Mysore
29
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

ಜಿಲ್ಲೆಯ ಜನರು ಸಂಭ್ರಮದಿಂದ ನುಡಿಹಬ್ಬ ಯಶಸ್ವಿಗೊಳಿಸಿ: ಚಲುವರಾಯಸ್ವಾಮಿ ಮನವಿ

ಕೃಷ್ಣರಾಜಪೇಟೆ: ಮಂಡ್ಯ ನಗರದಲ್ಲಿ 3೦ ವರ್ಷಗಳ ನಂತರ ನಡೆಯುತ್ತಿರುವ ಅಖಿಲ ಭಾರತ 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ರೈತರು, ಮಹಿಳೆಯರು ಹಾಗೂ ಯುವಜನರು ಲಕ್ಷ ಲಕ್ಷ ಸಂಖ್ಯೆಯಲ್ಲಿ ಸಂಭ್ರಮದಿಂದ ಭಾಗವಹಿಸಿ ನುಡಿಹಬ್ಬವನ್ನು ಯಶಸ್ವಿಗೊಳಿಸಿ ಇತಿಹಾಸ ನಿರ್ಮಿಸಬೇಕು ಎಂದು ರಾಜ್ಯದ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಮನವಿ ಮಾಡಿದರು.

ಅವರು ಕೃಷ್ಣರಾಜಪೇಟೆ ಪಟ್ಟಣದಲ್ಲಿ ಸಂಚರಿಸಿದ ಕನ್ನಡ ಜ್ಯೋತಿ ಜಾಗೃತಿ ರಥಕ್ಕೆ ವಿಶೇಷ ಪೂಜೆ ಸಲ್ಲಿಸಿ ನೆರೆದಿದ್ದ ಸಾರ್ವಜನಿಕರನ್ನು ಉದ್ಧೇಶಿಸಿ ಮಾತನಾಡಿದರು.

ಮಂಡ್ಯ ನಗರದಲ್ಲಿ ಡಿಸೆಂಬರ್ 20,21 ಹಾಗೂ 22 ರಂದು ಕನ್ನಡ ಜಾತ್ರೆ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಬ್ಬದಂತೆ ಸಡಗರ ಸಂಭ್ರಮದಿಂದ ಆಚರಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಮಂಡ್ಯ ಜಿಲ್ಲೆಯ ಎಲ್ಲಾ ತಾಲೂಕುಗಳ ಗ್ರಾಮ ಪಂಚಾಯಿತಿ ಕೇಂದ್ರಗಳನ್ನು ತಲುಪಿ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸುವ ಕೆಲಸವನ್ನು ನಮ್ಮ ಜಿಲ್ಲೆಯಲ್ಲಿ ವಿಶೇಷವಾಗಿ ಪ್ರಚಾರ ಮಾಡುತ್ತಿದ್ದಾರೆ. ಎಲ್ಲರೂ ಕೈಜೋಡಿಸಿ ಎಂದು ಹೇಳಿದರು.

ರಾಜ್ಯದ ಎಲ್ಲಾ ತಾಲೂಕುಗಳು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಮತ್ತೊಂದು ಕನ್ನಡ ರಥವು ಸಂಚರಿಸುತ್ತಿದೆ. ನಮ್ಮ ದೇಶ ಮಾತ್ರವಲ್ಲದೇ ವಿದೇಶಗಳಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರು ಲಕ್ಷ ಲಕ್ಷ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಮೂರು ದಿನಗಳ ಕಾಲ ನಡೆಯುವ ಕನ್ನಡದ ಜಾತ್ರೆಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳಿಂದಲೂ ಪ್ರತಿ ದಿನವೂ ಕನಿಷ್ಠ 5೦ ಸಾವಿರದಂತೆ ಮಂಡ್ಯದಲ್ಲಿ ಲಕ್ಷ ಲಕ್ಷ ಸಂಖ್ಯೆಯಲ್ಲಿ ಕನ್ನಡಿಗರು ಭಾಗವಹಿಸಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಿಕೊಡಬೇಕು ಎಂದು  ಮನವಿ ಮಾಡಿದರು.

ಸಮ್ಮೇಳನ ನಡೆಸಲು ಬೆಂಗಳೂರು ರಸ್ತೆಯಲ್ಲಿರುವ ಸ್ಯಾಂಜೋ ಆಸ್ಪತ್ರೆಯ ಹಿಂಭಾಗದಲ್ಲಿನ ವಿಶಾಲವಾದ ಸ್ಥಳವನ್ನು ನಿಗಧಿ ಮಾಡಿದೆ. ಸಮ್ಮೇಳನಾಧ್ಯಕ್ಷರ ಆಯ್ಕೆಯ ಪ್ರಕ್ರಿಯೆಯು ಮಾತ್ರ ಬಾಕಿಯಿದ್ದು ಸೂಕ್ತವಾದ ವ್ಯಕ್ತಿಯನ್ನು ಸಮ್ಮೇಳನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗುವುದು ಎಂದು ತಿಳಿಸಿದ ಸಚಿವರು ಮಂಡ್ಯ ಜಿಲ್ಲೆಯ ಜನರಿಗೆ 3೦ ವರ್ಷಗಳ ನಂತರ ದೊರೆತಿರುವ ಅಪರೂಪದ ಅವಕಾಶವನ್ನು ಜಿಲ್ಲೆಯ ಜನತೆ ಪ್ರೀತಿಯಿಂದ ಸ್ವಾಗತಿಸಿ ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿಕೊಡಬೇಕು ಎಂದರು.

ಕೆ.ಆರ್.ನಗರ ಶಾಸಕ ಡಿ.ರವಿಶಂಕರ್, ತಹಶೀಲ್ದಾರ್ ಲೆಪ್ಟಿನೆಂಟ್ ಕರ್ನಲ್ ಅಶೋಕ್, ಕಸಾಪ ಪೂರ್ಣಚಂದ್ರತೇಜಸ್ವಿ, ಮಾಜಿಅಧ್ಯಕ್ಷ ಕೆ.ಆರ್.ನೀಲಕಂಠ, ಮಾಜಿಶಾಸಕರಾದ ಕೆ.ಬಿ.ಚಂದ್ರಶೇಖರ್, ಬಿ.ಪ್ರಕಾಶ್, ಪುರಸಭೆ ಅಧ್ಯಕ್ಷೆ ಪಂಕಜಾ, ಮುಖ್ಯಾಧಿಕಾರಿ ನಟರಾಜು, ಕ್ಷೇತ್ರಶಿಕ್ಷಣಾಧಿಕಾರಿ ತಿಮ್ಮೇಗೌಡ, ತಾಲೂಕು ಆರೋಗ್ಯಾಧಿಕಾರಿ ಅಜಿತ್, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಶಶಿಧರ್, ಶಿಶು ಅಭಿವೃದ್ಧಿ ಅಧಿಕಾರಿ ಅರುಣಕುಮಾರ್, ತಾಲೂಕು ಸಮಾಜ ಕಲ್ಯಾಣಾಧಿಕಾರಿ ದಿವಾಕರ್, ಕ್ಷೇತ್ರ ಸಮನ್ವಯಾಧಿಕಾರಿ ಚಂದ್ರಶೇಖರ್, ತಾ.ಪಂ ಇಓ ಡಾ.ನರಸಿಂಹರಾಜು ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

.

Tags: