ಮಂಡ್ಯ : ಜನಸಾಮಾನ್ಯರನ್ನು ಲಂಚಕ್ಕೆ ಪೀಡಿಸುವ ಅಧಿಕಾರಿಗಳು, ಸಿಬ್ಬಂದಿಯನ್ನು ಒಂದು ಕ್ಷಣವೂ ಇಟ್ಟುಕೊಳ್ಳಬೇಡಿ. ಇದರಿಂದ ನಮಗೂ, ಸರ್ಕಾರಕ್ಕೂ ಕೆಟ್ಟ ಹೆಸರು. ಕೂಡಲೇ ಅಂತಹವರ ವಿರುದ್ಧ ಜಿಲ್ಲಾಧಿಕಾರಿ ಕ್ರಮ ವಹಿಸಬೇಕು. ಇದು ಜನರನ್ನು ಪೀಡಿಸುವವರಿಗೆ ಎಚ್ಚರಿಕೆ ಗಂಟೆಯಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ನಗರದ ಜಿ.ಪಂ. ಕಚೇರಿಯ ಕಾವೇರಿ ಸಭಾಂಗಣದಲ್ಲಿ ಶನಿವಾರ ನಡೆದ ಕೆಡಿಪಿ ಸಭೆಯಲ್ಲಿ ಮಳವಳ್ಳಿ ತಾಲ್ಲೂಕು ಮತ್ತು ಮಂಡ್ಯ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿನ ಭ್ರಷ್ಟಾಚಾರದ ಬಗ್ಗೆ ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಗಮನ ಸೆಳೆದಾಗ ಸಚಿವ ಎನ್.ಚಲುವರಾಯಸ್ವಾಮಿ, ಅಂತಹ ಅಧಿಕಾರಿಗಳನ್ನು ಜಿಲ್ಲೆಯಿಂದ ಕಳುಹಿಸಿ ಎಂದು ಆದೇಶಿಸಿದರು.
ಕೆಲವು ಅಧಿಕಾರಿಗಳ ಹೆಸರನ್ನು ಪ್ರಸ್ತಾಪಿಸಿ ಗಂಭೀರ ಆರೋಪ ಮಾಡಿದ ಶಾಸಕ ನರೇಂದ್ರಸ್ವಾಮಿ, ತಮ್ಮ ಕೆಲಸ ಕಾರ್ಯಗಳಿಗಾಗಿ ಸರ್ಕಾರಿ ಕಚೇರಿಗೆ ತೆರಳುವ ಜನರಿಗೆ ೫೦ ಸಾವಿರದಿಂದ ೧ ಲಕ್ಷ ರೂ.ವರೆಗೆ ಲಂಚಕ್ಕಾಗಿ ಅಧಿಕಾರಿಗಳು ಪೀಡಿಸುತ್ತಿದ್ದಾರೆ. ಮಳವಳ್ಳಿ ತಾಲ್ಲೂಕು ಕಚೇರಿ, ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಏಜೆಂಟರಿದ್ದಾರೆ. ಅವರಿಗೆ ಕಡಿವಾಣ ಹಾಕಿ ಎಂದು ಆಗ್ರಹಿಸಿದರು.
ಇದರಿಂದ ಕೋಪಗೊಂಡ ಸಚಿವ ಎನ್.ಚಲುವರಾಯಸ್ವಾಮಿ, ಇಂತಹ ಬೆಳವಣಿಗೆಯನ್ನು ಸಹಿಸಲಾಗದು. ಭ್ರಷ್ಟಾಚಾರಕ್ಕೆ ಕ್ಷಿಪ್ರ ಕಡಿವಾಣ ಹಾಕಲೇಬೇಕು ಎಂದು ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.
ಮಳವಳ್ಳಿಯ ಸೈಬರ್ ಸೆಂಟರ್ಗಳಲ್ಲಿ ಕುಳಿತು ನಕಲಿ ಭೂದಾಖಲೆಗಳನ್ನು ಸೃಷ್ಟಿಸಲಾಗುತ್ತಿದೆ. ೮೦೦ ಎಕರೆ ಸರ್ಕಾರಿ ಭೂಮಿ ಅಕ್ರಮವಾಗಿ ಖಾತೆಯಾಗಿರುವುದು ಬೆಳಕಿಗೆ ಬಂದಿದೆ. ರೆವಿನ್ಯೂ ಸ್ಟಾಫ್ ನೆಟ್ವರ್ಕ್ ಇದೆ. ಭೂ ಅಕ್ರಮಗಳು ಅವ್ಯಾಹತವಾಗಿ ನಡೆಯುತ್ತಿವೆ. ಇದಕ್ಕೆ ಕಡಿವಾಣ ಹಾಕಬೇಕು. ಒತ್ತುವರಿ ತೆರವುಗೊಳಿಸಬೇಕು ಎಂದು ಒತ್ತಾಯಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಡಾ.ಕುಮಾರ ಅವರು, ಅಕ್ರಮ ಖಾತೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ರಾಜ್ಯ ತಂಡವೂ ಬಂದು ಪರಿಶೀಲಿಸಿ ವರದಿ ನೀಡಿದೆ. ಅದರಂತೆ ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತುಗೊಳಿಸಿ, ಅವರ ವಿರುದ್ಧ ಈಗಾಗಲೇ ಎಫ್ಐಆರ್ ದಾಖಲಿಸಿ, ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗಿದೆ ಎಂದು ತಿಳಿಸಿದರು.
ಅಕ್ರಮ ಖಾತೆ ರದ್ದುಪಡಿಸಿ, ಆರ್ಟಿಸಿಯಲ್ಲಿ ಸರ್ಕಾರಿ ಜಾಗ ಎಂದು ನಮೂದಿಸುವ ಕೆಲಸ ನಡೆಯುತ್ತಿದೆ. ಮುಂದೆ ಯಾವುದೇ ಸಮಸ್ಯೆಯಾಗಬಾರದೆಂದು ಉಪ ವಿಭಾಗಾಧಿಕಾರಿ ಕೋರ್ಟ್ ಮೂಲಕವೇ ಕಾನೂನುಬದ್ಧವಾಗಿ ಮಾಡಲಾಗುತ್ತಿದೆ ಎಂದು ಹೇಳಿದರು.





