Mysore
21
clear sky

Social Media

ಭಾನುವಾರ, 15 ಮಾರ್ಚ್ 2026
Light
Dark

ಕೆರೆಗಳಿಗೆ ನೀರು ತುಂಬಿಸಲು ಸೂಚಿಸಿದ ಸಚಿವ ಎನ್ ಚಲುವರಾಯಸ್ವಾಮಿ

Minister N. Cheluvarayaswamy instructed to fill the lakes with water.

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೆರೆ, ಕಟ್ಟೆಗಳನ್ನು ತುಂಬಿಸಲು ಆದ್ಯತೆ ನೀಡಿ. ಇದರಿಂದ ಮುಂದಿನ ದಿನಗಳಲ್ಲಿ ರೈತರಿಗೆ ಉಪಯುಕ್ತವಾಗಲಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು.

ಅವರು ಇಂದು ಕೆ‌.ಆರ್.ಎಸ್ ನ ಕಾವೇರಿ ಸಭಾಂಗಣದಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ನಡೆಸಿ ಮಾತನಾಡಿದರು. ಇದು ಉತ್ತಮ ಸಮಯವಾಗಿದ್ದು, ತಾಲ್ಲೂಕುಗಳ ಕೊನೆಯ ಭಾಗದಲ್ಲಿರುವ ಕೆರೆಗಳಿಗೆ ನೀರು ತುಂಬುವಂತೆ ನೋಡಿಕೊಳ್ಳಿ ಎಂದರು.

ಕೆ.ಆರ್.ಎಸ್ ಜಲಾಶಯ ತುಂಬಿದ್ದು, ರೈತರು, ಜನಪ್ರತಿನಿಧಿಗಳು ಹಾಗೂ ಸಂಘಟನೆಗಳಿಂದ ಕೃಷಿ ಪದ್ಧತಿಗೆ ನೀರು ಸಿಗುತ್ತಿಲ್ಲ ಎಂಬ ದೂರು ಬಾರದಂತೆ ನೋಡಿಕೊಂಡು ಎಚ್ಚರಿಕೆಯಿಂದ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದರು.

ಕೆರೆಗಳಿಂದ ಹೂಳು ತೆಗೆಯುವ ಕೆಲಸ ಹಾಗೂ‌ ಕೆರೆಗಳ ನಿರ್ವಹಣೆಗೆ ಸಂಬಂಧಿಸಿದಂತೆ ಅನುದಾನದ ಕೊರತೆ ಇಲ್ಲ. ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಅನುದಾನ ಪಡೆದು ಕೆರೆಗಳ ನಿರ್ವಹಣೆಯ ಕಾಮಗಾರಿಗಳನ್ನು ನಡೆಸಿ ಎಂದರು.

ರೈತರ ಪರವಾಗಿ ಸದಾ ನಮ್ಮ ಸರ್ಕಾರ ಕಾರ್ಯನಿರ್ವಹಿಸುತ್ತದೆ. ಮುಂಗಾರು ಬೆಳೆಗೆ ಗುಣಮಟ್ಟದ ಬಿತ್ತನೆ ಬೀಜ, ಗೊಬ್ಬರ ಒದಗಿಸುವಂತೆ ಕೃಷಿ ಇಲಾಖೆಗೆ ಸೂಚನೆ ನೀಡಲಾಗಿದೆ. ಕೃಷಿ ಚಟುವಟಿಕೆಗಳು ಚುರುಕಾಗಿದ್ದು, ರೈತರಿಗೆ ಬೇಕಿರುವ ಮಾಹಿತಿಯನ್ನು ಒದಗಿಸಿ ಎಂದರು‌.

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಅವರು ಮಾತನಾಡಿ ಸದ್ಯದ ಪರಿಸ್ಥಿತಿಯಲ್ಲಿ ಕೃಷಿಗೆ ಯಾವುದೇ ತೊಂದರೆ ಇಲ್ಲ. ಬೇಸಿಗೆ ಬೆಳೆಗೆ ಬೇಕಿರುವ ನೀರಿನ ಬಗ್ಗೆ ಯೋಜನೆ ರೂಪಿಸಬೇಕಿದೆ ಎಂದರು.

ಜಿಲ್ಲಾಧಿಕಾರಿ ಡಾ: ಕುಮಾರ ಅವರು. ಕೆ.ಆರ್.ಎಸ್.ಅಣೆಕಟ್ಟಿನಲ್ಲಿ ಕಳೆದ 10 ವರ್ಷಗಳಲ್ಲಿ ಬೀತಿನ ಪ್ರಮಾಣ ಹಾಗೂ ನೀರು ಹರಿಸಿದ ವಿವರಗಳನ್ನು ಸಭೆಗೆ ವಿವರಿಸಿದರು.

ಸಭೆಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ರವಿಕುಮಾರ್, ವಿಧಾನ ಪರಿಷತ್ ಶಾಸಕ ಮಧು.ಜಿ.ಮಾದೇಗೌಡ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಕಾ.ನೀ.ನಿ.ನಿ ಅಧೀಕ್ಷಕ ಅಭಿಯಂತರ ರಘುರಾಮ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು ‌

Tags:
error: Content is protected !!