ಮದ್ದೂರು : ಮದ್ದೂರು ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸುವ ಸಲುವಾಗಿ ನಗರಸಭೆಗೆ ಗ್ರಾ.ಪಂ.ಗಳ ಸೇರ್ಪಡೆ ಸಂಬಂಧ ಸರ್ಕಾರದ ಹಂತದಲ್ಲಿ ಮಾತನಾಡಿ ಕ್ರಮ ವಹಿಸುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಎನ್ ಚಲುವರಾಯಸ್ವಾಮಿ ಭರವಸೆ ನೀಡಿದರು.
ತಾಲ್ಲೂಕಿನ ಗೆಜ್ಜಲಗೆರೆ ಗ್ರಾಮ ಪಂಚಾಯಿತಿಯನ್ನು ನಗರಸಭೆಯ ಮೇಲ್ದರ್ಜೆಗೇರಿಸುವ ಸಂಬಂಧ ಕುರಿತು ಗೆಜ್ಜಲಗೆರೆ ಗ್ರಾಮಸ್ಥರೊಂದಿಗೆ ಮದ್ದೂರು ಪ್ರವಾಸಿ ಮಂದಿರದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಪುರಸಭೆಯನ್ನು ನಗರಸಭೆ ಮಾಡಲು ಮದ್ದೂರು ತಾಲ್ಲೂಕಿನ ನಾಲ್ಕು ಗ್ರಾ.ಪಂ.ಗಳಾದ ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಹಾಗೂ ಗೆಜ್ಜಲಗೆರೆ ಗ್ರಾ.ಪಂ ವ್ಯಾಪ್ತಿಯನ್ನು ನಗರಸಭೆಗೆ ಸೇರಿಕೊಳ್ಳುವ ಪ್ರಕ್ರಿಯೆ ಬಗ್ಗೆ ಕಾನೂನಿನ ಅನ್ವಯ ಕ್ರಮ ಕೈಕೊಳ್ಳುತ್ತೇವೆ.ಗ್ರಾಮಸ್ಥರ ಬೇಡಿಕೆಗಳನ್ನು ಅಧಿಕಾರಿಗಳ ಜೊತೆ ಸಭೆ ನೆಡಸಿ ಶೀಘ್ರದಲ್ಲೇ ಪರಿಶೀಲಿಸುತ್ತೇವೆ ಎಂದು ತಿಳಿಸಿದರು.
4 ಗ್ರಾಮ ಪಂಚಾಯತಿಗಳ ಗ್ರಾಮಸ್ಥರ ಜೊತೆ ಸಭೆ ನಡೆಸಿದ್ದೇವೆ. ಸಭೆಯಲ್ಲಿ ಗ್ರಾಮಸ್ಥರ ಅಹವಾಲು ಸ್ವೀಕರಿಸಿದ್ದೇವೆ. ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ನಿಲ್ಲಿಸುವಂತೆ ತಿಳಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಈ ಸಂದರ್ಭದಲ್ಲಿ ಮದ್ದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಕೆ. ಎಂ. ಉದಯ, ಜಿಲ್ಲಾಧಿಕಾರಿಗಳಾದ ಡಾ ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಕೆ. ಆರ್. ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಶೋಭಾ ರಾಣಿ, ಮದ್ದೂರು ತಹಸೀಲ್ದಾರ್ ಪರುಶರಾಮ್ ಸತ್ತಿಗೇರಿ ಹಾಗೂ ಗ್ರಾಮಸ್ಥರು ಇತರರು ಉಪಸ್ಥಿತರಿದ್ದರು.





