Mysore
20
broken clouds

Social Media

ಶನಿವಾರ, 21 ಫೆಬ್ರವರಿ 2026
Light
Dark

ಕಾಣೆಯಾದ ಮಕ್ಕಳ ವಿಶೇಷ ಕಾರ್ಯಪಡೆ ಸಮಿತಿ ಸಭೆ : ಜಿಲ್ಲಾ ಮಟ್ಟದಲ್ಲಿ ವಿಶೇಷ ಆಂದೋಲನ ಆಯೋಜಿಸಲು ಎಸ್ಪಿ ಸಲಹೆ

ಮಂಡ್ಯ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಕಾಣೆಯಾದ ಮಕ್ಕಳ ಪ್ರಕರಣಗಳ ಪತ್ತೆ ಕುರಿತು ‘ಕಾಣೆಯಾದ ಮಕ್ಕಳ ವಿಶೇಷ ಕಾರ್ಯಪಡೆ ಸಮಿತಿ’ ಸಭೆಯ ಪ್ರಗತಿ ಪರಿಶೀಲನಾ ಸಭೆಯು ಸಮಿತಿಯ ಅಧ್ಯಕ್ಷರಾದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಮಿತಿಯು ಪ್ರತಿ ತಿಂಗಳೂ ಸಭೆ ಕರೆದು ಜಿಲ್ಲೆಯಲ್ಲಿ ದಾಖಲಾದ ಮಕ್ಕಳ ಅಪಹರಣ ಮತ್ತು ಕಾಣೆಯಾದ ಮಕ್ಕಳ ಪ್ರಕರಣಗಳನ್ನು ಪರಿಶೀಲಿಸುವುದು, ಕಾಣೆಯಾದ ಮಕ್ಕಳ ಪೋಷಕರನ್ನು ಕರೆದು ದೂರಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಪಡೆದುಕೊಂಡು ಮಗುವಿನ ಪತ್ತೆಗೆ ಕ್ರಮ ವಹಿಸಬೇಕು. ಜಿಲ್ಲೆಯಲ್ಲಿ ಹಲವಾರು ವರ್ಷಗಳಿಂದ ಪತ್ತೆ ಹಚ್ಚಲು ಸಾಧ್ಯವಾಗದ ಪ್ರಕರಣಗಳ ಕುರಿತು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಿಲ್ಲಾ ಮಟ್ಟದಲ್ಲಿ ವಿಶೇಷ ಆಂದೋಲನವನ್ನು ಆಯೋಜಿಸಿ ಅನುಪಾಲನಾ ಮಾಡಬೇಕೆಂದು ಜಿಲ್ಲೆಯಲ್ಲಿನ ಎಲ್ಲ ಠಾಣೆಯ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಆನಂದ್ ಮಾತನಾಡಿ, ಅಪಹರಣ ಮತ್ತು ಕಾಣೆಯಾದ ಮಕ್ಕಳ ಕಳ್ಳ ಸಾಗಾಣಿಕೆ ಕುರಿತಂತೆ ಸ್ವ-ಸಹಾಯ ಗುಂಪುಗಳು ಹಾಗೂ ಸಾರ್ವಜನಿಕರಲ್ಲಿ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು. ಪೊಲೀಸ್ ಇಲಾಖೆಯು ಮಕ್ಕಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿ ಶೀಘ್ರವಾಗಿ ಪತ್ತೆ ಮಾಡಿ ಪೋಷಕರ ವಶಕ್ಕೆ ನೀಡಬೇಕೆಂದು ತಿಳಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಸ್.ರಶ್ಮಿ ಮಾತನಾಡಿ, ಕಾಣೆಯಾದ ಮಕ್ಕಳು ಸಾರ್ವಜನಿಕರಿಗೆ ಅಥವಾ ಮಕ್ಕಳ ಸಹಾಯವಾಣಿ, ಪೊಲೀಸ್ ಅವರಿಂದ ಬಾಲಮಂದಿರಕ್ಕೆ ದಾಖಲಾದ ಮಕ್ಕಳನ್ನು ಆಪ್ತ ಸಮಾಲೋಚನೆ ಮಾಡಿ ಮಗುವಿನ ಮಾಹಿತಿಯನ್ನು ಪಡೆದುಕೊಂಡು ಮಕ್ಕಳ ಕಲ್ಯಾಣ ಸಮಿತಿಯ ಎದುರು ಹಾಜರುಪಡಿಸಿ ಸಂಬಂಧಪಟ್ಟ ಪೋಷಕರ ವಶಕ್ಕೆ ಅಥವಾ ಸಂಬಂಧಪಟ್ಟ ಜಿಲ್ಲೆ ಮತ್ತು ರಾಜ್ಯಗಳಿಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಸಮಿತಿ ಸದಸ್ಯರಾದ ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಅಪರ ಜಿಲ್ಲಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರು, ಬಾಲ ನ್ಯಾಯ ಮಂಡಳಿಯ ಸದಸ್ಯರು ಭಾಗವಹಿಸಿದ್ದರು.

Tags:
error: Content is protected !!