ಮಂಡ್ಯ: ಸಾರ್ವಜನಿಕರ ಅನುಕೂಲಕ್ಕಾಗಿ ರಚಿಸಿರುವಂತಹ ಕಾನೂನು ದುರುಪಯೋಗವಾಗದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬ ಸಾರ್ವಜನಿಕರ ಕರ್ತವ್ಯವಾಗಿದೆ ಎಂದು ಎಫ್ಟಿಎಸ್ ಸಿ-1 ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುಳಾ ಇಟ್ಟಿ ಹೇಳಿದರು.
ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಷ್ಟ್ರೀಯ ಮಹಿಳಾ ಆಯೋಗ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ವಕೀಲರ ಸಂಘ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರೀಕರಣ ಸಬಲೀಕರಣ ಇಲಾಖೆ ಇವರುಗಳ ಸಹಯೋಗದೊಂದಿಗೆ ನಡೆದ ‘ವಿಧಾನ್ ಸಮಾಧಾನ್ ‘ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಮಹಿಳೆಯರಿಗೆ ಕಾನೂನು ಅರಿವು ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಮಹಿಳೆಯರಿಗಾಗಿ ಬಹಳಷ್ಟು ಕಾನೂನುಗಳು, ಕಾಯ್ದೆಗಳು ಇವೆ. ಅವುಗಳನ್ನು ಪ್ರತಿಯೊಬ್ಬ ಮಹಿಳೆಯರು ಅರಿತು ಹಕ್ಕು ಹಾಗೂ ಕರ್ತವ್ಯಗಳ ಬಗ್ಗೆ ತಿಳಿಯಬೇಕು ಎಂದರು.
ಪ್ರಸ್ತುತ ದಿನಗಳಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿಯೂ ಬಹಳ ಮುಂದಿದ್ದು, ಸಮಾಜದಲ್ಲಿ ಉತ್ತಮ ಬೆಳವಣಿಗೆ ಆಗುತ್ತಿದೆ. ಹೆಣ್ಣು ಮಕ್ಕಳಿಗೆ ಶಿಕ್ಷಣವನ್ನು ಕೊಡಿಸಿದರೆ ಇಡೀ ಸಮಾಜವೇ ಬೆಳವಣಿಗೆ ಹೊಂದುತ್ತದೆ. ಕಾರ್ಯಗಾರದಲ್ಲಿ ಮಹಿಳೆಯರ ಭಾಗವಹಿಸುವಿಕೆ ಮುಖ್ಯವಾಗಿದ್ದು, ಕಾರ್ಯಗಾರದ ಉದ್ದೇಶವನ್ನು ತಿಳಿದುಕೊಳ್ಳಬೇಕು ಎಂದು ನುಡಿದರು.
ಲೈಂಗಿಕ ದೌರ್ಜನ್ಯ ಕಾಯ್ದೆ, ಅತ್ಯಾಚಾರ, ಅಪಹರಣ ಮುಂತಾದ ವಿಷಯಗಳಿಗೆ ಸಂಬಂಧಿಸಿದ ಕಾನೂನು ಕಾಯ್ದೆಗಳ ಬಗ್ಗೆ ನುರಿತ ವ್ಯಕ್ತಿಗಳಿಂದ ಕಾರ್ಯದಲ್ಲಿ ತಿಳಿಸಲಾಗುತ್ತದೆ. ಇದರ ಸದುಪಯೋಗ ಪಡೆದುಕೊಂಡು ನಿಮ್ಮ ಸುತ್ತಮುತ್ತಲಿನ ಜನರುಗಳಿಗೆ ತಿಳಿಸುವ ಕೆಲಸ ಮಾಡಿ ಎಂದು ಹೇಳಿದರು.
ಸಮಾಜ ಸುಸ್ಥಿತಿಗೆ ಹೆಣ್ಣು ಮಕ್ಕಳ ಸಹಕಾರ
ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಸಮಾಜವನ್ನು ಸುಸ್ಥಿತಿಯಲ್ಲಿಡಲು ಹೆಣ್ಣು ಮಕ್ಕಳು ಸಹಕರಿಸಬೇಕು. ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಮಾತಿನಂತೆ ಹೆಣ್ಣು ಬುದ್ದಿವಂತೆಯಾಗಿ ಬದುಕಿದರೆ ಮಾತ್ರ ಸಮಾಜ, ರಾಷ್ಟ್ರ ಅಭಿವೃದ್ಧಿ ಹೊಂದಲು ಸಾಧ್ಯ. ಭಾರತೀಯ ಸಮಾಜ ಎಲ್ಲಾ ರೀತಿಯಲ್ಲಿಯೂ ಮಹಿಳೆಯರಿಗೆ ಗೌರವ ನೀಡುತ್ತದೆ ಎಂದರು.
ವಿಧಾನ್ ಸೆ ಸಮಾಧಾನ್ ಕಾರ್ಯಾಗಾರದ ಅಂಗವಾಗಿ ಮಹಿಳೆಯರಿಗೆ ಕಾನೂನು ಅರಿವು ಕಾರ್ಯಕ್ರಮದ ಅಡಿಯಲ್ಲಿ ಮಹಿಳೆಯರಿಗೆ ವಿಶೇಷವಾಗಿ ಸಾಮಾಜಿಕ, ಆರ್ಥಿಕ, ಔದ್ಯೋಗಿಕ ಹಾಗೂ ಸಾಂಸ್ಕೃತಿಕ ಹಕ್ಕುಗಳನ್ನು ರಕ್ಷಣೆ ಮಾಡಿಕೊಳ್ಳುವ ಬಗ್ಗೆ ಮತ್ತು ಇತರೆ ಕಾನೂನುಗಳ ಬಗ್ಗೆ ತಿಳಿದುಕೊಂಡು ನಿಮ್ಮ ಜ್ಞಾನದ ಅರಿವನ್ನು ಹೆಚ್ಚಿಸಿಕೊಳ್ಳಿ. ಇಂತಹ ಕಾರ್ಯಾಗಾರದ ಅವಶ್ಯಕತೆ ಪ್ರತಿಯೊಬ್ಬ ಹೆಣ್ಣು ಮಕ್ಕಳಿಗಿದೆ ಎಂದರು.
ಹೆಣ್ಣು ತನ್ನ ಕುಟುಂಬ, ಸಮಾಜ ಹಾಗೂ ರಾಷ್ಟ್ರಕ್ಕೆ ಗೌರವವನ್ನು ನೀಡುತ್ತಾರೆ. ಅದರಂತೆ ಸಮಾಜದಲ್ಲಿ ನಡೆಯುತ್ತಿರುವ ಶಿಶು ಭ್ರೂಣ ಹತ್ಯೆ ಹಾಗೂ ಬಾಲ್ಯ ವಿವಾಹವನ್ನು ತಡೆಗಟ್ಟಿ ಮಹಿಳೆಯರಿಗೆ ಉತ್ತಮ ಸ್ಥಾನಮಾನ ನೀಡಿ ಪ್ರತಿಯೊಬ್ಬರು ಸಹಕರಿಸಬೇಕು ಎಂದರು.
12ನೇ ಶತಮಾನದಲ್ಲಿ ಜಗಜ್ಯೋತಿ ಬಸವೇಶ್ವರರು ತಮ್ಮ ಅನುಭವ ಮಂಟಪದಲ್ಲಿ ಕಾಯಕ ತತ್ವವನ್ನು ಪ್ರಚಾರ ಮಾಡುವ ಮೂಲಕ ಮಹಿಳೆಯರಿಗೆ ಸಮಾನ ಅವಕಾಶವನ್ನು ಕೊಟ್ಟಿದ್ದರು ಎಂದರು.
ಬ್ರಿಟಿಷರ ಪಾಶ್ಚಿಮಾತ್ಯ ಶಿಕ್ಷಣವನ್ನು ನಮ್ಮ ದೇಶಕ್ಕೆ ಪರಿಚಯಿಸಿದ ಸಲುವಾಗಿ ರಾಜಾರಾಮ್ ಮೋಹನ್ ರಾಯ್ ರವರು ಬ್ರಿಟಿಷರ ಆಡಳಿತದೊಳಗೆ ಇದ್ದುಕೊಂಡು ಅಂದಿನ ಕಾಲದಲ್ಲಿ ಇದ್ದಂತಹ ಅನಿಷ್ಟ ಪದ್ದತಿಯಾದ ಸತಿ ಸಹಗಮನ ಪದ್ಧತಿಯನ್ನು ನಿಷೇಧಿಸಿದರು. ಜೊತೆಗೆ ಬಾಲ್ಯ ವಿವಾಹ ನಿಷೇಧ ಅಂತರ್ಜಾತಿ ವಿವಾಹ ಹಾಗೂ ವಿಧವಾ ವಿವಾಹಕ್ಕೆ ಪ್ರೋತ್ಸಾಹಿಸಿದರು. ಕಾಲ ಕಳೆದಂತೆ ಮಹಿಳೆಯರಿಗೆ ಮತದಾನದ ಹಕ್ಕು ಕೂಡ ದೊರೆಯಿತು ಎಂದರು.
ಕಾರ್ಯಗಾರದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಸೇರಿದಂತೆ ಮಹಿಳೆಯರು ಭಾಗವಹಿಸಿದ್ದರು.