ಮಂಡ್ಯ

ʻ ಮೈಸೂರು ವಿವಿʼಯೊಂದಿಗೆ ವಿಲೀನ ಸೂಕ್ತ : ಮರಿತಿಬ್ಬೇಗೌಡ ಪ್ರತಿಪಾದನೆ

ಮಂಡ್ಯ: ಉನ್ನತ ಶಿಕ್ಷಣದಲ್ಲಿ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ನೀಡುವ ನಿಟ್ಟಿನಲ್ಲಿ ನೂತನವಾಗಿ ಪ್ರಾರಂಭಿಸಿರುವ ಮಂಡ್ಯ, ಚಾಮರಾಜನಗರ ಮತ್ತು ಹಾಸನ ವಿವಿ ಗಳನ್ನು ಮೈಸೂರು ವಿಶ್ವವಿದ್ಯಾನಿಲಯ ಜೊತೆ ವಿಲೀನ ಮಾಡುವುದು ಸೂಕ್ತ ಎಂದು ವಿಧಾನ ಪರಿಷತ್ ಮಾಜಿ ಉಪಸಭಾಪತಿ ಮರಿತಿಬ್ಬೇಗೌಡ ಪ್ರತಿಪಾದಿಸಿದರು.

ಮಂಡ್ಯದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಂಡ್ಯ ಚಾಮರಾಜನಗರ ಹಾಸನಗಳಲ್ಲಿರುವ ಸ್ನಾತಕೋತ್ತರ ಕೇಂದ್ರಗಳನ್ನು ಉಳಿಸಿಕೊಂಡು ಮೈಸೂರು ವಿವಿಯಿಂದಲೇ ಪದವಿ, ಸ್ನಾತಕೋತ್ತರ ಪದವಿ ಹಾಗೂ ಸಂಶೋಧನೆ ಕೈಗೊಳ್ಳಲು ಅವಕಾಶ ಕಲ್ಪಿಸಿಕೊಡಬೇಕು ಹಾಗೂ ಬೋಧಕ ಹುದ್ದೆ ಮತ್ತು ಬ್ಯಾಕ್‌ಲಾಗ್ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದರು.

ಮಂಡ್ಯ ವಿವಿಯನ್ನು ಮೈಸೂರು ವಿವಿಯಲ್ಲಿ ವಿಲೀನ ಮಾಡುವುದರಿಂದ ಯಾವುದೇ ವಿದ್ಯಾರ್ಥಿಗಳು, ಪ್ರೊಫೆಸರ್‌ಗಳು ಅಥವಾ ಯಾವುದೇ ಕೋರ್ಸುಗಳು ಸ್ಥಾನಪಲ್ಲಟವಾಗುವುದಿಲ್ಲ. ಈಗಿರುವಂತೆಯೇ ಅವುಗಳ ಅಧ್ಯಯನವನ್ನು ಮುಂದುವರಿಸಬಹುದು. ಮೈಸೂರು ವಿವಿಗೆ ವಿಲೀನವಾದರೆ ಎಲ್ಲವೂ ಮೈಸೂರಿಗೆ ವರ್ಗಾವಣೆಯಾಗುತ್ತದೆ ಎಂದು ಕೆಲವರು ಮಾಡುತ್ತಿರುವ ಅಪಪ್ರಚಾರವನ್ನು ನಿಲ್ಲಿಸಬೇಕು ಎಂದು ಕರೆ ನೀಡಿದರು.

ವಿದ್ಯಾರ್ಥಿಗಳ ಹಾಗು ಸಮಾಜದ ಹಿತದೃಷ್ಟಿಯಿಂದ ಗುಣಾತ್ಮಕ ಶಿಕ್ಷಣ ಕೊಡುವ ಸಾಮರ್ಥ್ಯವಿರದ ಮಂಡ್ಯ ವಿವಿಯನ್ನು, ಗುಣಾತ್ಮಕ ಶಿಕ್ಷಣ ನೀಡುವ ಸಾಮರ್ಥ್ಯ ಹೊಂದಿರುವ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ವಿಲೀನಗೊಳಿಸುವುದರಿಂದ ಈ ಮೂರು ಜಿಲ್ಲೆಯ ಗ್ರಾಮೀಣ ಹಾಗು ಬಡ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ, ಅವರ ಭವಿಷ್ಯ ಉಜ್ವಲವಾಗುತ್ತದೆ ಎಂದು ಪ್ರತಿಪಾದಿಸಿದರು.

ಸರ್ಕಾರ ವಿಶ್ವವಿದ್ಯಾನಿಲಯಗಳ ಬಗ್ಗೆ ಅಧ್ಯಯನ ಮಾಡದೇ ಮಂಡ್ಯ, ಚಾಮರಾಜನಗರ ಮತ್ತು ಹಾಸನಗಳಲ್ಲಿ ಕೇವಲ ಒಂದು ಕುಲಪತಿಯ ಮತ್ತು ಕುಲಸಚಿವರ ಹುದ್ದೆಗಾಗಿ ಸ್ಥಾಪಿತವಾದ ವಿಶ್ವವಿದ್ಯಾನಿಲಯಗಳಾಗಿವೆ ಎಂದು ಆರೋಪಿಸಿದರು.

ಮೈಸೂರು ವಿವಿಗೆ ತನ್ನದೇ ಆದ ಘನತೆಯಿದೆ
೧೦೮ ವರ್ಷಗಳ ಇತಿಹಾಸ ಹೊಂದಿರುವ ಮೈಸೂರು ವಿವಿಯಿಂದ ಪ್ರಮಾಣ ಪತ್ರಗಳನ್ನು ಪಡೆದರೆ ಅಂತಾರಾಷ್ಟ್ರೀಯ, ರಾಷ್ಟ್ರೀಯ ಮಟ್ಟದಲ್ಲಿ ಒಂದು ಮೌಲ್ಯ ಇರುತ್ತದೆ. ರಾಷ್ಟಕವಿ ಕುವೆಂಪು ರಾಧಾಕೃಷ್ಣನ್ ರವರಂತಹ ಸಾವಿರಾರು ಮಹಾ ಮೇಧಾವಿಗಳು ಇದ್ದ, ಅಧ್ಯಯನ ನಡೆಸಿರುವ ಮೈಸೂರು ವಿವಿಗೆ ತನ್ನದೇ ಆದ ಘನತೆ ಇದೆ. ಇಂತಹ ವಿವಿಯಡಿಯಲ್ಲಿ ಕಲಿಯಬೇಕೆಂಬುದು ವಿದ್ಯಾರ್ಥಿಗಳ ಕನಸು ಆಗಿರುತ್ತದೆ ಎಂದರು.

ವಿವಿಧ ಸರ್ಕಾರಗಳು ಈಗಾಗಲೇ ತೆರೆದಿರುವ ಸಂಗೀತ ವಿವಿ, ಜಾನಪದ ವಿವಿ, ಸಂಸ್ಕೃತ ವಿವಿ ಹಾಗೂ ಹಂಪಿಯ ಕನ್ನಡ ವಿವಿ ಹಲವು ರೀತಿಯಲ್ಲಿ ಹಿನ್ನಡೆ ಅನುಭವಿಸುತ್ತಿವೆ. ಮತ್ತೆ ಹೊಸ ವಿವಿಗಳನ್ನು ಪ್ರಾರಂಭಿಸಿ ಸಾಧಿಸುವುದಾದರೂ ಏನು ಎಂದು ಪ್ರಶ್ನಿಸಿದರು.

ಮಂಡ್ಯ ವಿವಿ ಯಲ್ಲಿ ಪದವಿಗಳಿಸಿದ ವಿದ್ಯಾರ್ಥಿಗಳು ಬೇರೊಂದು ವಿವಿಯಲ್ಲಿ ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆಯುವುದು ಕನಸಿನ ಮಾತಾಗುತ್ತದೆ ಎಂದು ಎಚ್ಚರಿಸಿದರು.

ಅಂಕಿ-ಅಂಶ ಸಮೇತ ವಿವರ ಮಂಡನೆ
ಐದು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಮಂಡ್ಯ ವಿವಿ ಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿ ಹಲವು ಕೋರ್ಸುಗಳು ಮುಚ್ಚುವಂತಾಗಿದೆ. ಇರುವ ಕೆಲವೇ ಕೆಲವು ಕಾಯಂ ಅಧ್ಯಾಪಕರಿಗೆ ಇಂದಿಗೂ ಕಾಲೇಜು ಶಿಕ್ಷಣ ಇಲಾಖೆಯೇ ವೇತನ ನೀಡುತ್ತಿದೆ. ಇಲ್ಲಿ ೧೨ ಕೋರ್ಸ್ಗಳು ಮಾತ್ರ ಇದ್ದರೆ, ಮೈಸೂರು ವಿವಿ ಯಲ್ಲಿ ೪೨ ವಿಭಾಗಗಳಲ್ಲಿ ಸ್ನಾತಕೋತ್ತರ ಪದವಿ ಪಡೆಯಬಹುದು.ಮೈಸೂರು ವಿವಿ ವ್ಯಾಪ್ತಿಯ ಕಾಲೇಜುಗಳಿಗಿಂತ ಮಂಡ್ಯ ವಿವಿ ವ್ಯಾಪ್ತಿಯ ಕಾಲೇಜುಗಳಲ್ಲಿ ಅಧಿಕ ಶುಲ್ಕ ತೆರುವಂತಾಗಿದೆ ಎಂಬುದನ್ನು ಅಂಕಿಅಂಶಗಳ ಸಮೇತ ವಿವರಿಸಿದರು.

೨ ಕೋಟಿ ಅನುದಾನ ನಿಗದಿಪಡಿಸಿ ಕೇವಲ ೫೦ ಲಕ್ಷ ರೂ. ಮಾತ್ರ ನೀಡಲಾಗಿದೆ.ಇದುವರೆಗೆ ಒಬ್ಬರೇ ಒಬ್ಬರು ಅಧ್ಯಾಪಕರನ್ನು ನೇಮಕ ಮಾಡಲು ಸಾಧ್ಯವಾಗಿಲ್ಲ. ಇಂತಹ ಸನ್ನಿವೇಶದಲ್ಲಿ ಮಂಡ್ಯ ವಿವಿ ಯನ್ನು ಸಮರ್ಪಕವಾಗಿ ನಡೆಸಲು ಸಾಧ್ಯವೇ ಎಂದು ಪ್ರಶ್ನಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಲೇಜು ಶಿಕ್ಷಣ ಇಲಾಖೆ ನಿವೃತ್ತ ಜಂಟಿ ನಿರ್ದೇಶಕ ಡಾ.ಎಂ.ರಾಮೇಗೌಡ ವಿಶ್ರಾಂತ ಪ್ರಾಂಶುಪಾಲರುಗಳಾದ ಎಸ್.ರಾಮು, ನಾಗಾನಂದ, ಕೀಲಾರ ಜಯರಾಮು, ನಿವೃತ್ತ ಪ್ರಾಧ್ಯಾಪಕ ಶಂಕರೇಗೌಡ ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

5 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

5 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

6 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

6 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

6 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

6 hours ago