ಮಂಡ್ಯ: ಒಂದರಿಂದ ಒಂದೂವರೆ ಲಕ್ಷ ಜನ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಭಾಗವಹಿಸುವ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಎಲ್ಲಾ ವ್ಯವಸ್ಥೆಯನ್ನು ಸೂಕ್ತವಾಗಿ ಕಲ್ಪಿಸಲಾಗುವುದು ಎಂದು ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಇಂದು 87ನೇ ಕನ್ನಡ ಸಾಹಿತ್ಯ ಸಮ್ಮೇಳನ ವೇದಿಕೆಯ ಕಾರ್ಯಾಚರಣೆ ವೀಕ್ಷಿಸಲು ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಚಲುವರಾಯಸ್ವಾಮಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
87ನೇ ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯವನ್ನು ಜಿಲ್ಲಾಧಿಕಾರಿಗಳು, ಸಾಹಿತ್ಯ ಪರಿಷತ್ ಅಧ್ಯಕ್ಷರು, ಶಾಸಕರು, ಮಾಜಿ ಶಾಸಕರು, ಜಿಲ್ಲಾ ಸಾಹಿತ್ಯ ಪರಿಷತ್, ರಾಜ್ಯ ಸಾಹಿತ್ಯ ಪರಿಷತ್, ಸಂಘ ಸಂಸ್ಥೆಗಳು, ಸಾರ್ವಜನಿಕರು ಎಲ್ಲರೂ ಒಟ್ಟಾಗಿ ಸಮ್ಮೇಳನದ ಕೆಲಸಕ್ಕೆ ತಮ್ಮನ್ನು ತಾವು ತೊಡಗಿಸಿಕೊಂಡಿರುವುದು ಸಂತೋಷದ ಸಂಗತಿ ಎಂದು ಹರ್ಷ ವ್ಯಕ್ತಪಡಿಸಿದರು.
ಮುಂದಿನ ಮಂಗಳವಾರ ಅಥವಾ ಬುಧವಾರದೊಳಗೆ ವೇದಿಕೆಯ ಕಾಮಗಾರಿ ಪೂರ್ಣಗೊಳ್ಳಲಿದೆ, ನಾಳೆಯಿಂದ ನಾನು ಸಹ ಸಂಪೂರ್ಣವಾಗಿ ವೇದಿಕೆ ನಿರ್ಮಾಣದ ಸ್ಥಳದಲ್ಲಿ ಇದ್ದು ವೇದಿಕೆ ಕಾರ್ಯಗಳನ್ನು ವೀಕ್ಷಿಸಲಿದ್ದೇನೆ ಎಂದು ತಿಳಿಸಿದರು.
ಒಂದರಿಂದ ಒಂದೂವರೆ ಲಕ್ಷ ಜನ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ, ಭಾಗವಹಿಸುವ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಎಲ್ಲಾ ವ್ಯವಸ್ಥೆಯನ್ನು ಸೂಕ್ತವಾಗಿ ಕಲ್ಪಿಸಲಾಗುವುದು ಎಂದರು.
ಸಮ್ಮೇಳನದಲ್ಲಿ ಗೋಷ್ಠಿಗಳಿಗೆ ಪ್ರಾಮುಖ್ಯತೆ ನೀಡಲಾಗಿದೆ. ಕೃಷಿ, ಸಾಹಿತ್ಯ, ಸಾಂಸ್ಕೃತಿಕ ಇನ್ನೂ ಅನೇಕ ವಿಚಾರಗಳ ಗೋಷ್ಠಿಗಳು ನಡೆಯಲಿವೆ ಎಂದು ತಿಳಿಸಿದರು.