಿನಕ್ಕೊಂದು ರೀತಿಯಲ್ಲಿ ತಮ್ಮ ಯೂಟ್ಯೂಬ್, ಫೇಸ್‌ಬುಕ್ ಮುಂತಾದ ಸಾಮಾಜಿಕ ಜಾಲತಾಣದ ಮೂಲಕ ಸುಳ್ಳು ಮಾಹಿತಿಗಳನ್ನು ಭಿತ್ತರಿಸಿ ಸಾರ್ವಜನಿಕರಲ್ಲಿ ಗೊಂದಲವನ್ನು ನಿರ್ಮಿಸುತ್ತಿದ್ದಾರೆ ಎಂದು ಆರೋಪಿಸಿದರು.

ಪ್ರತಿಭಟನೆಯ ನೇತೃತ್ವವನ್ನು ಜನಜಾಗೃತಿ ವೇದಿಕೆ ಅಧ್ಯಕ್ಷ ನಾಗಮಂಗಲ ಹನುಮಂತು, ತಗ್ಗಹಳ್ಳಿ ವೆಂಕಟೇಶ್, ಕಾರಸವಾಡಿ ಮಹದೇವ, ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಕೆ.ಸಿ.ರವೀಂದ್ರ, ಕಲ್ಲಹಳ್ಳಿ ಆನಂದ ಹಾಗೂ ನೂರಾರು ಮಹಿಳೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಯಾಲಕ್ಕೂರು, ಸುತ್ತಲಿನ ಗ್ರಾಮಗಳಿಗೆ ಬಂತು ಸಾರಿಗೆ ಬಸ್ಸು!

ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…

2 hours ago

ಓದುಗರ ಪತ್ರ: ಬಿಸಿಲಲ್ಲೋ ಅಣ್ಣಾ..!

ಬಿಸಿಲಲ್ಲೋ ಅಣ್ಣ ಇದು ಬರಿ ಬಿಸಿಲಲ್ಲೋ ! ಯಾರು ಹೆಸರಿಟ್ಟರೋ? ಇದಕ್ಕೆ ‘ನಿಲ್ಲೋ ಎಲ್ಲೋ’ ನಿಂತಲ್ಲಿ ನಿಲ್ಲಲು, ಕುಂತಲ್ಲಿ ಕೂರಲು…

2 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳ ಅಭಿವೃದ್ಧಿ ಸ್ವಾಗತಾರ್ಹ

ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳ ಬಲವರ್ಧನೆಗೆ ಸರ್ಕಾರ ಮುಂದಾಗಿರುವುದು ಅತ್ಯಂತ ಸಂತೋಷ ಮತ್ತು ಹೆಮ್ಮೆಯ ಸಂಗತಿ. ಮೂಲಸೌಕರ್ಯದ…

2 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗುವ ಇಂಟರ್ನಲ್ಸ್ ಅಂಕಗಳು

ಮಕ್ಕಳು ಬೋರ್ಡ್ ಪರೀಕ್ಷೆಗಳಲ್ಲಿ ಅಂಕಗಳನ್ನು ತೆಗೆಯುವ ಅರ್ಹತೆ ಇದ್ದರೂ, ಇಂಟರ್ನಲ್ಸ್ ಮಾರ್ಕ್ಸ್(ಆಂತರಿಕ ಅಂಕ) ಎಂಬ ಭೂತದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ…

2 hours ago

ನಾವಿಕನೇ ಇಲ್ಲದ ಕೊಡಗು ಪ್ರವಾಸೋದ್ಯಮ ಇಲಾಖೆ..!

ಪುನೀತ್ ಮಡಿಕೇರಿ ಇಲಾಖೆಯಲ್ಲಿ ಸಿಬ್ಬಂದಿ ನೇಮಕಕ್ಕೆ ಪ್ರವಾಸೋದ್ಯಮಿಗಳ ಆಗ್ರಹ  ಮಡಿಕೇರಿ: ಕೊಡಗಿನಲ್ಲಿ ಪ್ರವಾಸೋದ್ಯಮ ಇಲಾಖೆಯನ್ನು ಮುನ್ನಡೆಸಲು ನಾವಿಕನೇ ಇಲ್ಲದಾಗಿದ್ದು, ಕಳೆದ ಒಂದು ವರ್ಷದಿಂದ…

3 hours ago