ಶ್ರೀರಂಗಪಟ್ಟಣ : ತಮಿಳುನಾಡಿಗೆ ಪ್ರತಿನಿತ್ಯ ಐದು ಸಾವಿರ ಕ್ಯುಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಸೂಚಿಸಿರುವುದನ್ನು ವಿರೋಧಿಸಿ ಕೃಷ್ಣರಾಜ ಸಾಗರದ ಬಳಿ ರೈತರು ಕೈಗೆ ಕಪ್ಪುಪಟ್ಟಿ ಧರಿಸಿ, ಬಾಯಿ ಬಡಿದುಕೊಂಡು ಪ್ರತಿಭಟಿಸಿದರು.
ರೈತ ಮುಖಂಡ ಕೆ.ಎಸ್.ನಂಜುಂಡೇಗೌಡ, ಭೂಮಿತಾಯಿ ಹೋರಾಟ ಸಮಿತಿ ಅಧ್ಯಕ್ಷ ಕೃಷ್ಣೇಗೌಡ ನೇತೃತ್ವದಲ್ಲಿ ಜಲಾಶಯದ ಎದುರು ನೂರಾರು ರೈತರು ಬಾಯಿ ಬಡಿದುಕೊಳ್ಳುವ ಮೂಲಕ ಪ್ರತಿಭಟಿಸಿ, ಕರ್ನಾಟಕ ರಾಜ್ಯದ ರೈತರಿಗೆ ಆಗುತ್ತಿರುವ ನಿರಂತರ ಅನ್ಯಾಯ ಸಹಿಸಲು ಅಸಾಧ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಮಿಳುನಾಡಿಗೆ 15 ದಿನಗಳವರೆಗೆ ಪ್ರತಿದಿನ 5,000 ಕ್ಯುಸೆಕ್ ನೀರು ಬಿಡುಗಡೆ ಮಾಡಬೇಕೆಂಬ ಆದೇಶ ಅವೈಜ್ಞಾನಿಕ ನಿರ್ಣಯವಾಗಿದೆ, ರಾಜ್ಯದಲ್ಲಿ ಬರಗಾಲದ ಸನ್ನಿವೇಶ ಸೃಷ್ಟಿಯಾಗಿ ಕುಡಿಯುವ ನೀರಿಗೂ ಹಾಹಾಕಾರ ಎದುರಾಗಿದ್ದರೂ ತಮಿಳುನಾಡಿಗೆ ನೀರು ಬಿಡಬೇಕೆಂದು ಹೇಳಿರುವುದು ಸರಿಯಲ್ಲ ಎಂದರು.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಇಲ್ಲಿನ ವಾಸ್ತವತೆಯನ್ನು ನ್ಯಾಯಾಲಯ ಮತ್ತು ಸಮಿತಿಗೆ ಮನದಟ್ಟು ಮಾಡಿಕೊಡದ ರಾಜ್ಯ ಸರ್ಕಾರ ರೈತರ ಬದುಕಿನ ಜತೆ ಚೆಲ್ಲಾಟವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.





