ಮಂಡ್ಯ: ರೈತರ ಅಭಿವೃದ್ಧಿಗಾಗಿ ಮಂಡ್ಯ ಜಿಲ್ಲೆಗೆ ಕೃಷಿ ವಿಶ್ವವಿದ್ಯಾನಿಲಯ ತರಲಾಗಿದೆ. ಜಿಲ್ಲೆಯ ರೈತರು ಕೃಷಿ ವಿಶ್ವವಿದ್ಯಾನಿಲಯದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಹೇಳಿದರು.
ಇಂದು ಕೃಷಿ ಇಲಾಖೆಯ ವತಿಯಿಂದ ಮಂಡ್ಯ ವಿಶ್ವವಿದ್ಯಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ ಹೈಟೆಕ್ ಹಾರ್ವೆಸ್ಟ್ ಹಬ್ ಮತ್ತು ಸೆಕೆಂಡರಿ ಕೃಷಿ ಯೋಜನೆಗಳ ರೈತ ಫಲಾನುಭವಿಗಳಿಗೆ ಯಂತ್ರೋಪಕರಣಗಳ ವಿತರಣಾ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ 2 ಸಾವಿರ ಕೋಟಿಗೂ ಹೆಚ್ಚಿನ ಮೌಲ್ಯದ ಕೃಷಿ ಯಂತ್ರೋಪಕರಣಗಳನ್ನು ರಾಜ್ಯದ ರೈತರಿಗೆ ನೀಡಲಾಗಿದೆ ಎಂದು ಹೇಳಿದರು.
ಪರಿಶಿಷ್ಟ ವರ್ಗಗಳಿಗೆ ರೂ 50 ಲಕ್ಷ ಮತ್ತು ಸಾಮಾನ್ಯ ವರ್ಗಗಳಿಗೆ ರೂ 40 ಲಕ್ಷ ಸಬ್ಸಿಡಿಯನ್ನು ದರದಲ್ಲಿ ಹೈಟೆಕ್ ಹಾರ್ವೆಸ್ಟ್ ಹಬ್ ಖರೀದಿಸಲು ನೀಡಲಾಗುತ್ತಿದೆ. ದೇಶದ ಯಾವುದೇ ರಾಜ್ಯದಲ್ಲೂ ಸದರಿ ಯೋಜನೆ ಇಲ್ಲ ಎನ್ನಬಹುದು. ಹೈಟೆಕ್ ಹಾರ್ವೆಸ್ಟ್ ಹಬ್ನ ಸಂಪೂರ್ಣ ಯೋಜನೆ ರಾಜ್ಯ ಸರ್ಕಾರದ್ದಾಗಿದೆ, ರಾಜ್ಯದಲ್ಲಿ 400ಕ್ಕೂ ಹೈಟೆಕ್ ಹಾರ್ವೆಸ್ಟ್ ಹಬ್ ಯಂತ್ರಗಳನ್ನು ರೈತರಿಗೆ ನೀಡಲಾಗಿದೆ ಎಂದು ಹೇಳಿದರು.
ವಿವಿಧ ಬೆಳೆಗಳ ಕಟಾವಿಗೆ ಹೈಟೆಕ್ ಹಾರ್ವೆಸ್ಟ್ ಹಬ್ ಯಂತ್ರಗಳು ಉಪಯುಕ್ತವಾಗಿದೆ. ಕೃಷಿ ಕೆಲಸಗಳಿಗೆ ಮಾನವ ಸಂಪನ್ಮೂಲ ಕಡಿಮೆಯಾಗಿರುವ ಈ ಕಾಲಘಟ್ಟದಲ್ಲಿ ಈ ಯಂತ್ರೋಪಕರಣಗಳನ್ನು ಬಳಸಿ ಕಡಿಮೆ ವೆಚ್ಚದಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಬೆಳೆಗಳನ್ನು ಕಟಾವು ಮಾಡಬಹುದಾಗಿದೆ ಹಾಗೂ ರೈತನಿಗೆ ಹಣ ಉಳಿತಾಯವಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ ಆರ್ ನಂದಿನಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.





