ಮಂಡ್ಯ

ʻ ಮೈಸೂರು ವಿವಿʼಯೊಂದಿಗೆ ವಿಲೀನ ಸೂಕ್ತ : ಮರಿತಿಬ್ಬೇಗೌಡ ಪ್ರತಿಪಾದನೆ

ಮಂಡ್ಯ: ಉನ್ನತ ಶಿಕ್ಷಣದಲ್ಲಿ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ನೀಡುವ ನಿಟ್ಟಿನಲ್ಲಿ ನೂತನವಾಗಿ ಪ್ರಾರಂಭಿಸಿರುವ ಮಂಡ್ಯ, ಚಾಮರಾಜನಗರ ಮತ್ತು ಹಾಸನ ವಿವಿ ಗಳನ್ನು ಮೈಸೂರು ವಿಶ್ವವಿದ್ಯಾನಿಲಯ ಜೊತೆ ವಿಲೀನ ಮಾಡುವುದು ಸೂಕ್ತ ಎಂದು ವಿಧಾನ ಪರಿಷತ್ ಮಾಜಿ ಉಪಸಭಾಪತಿ ಮರಿತಿಬ್ಬೇಗೌಡ ಪ್ರತಿಪಾದಿಸಿದರು.

ಮಂಡ್ಯದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಂಡ್ಯ ಚಾಮರಾಜನಗರ ಹಾಸನಗಳಲ್ಲಿರುವ ಸ್ನಾತಕೋತ್ತರ ಕೇಂದ್ರಗಳನ್ನು ಉಳಿಸಿಕೊಂಡು ಮೈಸೂರು ವಿವಿಯಿಂದಲೇ ಪದವಿ, ಸ್ನಾತಕೋತ್ತರ ಪದವಿ ಹಾಗೂ ಸಂಶೋಧನೆ ಕೈಗೊಳ್ಳಲು ಅವಕಾಶ ಕಲ್ಪಿಸಿಕೊಡಬೇಕು ಹಾಗೂ ಬೋಧಕ ಹುದ್ದೆ ಮತ್ತು ಬ್ಯಾಕ್‌ಲಾಗ್ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದರು.

ಮಂಡ್ಯ ವಿವಿಯನ್ನು ಮೈಸೂರು ವಿವಿಯಲ್ಲಿ ವಿಲೀನ ಮಾಡುವುದರಿಂದ ಯಾವುದೇ ವಿದ್ಯಾರ್ಥಿಗಳು, ಪ್ರೊಫೆಸರ್‌ಗಳು ಅಥವಾ ಯಾವುದೇ ಕೋರ್ಸುಗಳು ಸ್ಥಾನಪಲ್ಲಟವಾಗುವುದಿಲ್ಲ. ಈಗಿರುವಂತೆಯೇ ಅವುಗಳ ಅಧ್ಯಯನವನ್ನು ಮುಂದುವರಿಸಬಹುದು. ಮೈಸೂರು ವಿವಿಗೆ ವಿಲೀನವಾದರೆ ಎಲ್ಲವೂ ಮೈಸೂರಿಗೆ ವರ್ಗಾವಣೆಯಾಗುತ್ತದೆ ಎಂದು ಕೆಲವರು ಮಾಡುತ್ತಿರುವ ಅಪಪ್ರಚಾರವನ್ನು ನಿಲ್ಲಿಸಬೇಕು ಎಂದು ಕರೆ ನೀಡಿದರು.

ವಿದ್ಯಾರ್ಥಿಗಳ ಹಾಗು ಸಮಾಜದ ಹಿತದೃಷ್ಟಿಯಿಂದ ಗುಣಾತ್ಮಕ ಶಿಕ್ಷಣ ಕೊಡುವ ಸಾಮರ್ಥ್ಯವಿರದ ಮಂಡ್ಯ ವಿವಿಯನ್ನು, ಗುಣಾತ್ಮಕ ಶಿಕ್ಷಣ ನೀಡುವ ಸಾಮರ್ಥ್ಯ ಹೊಂದಿರುವ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ವಿಲೀನಗೊಳಿಸುವುದರಿಂದ ಈ ಮೂರು ಜಿಲ್ಲೆಯ ಗ್ರಾಮೀಣ ಹಾಗು ಬಡ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ, ಅವರ ಭವಿಷ್ಯ ಉಜ್ವಲವಾಗುತ್ತದೆ ಎಂದು ಪ್ರತಿಪಾದಿಸಿದರು.

ಸರ್ಕಾರ ವಿಶ್ವವಿದ್ಯಾನಿಲಯಗಳ ಬಗ್ಗೆ ಅಧ್ಯಯನ ಮಾಡದೇ ಮಂಡ್ಯ, ಚಾಮರಾಜನಗರ ಮತ್ತು ಹಾಸನಗಳಲ್ಲಿ ಕೇವಲ ಒಂದು ಕುಲಪತಿಯ ಮತ್ತು ಕುಲಸಚಿವರ ಹುದ್ದೆಗಾಗಿ ಸ್ಥಾಪಿತವಾದ ವಿಶ್ವವಿದ್ಯಾನಿಲಯಗಳಾಗಿವೆ ಎಂದು ಆರೋಪಿಸಿದರು.

ಮೈಸೂರು ವಿವಿಗೆ ತನ್ನದೇ ಆದ ಘನತೆಯಿದೆ
೧೦೮ ವರ್ಷಗಳ ಇತಿಹಾಸ ಹೊಂದಿರುವ ಮೈಸೂರು ವಿವಿಯಿಂದ ಪ್ರಮಾಣ ಪತ್ರಗಳನ್ನು ಪಡೆದರೆ ಅಂತಾರಾಷ್ಟ್ರೀಯ, ರಾಷ್ಟ್ರೀಯ ಮಟ್ಟದಲ್ಲಿ ಒಂದು ಮೌಲ್ಯ ಇರುತ್ತದೆ. ರಾಷ್ಟಕವಿ ಕುವೆಂಪು ರಾಧಾಕೃಷ್ಣನ್ ರವರಂತಹ ಸಾವಿರಾರು ಮಹಾ ಮೇಧಾವಿಗಳು ಇದ್ದ, ಅಧ್ಯಯನ ನಡೆಸಿರುವ ಮೈಸೂರು ವಿವಿಗೆ ತನ್ನದೇ ಆದ ಘನತೆ ಇದೆ. ಇಂತಹ ವಿವಿಯಡಿಯಲ್ಲಿ ಕಲಿಯಬೇಕೆಂಬುದು ವಿದ್ಯಾರ್ಥಿಗಳ ಕನಸು ಆಗಿರುತ್ತದೆ ಎಂದರು.

ವಿವಿಧ ಸರ್ಕಾರಗಳು ಈಗಾಗಲೇ ತೆರೆದಿರುವ ಸಂಗೀತ ವಿವಿ, ಜಾನಪದ ವಿವಿ, ಸಂಸ್ಕೃತ ವಿವಿ ಹಾಗೂ ಹಂಪಿಯ ಕನ್ನಡ ವಿವಿ ಹಲವು ರೀತಿಯಲ್ಲಿ ಹಿನ್ನಡೆ ಅನುಭವಿಸುತ್ತಿವೆ. ಮತ್ತೆ ಹೊಸ ವಿವಿಗಳನ್ನು ಪ್ರಾರಂಭಿಸಿ ಸಾಧಿಸುವುದಾದರೂ ಏನು ಎಂದು ಪ್ರಶ್ನಿಸಿದರು.

ಮಂಡ್ಯ ವಿವಿ ಯಲ್ಲಿ ಪದವಿಗಳಿಸಿದ ವಿದ್ಯಾರ್ಥಿಗಳು ಬೇರೊಂದು ವಿವಿಯಲ್ಲಿ ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆಯುವುದು ಕನಸಿನ ಮಾತಾಗುತ್ತದೆ ಎಂದು ಎಚ್ಚರಿಸಿದರು.

ಅಂಕಿ-ಅಂಶ ಸಮೇತ ವಿವರ ಮಂಡನೆ
ಐದು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಮಂಡ್ಯ ವಿವಿ ಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿ ಹಲವು ಕೋರ್ಸುಗಳು ಮುಚ್ಚುವಂತಾಗಿದೆ. ಇರುವ ಕೆಲವೇ ಕೆಲವು ಕಾಯಂ ಅಧ್ಯಾಪಕರಿಗೆ ಇಂದಿಗೂ ಕಾಲೇಜು ಶಿಕ್ಷಣ ಇಲಾಖೆಯೇ ವೇತನ ನೀಡುತ್ತಿದೆ. ಇಲ್ಲಿ ೧೨ ಕೋರ್ಸ್ಗಳು ಮಾತ್ರ ಇದ್ದರೆ, ಮೈಸೂರು ವಿವಿ ಯಲ್ಲಿ ೪೨ ವಿಭಾಗಗಳಲ್ಲಿ ಸ್ನಾತಕೋತ್ತರ ಪದವಿ ಪಡೆಯಬಹುದು.ಮೈಸೂರು ವಿವಿ ವ್ಯಾಪ್ತಿಯ ಕಾಲೇಜುಗಳಿಗಿಂತ ಮಂಡ್ಯ ವಿವಿ ವ್ಯಾಪ್ತಿಯ ಕಾಲೇಜುಗಳಲ್ಲಿ ಅಧಿಕ ಶುಲ್ಕ ತೆರುವಂತಾಗಿದೆ ಎಂಬುದನ್ನು ಅಂಕಿಅಂಶಗಳ ಸಮೇತ ವಿವರಿಸಿದರು.

೨ ಕೋಟಿ ಅನುದಾನ ನಿಗದಿಪಡಿಸಿ ಕೇವಲ ೫೦ ಲಕ್ಷ ರೂ. ಮಾತ್ರ ನೀಡಲಾಗಿದೆ.ಇದುವರೆಗೆ ಒಬ್ಬರೇ ಒಬ್ಬರು ಅಧ್ಯಾಪಕರನ್ನು ನೇಮಕ ಮಾಡಲು ಸಾಧ್ಯವಾಗಿಲ್ಲ. ಇಂತಹ ಸನ್ನಿವೇಶದಲ್ಲಿ ಮಂಡ್ಯ ವಿವಿ ಯನ್ನು ಸಮರ್ಪಕವಾಗಿ ನಡೆಸಲು ಸಾಧ್ಯವೇ ಎಂದು ಪ್ರಶ್ನಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಲೇಜು ಶಿಕ್ಷಣ ಇಲಾಖೆ ನಿವೃತ್ತ ಜಂಟಿ ನಿರ್ದೇಶಕ ಡಾ.ಎಂ.ರಾಮೇಗೌಡ ವಿಶ್ರಾಂತ ಪ್ರಾಂಶುಪಾಲರುಗಳಾದ ಎಸ್.ರಾಮು, ನಾಗಾನಂದ, ಕೀಲಾರ ಜಯರಾಮು, ನಿವೃತ್ತ ಪ್ರಾಧ್ಯಾಪಕ ಶಂಕರೇಗೌಡ ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟ ವ್ಯಕ್ತಿ

ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…

2 hours ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…

2 hours ago

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

2 hours ago

ಸಚಿವ ಡಾ.ಜಿ.ಪರಮೇಶ್ವರ್‌ ಬೆಟ್ಟಿಂಗ್‌ ಕೇಸ್‌ಗೆ ತಡೆಯಾಜ್ಞೆ ನೀಡಿದ ಹೈಕೋರ್ಟ್‌

ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ವಿರುದ್ಧದ ಬೆಟ್ಟಿಂಗ್‌ ಹೇಳಿಕೆ ಪ್ರಕರಣಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ತಮ್ಮ ವಿರುದ್ಧ ದಾಖಲಾಗಿರುವ ಬೆಟ್ಟಿಂಗ್…

2 hours ago

ಪಶ್ಚಿಮ ಬಂಗಾಳದಲ್ಲಿ 89.93%, ತಮಿಳುನಾಡಿನಲ್ಲಿ 82.24% ಮತದಾನ

ನವದೆಹಲಿ: ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಬಹಳ ಉತ್ಸಾಹದಿಂದ ಭಾಗಿಯಾಗಿದ್ದರು. ತಮಿಳುನಾಡಿನಲ್ಲಿ ಶೇ.82.24% ಮತದಾನ ದಾಖಲಾಗಿದ್ದು,…

2 hours ago

ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದರೂ ನೇಣಿಗೆ ಶರಣಾದ ಬಾಲಕಿ…!

ನಂಜನಗೂಡು: ನಂಜನಗೂಡು ನಗರದಲ್ಲಿರುವ ಶ್ರೀ ಗುರುಮಲ್ಲೇಶ್ವರ ಖಾಸಗಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಬಾಲಕಿ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿದ್ದರು…

3 hours ago