Massive corruption in Mandya Sahitya Sammelan Annadani alleges
ಮಂಡ್ಯ : ಕಳೆದ 2024ರ ಡಿಸೆಂಬರ್ ತಿಂಗಳಿನಲ್ಲಿ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹೆಸರಿನಲ್ಲಿ ಭಾರೀ ಭ್ರಷ್ಟಾಚಾರ ನಡೆದಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಮಾಜಿ ಶಾಸಕ ಕೆ.ಅನ್ನದಾನಿ ಆಗ್ರಹಿಸಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮೇಳನ ನಡೆದ ಕೆಲ ದಿನಗಳಲ್ಲೇ ನಾನು ಭ್ರಷ್ಟಾಚಾರದ ಬಗ್ಗೆ ದನಿ ಎತ್ತಿದ್ದೆ. ಸರ್ಕಾರ ನನ್ನ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಲಿಲ್ಲ. ಸಮ್ಮೇಳನದ ಹೆಸರಿನಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರವೆಸಗಿ ಸ್ವೇಚ್ಛಾಚಾರ ನಡೆಸಿರುವುದು ಕೆಲ ದಾಖಲೆಗಳಿಂದ ಸಾಬೀತಾಗಿದೆ ಎಂದು ತಿಳಿಸಿದರು.
ಸುಮಾರು 500 ರೂ. ಬೆಲೆ ಬಾಳುವ ಹಣ್ಣಿನ ಬುಟ್ಟಿಗೆ 2,500 ರೂ., 900 ರೂ. ಬೆಲೆ ಬಾಳುವ ರೇಷ್ಮೆ ಸಾಲಿಗೆ 1680 ರೂ. ಸಚಿವರು ಹಾಗೂ ಮುಖ್ಯಮಂತ್ರಿಗಳಿಗೆ ನೀಡಿರುವ ನೆನಪಿನ ಕಾಣಿಕೆಗೆ 31,500 ರೂ. ಭರಿಸಿದ್ದು, ಭ್ರಷ್ಟಾಚಾರವಲ್ಲವೇ ಎಂದು ಪ್ರಶ್ನಿಸಿದರು.
ಸಮ್ಮೇಳನಕ್ಕೆ 30 ಕೋಟಿ ರೂ.ಗಳನ್ನು ವ್ಯಯಿಸಲಾಗಿದೆ ಎಂದು ಲೆಕ್ಕಪತ್ರಗಳನ್ನು ನೀಡಲಾಗಿದೆ. 10 ರೂ.ಗಳಲ್ಲಿ ಆಗಬೇಕಾದ ಕೆಲಸಗಳಿಗೆ ದುಪ್ಪಟ್ಟು 100 ರೂ. ಸೇರಿಸಿ ಸುಳ್ಳಿನ ಲೆಕ್ಕವನ್ನು ನೀಡಲಾಗಿದೆ. ಸುಮಾರು 15 ಸಾವಿರಕ್ಕೂ ಹೆಚ್ಚು ಭ್ರಷ್ಟಾಚಾರ ನಡೆದಿದ್ದು, ಸಾಹಿತ್ಯದ ಹೆಸರಿನಲ್ಲಿ ಮಂಡ್ಯ ಜಿಲ್ಲೆಗೆ ಕಳಂಕ ತರುವ ಪ್ರಯತ್ನದಲ್ಲಿ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಕಾರ್ಯ ನಿರ್ವಹಿಸಿ ಜಿಲ್ಲೆಯ ಮಾನ-ಮರ್ಯಾದೆಯನ್ನು ಹರಾಜು ಹಾಕಿದ್ದಾರೆ ಎಂದು ಕಿಡಿಕಾರಿದರು.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಜಾ.ದಳದ ಎಲ್ಲ ಮಾಜಿ ಶಾಸಕರು ಸಮ್ಮೇಳನ ಯಶಸ್ಸಿಗೆ ಸಹಕಾರ ನೀಡಿದ್ದೇವೆ. ಆದರೆ ಸಮ್ಮೇಳನದ ಹೆಸರಿನಲ್ಲಿ 28 ಉಪ ಸಮಿತಿಗಳನ್ನು ರಚಿಸಿ ವ್ಯಾಪಕ ಭ್ರಷ್ಟಾಚಾರ ನಡೆಸಿರುವುದು ಕಂಡುಬಂದಿದ್ದು, ಉನ್ನತ ಮಟ್ಟದ ತನಿಖೆಯಾಗಬೇಕೆಂದು ಒತ್ತಾಯಿಸಿದರು.
ಸಾರಿಗೆ, ವಸತಿ,ವೇದಿಕೆ ಮತ್ತು ಆಹಾರ ಸಮಿತಿಯಲ್ಲಿ ವ್ಯಾಪಕ ಭ್ರಷ್ಟಾಚಾರವಾಗಿದ್ದು, ವೇದಿಕೆ ಸಮಿತಿಗೆ ಸುಮಾರು ತಲಾ 8.70 ಕೋಟಿ ರೂ. ಪಾವತಿಸಲಾಗಿದೆ. ಸದರಿ ಹಣದಲ್ಲಿ ದುಪ್ಪಟ್ಟು ವಸ್ತುಗಳ ಖರೀದಿ ನಡೆಸಬಹುದಿತ್ತು. ಈ ಹಿನ್ನೆಲೆಯಲ್ಲಿ ಹಾಲಿ ಅಥವಾ ಮಾಜಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ, ಸಿಒಡಿ, ಇಡಿ ಅಥವಾ ಸಿಬಿಐ ತನಿಖೆಯಾಗಲಿ ಎಂದು ಒತ್ತಾಯಿಸಿದರು.
ಜರ್ಮನ್ ಟೆಂಟ್ ನಿರ್ಮಾಣಕ್ಕೆ ವಾಸ್ತವವಾಗಿ ಚದರ ಅಡಿಗೆ 15 ರಿಂದ 18 ರೂ. ಬಾಡಿಗೆ ಇದೆ, 68 ರೂ. ವ್ಯಯಿಸಿದಿರುವ ಹೊಣೆಗಾರಿಕೆಯನ್ನು ಮಳವಳ್ಳಿ ಶಾಸಕರು ಹೊರಬೇಕು ಎಂದು ಒತ್ತಾಯಿಸಿದ ಅವರು, ಒಟ್ಟಾರೆ ಸಮ್ಮೇಳನದ ಹೆಸರಿನಲ್ಲಿ ಸುಮಾರು 15 ಕೋಟಿ ಭ್ರಷ್ಟಾಚಾರವಾಗಿದೆ ಎಂದು ದೂರಿದರು.
ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆದು, ಭ್ರಷ್ಟಾಚಾರ ನಡೆಸಿರುವ ಸಂಬಂಧಿಸಿದ ಅಧಿಕಾರಿ ವಿರುದ್ಧ ಕ್ರಮ ಆಗಬೇಕು. ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಬಹಳ ಎಚ್ಚರಿಕೆಯಿಂದ ಇದನ್ನು ನಿಭಾಯಿಸಬೇಕು. ಇದಕ್ಕೆಲ್ಲ ಸಮ್ಮೇಳನದ ಕೋಶಾಧ್ಯಕ್ಷರಾಗಿದ್ದ ಜಿಲ್ಲಾಧಿಕಾರಿ ಡಾ. ಕುಮಾರ ಅವರು ಕುಮ್ಮಕ್ಕು ನೀಡಿರಬಹುದು ಎಂಬ ಅನುಮಾನ ಮೂಡಿದೆ ಎಂದರು.
ಕಸಾಪ ರಾಜ್ಯಾಧ್ಯಕ್ಷ ಡಾ. ಮಹೇಶ್ ಜೋಶಿ ಅವರು ಸಮ್ಮೇಳನದ ಖರ್ಚಿನ ಬಗ್ಗೆ ಲೆಕ್ಕ ನೀಡದಿರುವುದು ಖಂಡನಾರ್ಹ ಎಂದ ಅವರು, ಈ ಸಂಬಂಧ ರಾಜ್ಯಪಾಲರು ಮತ್ತು ಕೇಂದ್ರ ಸರ್ಕಾರಕ್ಕೆ ದೂರು ನೀಡುವ ಇಂಗಿತ ವ್ಯಕ್ತಪಡಿಸಿದರು.
ಲೂಟಿ ಹೊಡೆಯಲು ಕಾವೇರಿ ಆರತಿ ಬೇಕೇ?
ಕಾವೇರಿ ನದಿ ಪಾತ್ರದ ಕನ್ನಂಬಾಡಿ ಅಣೆಕಟ್ಟೆ ಬಳಿ 92 ಕೋಟಿ ರೂ. ವೆಚ್ಚದಲ್ಲಿ ಕಾವೇರಿ ಆರತಿ ಮಾಡಲು ಸರ್ಕಾರ ಹೊರಟಿರುವುದು ಹಣ ಲೂಟಿ ಮಾಡಲು ಎಂದು ಆರೋಪಿಸಿದ ಅನ್ನದಾನಿ ಅವರು, ಕಾವೇರಿ ಆರತಿ ಬದಲು ನಾಲೆಯ ಆಧುನೀಕರಣಕ್ಕೆ ಒತ್ತು ನೀಡಲಿ, ಆ ಮೂಲಕ ಮೌಢ್ಯಾಚರಣೆಗೆ ಅಂತ್ಯವಾಡಲಿ ಎಂದರು.
ಸುದ್ದಿಗೋಷ್ಠಿಯಲ್ಲಿ ಜಾ.ದಳ ಮುಖಂಡರಾದ ಸದಾನಂದ, ಸಾತನೂರು ಜಯರಾಂ, ಶ್ರೀಧರ್, ಹನುಮಂತು, ಪುಟ್ಟಬುದ್ದಿ, ಸಿದ್ದಾಚಾರಿ, ದೊರೆಸ್ವಾಮಿ ಇತರರಿದ್ದರು.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…