ಮಂಡ್ಯ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಂತ್ಯ ಸಂಸ್ಕಾರಕ್ಕೆ ಸರ್ಕಾರದ ವತಿಯಿಂದ ಸಕಲ ಸರ್ಕಾರಿ ಗೌರವ ಸಿದ್ಧತೆಗಳನ್ನು ನಡೆಸಲಾಗಿದ್ದು, ಮೃತರ ಚಿತೆಗೆ ಮೊಮ್ಮಗ ಅಮರ್ಥ್ಯ ಸಿದ್ದಾರ್ಥ ಹೆಗಡೆ ಅವರು ಚಿತೆಗೆ ಅಗ್ನಿ ಸ್ಪರ್ಶ ಮಾಡಲಿದ್ದಾರೆ.
ಎಸ್.ಎಂ.ಕೃಷ್ಣ ಅವರು ಮಂಗಳವಾರ ಬೆಳಗಿನ ಜಾವ ಸುಮಾರು 2.30 ಗಂಟೆಗೆ ನಿಧನರಾಗಿದ್ದು, ಇಂದು(ಡಿ.11) ಅವರ ಹುಟ್ಟೂರಾಗಿರುವ ಸೋಮನಹಳ್ಳಿಯಲ್ಲಿ ಮಧ್ಯಾಹ್ನ 3 ಗಂಟೆಯ ನಂತರ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಕ್ರಿಯೆ ನಡೆಯಲಿದೆ. ಅಲ್ಲದೇ ಮೃತರ ಅಂತ್ಯ ಸಂಸ್ಕಾರವನ್ನು ಒಕ್ಕಲಿಗ ಸಂಪ್ರದಾಯದಂತೆ ಮಾಡಲಾಗುತ್ತಿದ್ದು, ಸುಮಾರು 1,000 ಕೆ.ಜಿ.ಯಷ್ಟು ಶ್ರೀಗಂಧದ ಕಟ್ಟಿಗೆಗಳನ್ನು ಅರಣ್ಯ ಇಲಾಖೆಯಿಂದ ಪೂರೈಕೆ ಮಾಡಲಾಗಿದೆ. ಬಳಿಕ ಎಸ್.ಎಂ.ಕೃಷ್ಣ ಅವರ ಮೊಮ್ಮಗ ಅಮರ್ಥ್ಯ ಚಿತೆಗೆ ಅಗ್ನಿ ಸ್ಪರ್ಶ ಮಾಡಿ ವಿಧಿ-ವಿಧಾನಗಳನ್ನು ನೆರವೇರಿಸಲಿದ್ದಾರೆ.
ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಅಂತ್ಯ ಸಂಸ್ಕಾರಕ್ಕೆ ಸಿಎಂ ಸಿದ್ದರಾಮಯ್ಯ, ಸಚಿವರು, ಶಾಸಕರು, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಹಾಗೂ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ರಾಜಕೀಯ ಗಣ್ಯರು ಹಾಗೂ ಸ್ವಾಮೀಜಿಗಳು ಭಾಗವಹಿಸಲಿದ್ದಾರೆ. ಹೀಗಾಗಿ ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾಡಳಿತ ಹಾಗೂ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಪೊಲೀಸ್ ಇಲಾಖೆಯೂ ಪ್ರಮುಖ ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ.





