ಮಂಡ್ಯ: ಗಣರಾಜ್ಯೋತ್ಸವ ದಿನವಾದ ಇಂದು ಪ್ರತಿಯೊಬ್ಬ ಭಾರತೀಯರಿಗೂ ಮಹತ್ವವಾದ ಮತ್ತು ಪವಿತ್ರವಾದ ದಿನವಾಗಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದರು.
ಅವರು ಇಂದು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಸ್ವಾತಂತ್ರ್ಯಗೊಂಡ ನಂತರ, ಇಡೀ ದೇಶವನ್ನು ಭೌಗೋಳಿಕವಾಗಿ, ಭಾಷಿಕವಾಗಿ ಒಗ್ಗೂಡಿಸುವ ಅನಿವಾರ್ಯತೆ ಉದ್ಭವಿಸಿತು. ಜೊತೆಗೆ ಏಕರೂಪದ ಕಾನೂನು ಹಾಗೂ ಆಡಳಿತ ವ್ಯವಸ್ಥೆಯನ್ನು ಜಾರಿಗೊಳಿಸುವ ಮೂಲಕ ದೇಶದ ಏಕತೆಯನ್ನು ಬಲಪಡಿಸಲು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ನೇತೃತ್ವದಲ್ಲಿ “ಭಾರತ ಸಂವಿಧಾನ ಕರಡು ರಚನಾ ಸಮಿತಿ”ಯನ್ನು ರಚಿಸಲಾಯಿತು. ಎರಡು ವರ್ಷಗಳ ಸುಧೀರ್ಘ ಅವಲೋಕನ ಮತ್ತು ಚರ್ಚೆಯ ನಂತರ, ಅಂತಿಮವಾಗಿ 26 ನವೆಂಬರ್ 1949 ರಂದು ಸಂವಿಧಾನವನ್ನು ಅಂಗೀಕರಿಸಲಾಯಿತು. ಡಾ||ಬಿ.ಆರ್. ಅಂಬೇಡ್ಕರ್ರವರು ರಚಿಸಿದ ಸಂವಿಧಾನವನ್ನು ದೇಶಾದ್ಯಂತ 26ನೇ ಜನವರಿ 1950 ರಿಂದ ಜಾರಿಗೆ ತರಲಾಯಿತು ಎಂದು ತಿಳಿಸಿದರು.
ಶಕ್ತಿ ಯೋಜನೆ ಮಹಿಳೆಯರನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ ನಮ್ಮ ಸರ್ಕಾರವು “ಶಕ್ತಿ ಯೋಜನೆ”ಯನ್ನು ಜಾರಿಗೆ ತಂದಿದ್ದು. ನಮ್ಮ ಮಂಡ್ಯ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 10.83 ಕೋಟಿ ಟಿಕೆಟ್ಗಳನ್ನು ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು ನೀಡಿ ಒಟ್ಟು ರೂ.274 ಕೋಟಿ ವೆಚ್ಚ ಭರಿಸಲಾಗಿದೆ.
ಗ್ಯಾರಂಟಿಯಿಂದ ಮಂಡ್ಯ ಜಿಲ್ಲೆಗೆ ದೊರೆತಿರುವ ಮಾಹಿತಿ
ಅನ್ನಭಾಗ್ಯ
ಪ್ರತಿಯೊಬ್ಬರಿಗೂ ಆಹಾರದ ಕೊರತೆ ನೀಗಿಸುವ ಉದ್ದೇಶದಿಂದ ನಮ್ಮ ಸರ್ಕಾರ ಬಿ.ಪಿ.ಎಲ್ ಮತ್ತು ಅಂತ್ಯೋದಯ ಕಾರ್ಡ್ ಹೊಂದಿರುವ ಪ್ರತಿ ವ್ಯಕ್ತಿಗೆ 5 ಕೆ.ಜಿ ಅಕ್ಕಿಯನ್ನು ದಾಸ್ತಾನು ರೂಪದಲ್ಲಿ ಹಾಗೂ 5 ಕೆ.ಜಿ ಅಕ್ಕಿಯನ್ನು ನಗದು ರೂಪದಲ್ಲಿ ನೀಡಲಾಗುತ್ತಿದ್ದು, ಈವರೆಗೆ ಒಟ್ಟು 4,43,292 ಫಲಾನುಭವಿಗಳಿಗೆ “ಅನ್ನಭಾಗ್ಯ ಯೋಜನೆ”ಯಡಿ ರೂ.354.78 ಕೋಟಿ ಹಣವನ್ನು ನೇರ ನಗದು ಪಾವತಿ ಮೂಲಕ ನೀಡಲಾಗಿದೆ.
ಗೃಹಜ್ಯೋತಿ
ಯೋಜನೆಯಡಿ, 5,02,889 ಗ್ರಾಹಕರು ಹೆಸರು ನೋಂದಣಿ ಮಾಡಿಸಿಕೊಂಡಿದ್ದು, ಡಿಸೆಂಬರ್ ಅಂತ್ಯಕ್ಕೆ ವಿದ್ಯುತ್ನ್ನು ಗ್ರಾಹಕರಿಗೆ ಉಚಿತವಾಗಿ ಒದಗಿಸಿ ರೂ. 278.48 ಕೋಟಿಗಳನ್ನು ಪಾವತಿಸಲಾಗಿದೆ.
ಗೃಹಲಕ್ಷ್ಮಿ
ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ಉದ್ದೇಶದಿಂದ ನಮ್ಮ ಸರ್ಕಾರವು ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದ್ದು, ಜಿಲ್ಲೆಯಲ್ಲಿ ಇಲ್ಲಿಯವರೆಗೆ 4,48,525 ಮಹಿಳೆಯರಿಗೆ ತಲಾ ರೂ.2,000 ಗಳಂತೆ ಒಟ್ಟು ರೂ.1308 ಕೋಟಿಗಳನ್ನು ಪಾವತಿಸಲಾಗಿದೆ.
ಯುವನಿಧಿ
ಉತ್ತೀರ್ಣರಾಗಿ 180 ದಿನಗಳು ಕಳೆದರೂ ಉದ್ಯೋಗ ಸಿಗದ ಡಿಪ್ಲೋಮೋ ಹಾಗೂ ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಕ್ರಮವಾಗಿ ರೂ.1,500 ಮತ್ತು ರೂ.3,000ಗಳನ್ನು ನಿರುದ್ಯೋಗ ಭತ್ಯೆಯನ್ನು ಗರಿಷ್ಠ 2 ವರ್ಷಗಳ ಅವಧಿಯವರೆಗೆ ನೀಡಲಾಗುವುದು. ಜಿಲ್ಲೆಯಲ್ಲಿ ಈವರೆಗೆ 3,592 ಅಭ್ಯರ್ಥಿಗಳಿಗೆ “ಯುವನಿಧಿ” ಯೋಜನೆಯಡಿ ರೂ.4.46 ಕೋಟಿ ಹಣ ಪಾವತಿಸಲಾಗಿದೆ.
ಈ ಬಾರಿ ದೇವರ ಉತ್ತಮ ಮಳೆಯಾಗಿದ್ದು, ಇದೇ ಮೊದಲ ಬಾರಿಗೆ 92 ವರ್ಷಗಳ ಇತಿಹಾಸದಲ್ಲಿಯೇ ಕೃಷ್ಣರಾಜಸಾಗರ ಜಲಾಶಯವು ಒಂದು ವರ್ಷದಲ್ಲಿ ನಿರಂತರವಾಗಿ 154 ದಿನಗಳು ಭರ್ತಿಯಾಗಿದ್ದು, ರೈತರಿಗೆ ಹಾಗೂ ಜಿಲ್ಲೆಯ ಜನತೆಗೆ ಆಶಾದಾಯಕ ವಿಷಯವಾಗಿದೆ ಎಂದರು.
ರೈತರ ಬೇಡಿಕೆ ಮತ್ತು ಅಪೇಕ್ಷೆಯಂತೆ ನೀರಾವರಿ ಸಲಹಾ ಸಮಿತಿ ಸಭೆ ಕರೆದು, ಬೇಸಿಗೆ ಬೆಳೆಗಳಿಗೂ ಹಾಗೂ ಬೆಳೆದು ನಿಂತಿರುವ ಬೆಳೆಗಳಿಗೆ ನೀರನ್ನು ನೀಡಲು ಅಗತ್ಯ ಕ್ರಮವಹಿಸಲಾಗಿದೆ ಎಂದರು.
ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗಳು ಈ ಹಿಂದೆ ಹೆಚ್ಚಿನ ಪ್ರಮಾಣದಲ್ಲಿ ಸಂಭವಿಸುತ್ತಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಲವಾರು ಸುಧಾರಣಾ ಕ್ರಮಗಳನ್ನು ಜರುಗಿಸಲಾಗಿದೆ. ಇದಕ್ಕಾಗಿ ಹನಕೆರೆಯ ಬಳಿ ರೂ.7.90ಕೋಟಿ ವೆಚ್ಚದಲ್ಲಿ ಅಂಡರ್ ಪಾಸ್ ನಿರ್ಮಾಣಕ್ಕೆ ಅನುಮೋದನೆ ದೊರಕಿರುತ್ತದೆ ಹಾಗೂ ಬಿ.ಗೌಡಳ್ಳಿಯ ಬಳಿ ರೂ.6.7 ಕೋಟಿ ವೆಚ್ಚದಲ್ಲಿ ಓವರ್ ಪಾಸ್ ನಿರ್ಮಾಣಕ್ಕೆ ಅನುಮೋದನೆ ದೊರಕಿರುತ್ತದೆ ಎಂದರು.
ಭೂ ಸುರಕ್ಷಾ ಯೋಜನೆ
ಕಂದಾಯ ದಾಖಲೆಗಳ ಸುರಕ್ಷತೆಯ ಉದ್ದೇಶದಿಂದ ಭೂ ಸುರಕ್ಷಾ ಯೋಜನೆಯನ್ನು ಅನುಷ್ಠಾನಕ್ಕೆ ತಂದಿದ್ದು, ಇದರಂತೆ ಕಂದಾಯ ದಾಖಲೆಗಳನ್ನು ಗಣಕೀಕರಣ ಮಾಡಲು, ಎಲ್ಲಾ ತಾಲ್ಲೂಕುಗಳಲ್ಲೂ “ಭೂ ಸುರಕ್ಷಾ ಯೋಜನೆ”ಯನ್ನು ಪ್ರಾರಂಭಿಸಲಾಗಿದೆ ಎಂದರು
ಆರೋಗ್ಯ ಯೋಜನೆ
ಕೆಎಸ್ಆರ್ಟಿಸಿ ಎಲ್ಲಾ ನೌಕರರಿಗೆ ಅನುಕೂಲವಾಗುವಂತೆ “ಕೆ.ಎಸ್.ಆರ್.ಟಿ.ಸಿ ಆರೋಗ್ಯ ಯೋಜನೆ” ಎಂಬ ನಗದು ರಹಿತ ಚಿಕಿತ್ಸಾ ಯೋಜನೆಗೆ ಜನವರಿ 06 ರಂದು ಮಾನ್ಯ ಮುಖ್ಯಮಂತ್ರಿಗಳು ಚಾಲನೆ ನೀಡಿರುತ್ತಾರೆ. ನಿಗಮದ ಎಲ್ಲಾ ನೌಕರರು ಮತ್ತು ಅವರ ಅವಲಂಬಿತರು ಈ ಯೋಜನೆಯ ಫಲಾನುಭವಿಗಳಾಗಿರುತ್ತಾರೆ. ಈ ಸಂಬAಧ ಕರ್ನಾಟಕದಾದ್ಯಂತ ಸುಮಾರು 275ಕ್ಕೂ ಅಧಿಕ ಖಾಸಗಿ/ಸರ್ಕಾರಿ ಆಸ್ಪತ್ರೆಗಳೊಂದಿಗೆ ಒಡಬಂಡಿಕೆ ಮಾಡಿಕೊಳ್ಳಲಾಗಿದೆ. ಅಪಘಾತದಲ್ಲಿ ಮೃತಪಟ್ಟ ಕೆ.ಎಸ್.ಆರ್.ಟಿ.ಸಿ ನೌಕರರ ಕುಟುಂಬದವರಿಗೆ ರೂ.1 ಕೋಟಿ ವಿಮೆ ಸೌಲಭ್ಯ ನೀಡುವ ಯೋಜನೆಯನ್ನು ಸಹ ಜಾರಿಗೆ ತರಲಾಗಿದೆ ಎಂದರು.
ಕ್ಯಾನ್ಸರ್ ಆಸ್ಪತ್ರೆ
ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಟರ್ಷಿಯರಿ ಕ್ಯಾನ್ಸರ್ ಕೇಂದ್ರವನ್ನು ಮೇಲ್ದರ್ಜೆಗೇರಿಸುವ ಕಾಮಗಾರಿ ಮುಕ್ತಾಯ ಹಂತದಲ್ಲಿದ್ದು, ಆಸ್ಪತ್ರೆಗೆ ಅಗತ್ಯವಿರುವ ವೈದ್ಯಕೀಯ ಉಪಕರಣಗಳನ್ನು ಖರೀದಿಸಲು ಹಾಗೂ ಬೋಧಕ ಮತ್ತು ಬೋಧಕೇತರ ಹುದ್ದೆಗಳ ಸೃಜನೆಗಾಗಿ ಅಗತ್ಯ ಕ್ರಮವಹಿಸಲಾಗುತ್ತಿದೆ ಎಂದರು.
ಕೃಷಿ ವಿಶ್ವವಿದ್ಯಾಲಯ*
ಮAಡ್ಯದಲ್ಲಿ ನೂತನ ಸಮಗ್ರ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಬೇಕೇನ್ನುವ ಬಹುದಿನಗಳ ಕನಸು ನನಸಾಗುವ ಹಂತ ತಲುಪಿದೆ. ಈ ನಿಟ್ಟಿನಲ್ಲಿ ಮಂಡ್ಯದಲ್ಲಿ ನೂತನ ಸಮಗ್ರ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಮಂಡ್ಯ ಜಿಲ್ಲೆಯ ಜನರ ಬಹುದಿನಗಳ ಕನಸನ್ನು ಸಾಕಾರಗೊಳಿಸಿದ್ದಕ್ಕಾಗಿ ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ಹಾಗೂ ಸಂಪುಟದ ಸಹದ್ಯೋಗಿಗಳನ್ನು ವಿಶೇಷವಾಗಿ ಅಭಿನಂಧಿಸುತ್ತೇನೆ ಎಂದರು
ಕಾರ್ಯಕ್ರಮದಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ರವಿಕುಮಾರ್ ಪಿ, ವಿಧಾನ ಪರಿಷತ್ ಶಾಸಕ ದಿನೇಶ್ ಗೂಳಿಗೌಡ, ನಗರಸಭೆ ಅಧ್ಯಕ್ಷ ಪ್ರಕಾಶ್, ಮುಡಾ ಅಧ್ಯಕ್ಷ ನಯೀಮ್, ಜಿಲ್ಲಾಧಿಕಾರಿ ಡಾ ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ ಸೇರಿದಂತೆ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.