ಮಂಡ್ಯ: ನಮ್ಮ ಸರ್ಕಾರ ಮಹಿಳೆಯರ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ರೂಪಿಸಿದೆ. ಗ್ಯಾರಂಟಿ ಯೋಜನೆಗಳ ಮೂಲಕ 1 ಲಕ್ಷದ 30 ಸಾವಿರ ಕೋಟಿಗೂ ಹೆಚ್ಚು ಹಣವನ್ನು ವಿವಿಧ ಯೋಜನೆಗಳ ರೂಪದಲ್ಲಿ ನಾಡಿನ ಜನರಿಗೆ ನೀಡಲಾಗಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಹೇಳಿದರು.
ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಡ್ಯ ಇವರ ಸಹಭಾಗಿತ್ವದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ 2026 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಷ್ಟದ ಪರಿಸ್ಥಿತಿ ಎಲ್ಲರಿಗೂ ಇರುತ್ತದೆ ಆದರೆ ಅದನ್ನು ಮನಸಲ್ಲಿ ಇಟ್ಟುಕೊಳ್ಳದೆ ಸರ್ಕಾರದಿಂದ ಸಿಗುವ ಸೌಲಭ್ಯದಿಂದಲೇ ಮುಂದೆ ಬರುವ ಪ್ರಯತ್ನ ಮಾಡಿಮಾಡಬೇಕು. ಸ್ವಾತಂತ್ರ್ಯ ಪೂರ್ವದಿಂದಲೂ ಭಾರತದಲ್ಲಿ ಮಹಿಳೆಯರಿಗೆ ವಿಶೇಷ ಪ್ರಾತಿನಿಧ್ಯ ಇದೆ. ಸರ್ಕಾರ ಮಹಿಳೆಯರ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ “ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ” ಎಂಬ ವಾಕ್ಯದಡಿ ಮಹಿಳೆಯರ ಶಿಕ್ಷಣಕ್ಕೆ ಒತ್ತು ನೀಡಲಾಗಿದೆ ಎಂದರು.
ಶಿಕ್ಷಕರ ನೇಮಕಾತಿಯಲ್ಲಿ ಶೇ.50% ರಷ್ಟು ಮೀಸಲಾತಿ ಜಿಲ್ಲಾ ಪಂಚಾಯತ್ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಮೀಸಲಾತಿ ನೀಡಲಾಗಿದೆ ಇಷ್ಟಾದರೂ ಮಹಿಳೆಯರು ಸಮಾಜದಲ್ಲಿ ಮುಂದೆ ಬಂದಿದ್ದಾರ ಎಂದು ಹೆಣ್ಣು ಮಕ್ಕಳು ತಮ್ಮನ್ನು ತಾವೇ ಅವಲೋಕಿಸಿಕೊಳ್ಳಬೇಕು ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಅಸೆಂಬ್ಲಿ ಚುನಾವಣೆಯಲ್ಲಿ ಮಹಿಳೆಯರಿಗೆ ಮೀಸಲಾತಿ ದೊರೆಯುವ ಕಾಲ ದೂರ ಇಲ್ಲ, ಜಿಲ್ಲೆಯ ಅಭಿವೃದ್ಧಿ ಸಿ.ಇ.ಓ ನಂದಿನಿ ಹಾಗೂ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಜಿಲ್ಲೆಯಲ್ಲಿ ಉತ್ತಮ ಆಡಳಿತ ನಡೆಸಿಕೊಂಡು ಹೋಗುತ್ತಿದ್ದಾರೆ, ಐ.ಎ.ಎಸ್ ಪರೀಕ್ಷೆಯಲ್ಲಿ ಸಿ.ಇ.ಓ ನಂದಿನಿ ಅವರು ದೇಶಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ ಅವರನ್ನು ಮಹಿಳೆಯರು ಆದರ್ಶವಾಗಿ ತೆಗೆದುಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಡಾ.ಕುಮಾರ, ಕೈಮಗ್ಗ ಹಾಗೂ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರು ವಿಜಯಲಕ್ಷ್ಮಿ ರಘುನಂದನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಆಶಾ, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಗ್ರೇಡ್ -1 ಡಾ. ಶಿವಲಿಂಗಯ್ಯ, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಗ್ರೇಡ್-2 ಲಕ್ಷ್ಮಿ ಹಾಗೂ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.





