Mysore
20
overcast clouds
Light
Dark

ಸಾಹಿತ್ಯ ಸಮ್ಮೇಳನ ಸಡಗರದ ಜೊತೆಗೆ ಪಾರದರ್ಶಕವಾಗಿರಲಿ: ಎನ್.ಚಲುವರಾಯಸ್ವಾಮಿ

ಬೆಂಗಳೂರು: ಇದೇ ಡಿಸೆಂಬರ್ ನಲ್ಲಿ ಮಂಡ್ಯದಲ್ಲಿ ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಹಿತ್ಯ, ಸಾಂಸ್ಕೃತಿಕ ಶ್ರೀಮಂತಿಕೆಯ ಜೊತೆಗೆ ಪಾರದರ್ಶಕವಾಗಿರಲಿ ಎಂದು ಕೃಷಿ ಸಚಿವರು ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಮಂಡ್ಯದಲ್ಲಿ ಡಿಸೆಂಬರ್ ತಿಂಗಳಿನಲ್ಲಿ ನಡೆಯುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಿದ್ದತೆ ಕುರಿತು ವಿಕಾಸ ಸೌಧದ ಸಭಾಂಗಣದಲ್ಲಿ ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ ಅವರ ಉಪಸ್ಥಿತಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಕೃಷಿ ಸಚಿವರು ಕಾರ್ಯಕ್ರಮದ ಸಂಘಟನೆ ಮತ್ತು ಅನುಷ್ಠಾನಕ್ಕೆ ಸಂಬಂಧಿಸಿದಂತೆ ಹಲವು ಸಲಹೆ ಸೂಚನೆಗಳನ್ನು ನೀಡಿದರು

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅತ್ಯಂತ ದೊಡ್ಡ ಐತಿಹಾಸಿಕ ಹಿನ್ನಲೆ ಇದೆ. ಇದರ ಚರಿತ್ರೆ ಹಾಗೂ ಮಹತ್ವಕ್ಕೆ ಯಾವುದೇ ಕುಂದು ಉಂಟಾಗದಂತೆ ಸಂಭ್ರಮ, ಸಾಹಿತ್ಯಿಕ ಮೌಲ್ಯ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕೊರತೆಯಾಗದಂತೆ ಸಂಘಟನೆಯನ್ನು ಮಾಡುವಂತೆ ಚಲುವರಾಯಸ್ವಾಮಿ ಸಲಹೆ ನೀಡಿದರು.

ಕಾರ್ಯಕ್ರಮದ ಸಂಘಟನೆಯಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವುದು ಹಾಗೂ ಆರ್ಥಿಕ ಹೊಣೆಗಾರಿಕೆಯನ್ನು ಸಂಪೂರ್ಣ ಜಿಲ್ಲಾಡಳಿತಕ್ಕೆ ಸೇರಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಸಹಕಾರ ಮತ್ತು ಸಹಯೋಗದೊಂದಿಗೆ ಹಿಂದೆಂದಿಗಿಂತ ವಿಜೃಂಭಣೆಯಿಂದ ಆಯೋಜಿಸುವಂತೆ ತಿಳಿಸಿದರು.

ಈಗಾಗಲೇ 26 ಉಪಸಮಿತಿಗಳನ್ನು ರಚಿಸಲಾಗಿದೆ. ಎಲ್ಲಾ ಸಮಿತಿಗಳಿಗೂ ಸ್ಥಳೀಯ ಶಾಸಕರುಗಳು ನೇತೃತ್ವ ವಹಿಸಿದ್ದು, ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳು, ಸಾರ್ವಜನಿಕರು ಕನ್ನಡದ ಅಭಿಮಾನಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯಕ್ರಮ ನಡೆಸಬೇಕಾಗಿದೆ ಎಂದರು.

ಮಂಡ್ಯ ಜಿಲ್ಲೆಯಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನಕ್ಕೆ 30 ಕೋಟಿ ರೂಗಳನ್ನು ಒದಗಿಸುವ ಭರವಸೆ ದೊರತಿದೆ ಅದರ ಮಿತಿಯೊಳಗೆ ಸಂಪೂರ್ಣ ಕಾರ್ಯಕ್ರಮಗಳು ನಡೆಯಬೇಕು ಯಾವುದೇ ಕಾರಣಕ್ಕೂ ಹೆಚ್ಚುವರಿ ಅನುದಾನಕ್ಕೆ ಬೇಡಿಕೆ ಸಲ್ಲಿಸುವಂತಿಲ್ಲ ಎಂದು ಕೃಷಿ ಸಚಿವರು ಸ್ಪಷ್ಟಪಡಿಸಿದರು.

ಈಗಾಗಲೇ ಬಜೆಟ್ ನಲ್ಲಿ ಘೋಷಿಸಿರುವ ಅನುದಾನಲ್ಲೇ ವ್ಯವಸ್ಥಿತವಾಗಿ ಸಮ್ಮೇಳನ ನಡೆಸಬೇಕು, ಹೆಚ್ಚು ಆರ್ಥಿಕ ಹೊರೆ ಬಿಳದಂತೆ ನಿಗದಿತ ಅನುದಾನದಲ್ಲೆ ಸಮ್ಮೇಳನ ಯಶ್ವಸಿಯಾಗಿ ನಡೆಸುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.

ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಈಗಾಗಲೇ ಸ್ಥಳ ಪರಿಶೀಲನೆ ನಡೆಸಲಾಗಿದ್ದು, ದೂರದ ಜಿಲ್ಲೆಗಳಿಂದ ಆಗಮಿಸುವ ಹಾಗು ಮಂಡ್ಯ ಜಿಲ್ಲೆಯ ಜನತೆಗೆ ಅನುಕೂಲವಾದ ಸ್ಥಳವನ್ನು ಅಂತಿಮಗೊಳಿಸಿ ಸಮ್ಮೇಳನದ ಸಿದ್ದತೆ ಮಾಡಿಕೊಳ್ಳುವಂತೆ ಸಭೆಯಲ್ಲಿ ಭಾಗವಹಿಸಿದ ಅಧಿಕಾರಿಗಳಿಗೆ ಕೃಷಿ ಸಚಿವರು ತಿಳಿಸಿದರು..

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿರವರು ಮಾತನಾಡಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಾಡಿನ ಅತಿ ದೊಡ್ಡ ಸಾಂಸ್ಕೃತಿಕ ನುಡಿ ಹಬ್ಬ ಇದನ್ನು ಅತ್ಯಂತ ಜವಾಬ್ದಾರಿಯಿಂದ ಎಚ್ಚರಿಕೆಯಿಂದ ನಡೆಸಬೇಕಿದೆ ಎಂದು ಹೇಳಿದರು.

ಕರ್ನಾಟಕ ರಾಜ್ಯ 50ನೇ ವರ್ಷದ ಸುವರ್ಣ ಸಂಭ್ರಮದ ಅಂಗವಾಗಿ ಬಿಡುಗಡೆ ಮಾಡಿರುವ ಲಾಂಛನ ಎಲ್ಲಾ ಕಾರ್ಯಕ್ರಮದಲ್ಲಿ ವಿಶೇಷವಾಗಿ ಬಿಂಬಿತವಾಗಬೇಕು. ಖರ್ಚು-ವೆಚ್ಚಗಳಿಗೆ ಹೊಣೆಗಾರಿಕೆ ಇರಬೇಕು ಹಾಗಾಗಿ ಎಲ್ಲರೂ ಹೊಂದಾಗಿ ಕಾರ್ಯಕ್ರಮವನ್ನು ಆಯೋಜಿಸೋಣ ಎಂದರು.

ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಮಹೇಶ್ ಜೋಶಿರವರು ಸಮ್ಮೇಳನಾಧ್ಯಕ್ಷರ ಆಯ್ಕೆ, ಕನ್ನಡ ಸಾಹಿತ್ಯ ಸಮ್ಮೇಳನದ ಸ್ವರೂಪ ಗೋಷ್ಠಿಗಳು, ಪುಸ್ತಕ ಮಳಿಗೆ, ಊಟೋಪಚಾರ ಮತ್ತಿತತೆ ವಿಷಯಗಳ ಬಗ್ಗೆ ಮಾಹಿತಿ ನೀಡಿ ಅನುದಾನವು ಜಿಲ್ಲಾಧಿಕಾರಿಗಳಿಗೆ ಬಿಡುಗಡೆಯಾಗಲಿದ್ದು, ಹಣಕಾಸಿನ ಸಂಪೂರ್ಣ ಜವಾಬ್ದಾರಿ ಜಿಲ್ಲಾಡಳಿತದ ಮೇಲಿರುತ್ತದೆ. ಸಾಹಿತ್ಯ ಪರಿಷತ್ತು ಸಂಪೂರ್ಣ ಸಹಕಾರ ನೀಡಿ ಸಮ್ಮೇಳನದ ಯಶಸ್ಸಿಗೆ ಶ್ರಮಿಸಲಿದೆ ಎಂದರು.

ಶಾಸಕ ನರೇಂದ್ರ ಸ್ವಾಮಿ, ಶಾಸಕ ರಮೇಶ್ ಬಂಡಿಸಿದ್ದೇಗೌಡ, ರವಿಕುಮಾರ್, ಉದಯ್ ಗೌಡ, ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಮಧು ಮಾದೇಗೌಡ, ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್, ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ್, ಜಿಲ್ಲಾ ಪಂಚಾಯತಿ ಸಿಇಒ ಶೇಖ್ ತನ್ವೀರ್ ಆಸಿಫ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಧರಣಿದೇವಿ ಮಾಲಗತ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ವಿವಿಧ ಪದಾಧಿಕಾರಿಗಳು ಹಾಗೂ ಹಲವು ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.