ಮಂಡ್ಯ(ಶ್ರೀರಂಗಪಟ್ಟಣ): ಪುರಾಣ ಪ್ರಸಿದ್ಧ, ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವವು ಅ.4ರಿಂದ ಅಂದರೆ ನಾಳೆಯಿದ ಪ್ರಾರಂಭವಾಗಲಿದೆ. ಈ ಹಿನ್ನೆಲೆ, ಶ್ರೀರಂಗಪಟ್ಟಣ ದಸರಾದಲ್ಲಿ ಪಾಲ್ಗೋಳಲು ಆಗಮಿಸಿರುವ ಆನೆಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಇಂದು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಸ್ವಾಗತಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.
ಅಕ್ಟೋಬರ್ 04 ರಿಂದ 07 ರವರೆಗೆ ಶ್ರೀರಂಗಪಟ್ಟಣ ದಸರಾ
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಅಕ್ಟೋಬರ್ 04 ರಿಂದ 7 ರವರೆಗೆ ನಾಡಹಬ್ಬ ಶ್ರೀರಂಗಪಟ್ಟಣ ದಸರಾವನ್ನು ಆಯೋಜಿಸಲಾಗಿದೆ.
ಅಕ್ಟೋಬರ್ 04(ನಾಳೆ) ರಂದು ಮಧ್ಯಾಹ್ನ 12:30 ಗಂಟೆಗೆ ನಂದಿ ಧ್ವಜ ಪೂಜೆ ನೆರವೇರಿಸಲಾಗುವುದು. ಮಧ್ಯಾಹ್ನ 2:30 ರಿಂದ 3:00 ಗಂಟೆಯವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಅಗ್ರಪೂಜೆ ಹಾಗೂ ಜಂಬೂಸವಾರಿ ಮೆರವಣಿಗೆಗೆ ಖ್ಯಾತ ಚಲನಚಿತ್ರ ನಟ ಡಾ ಶಿವರಾಜ್ ಕುಮಾರ್ ಅವರು ಚಾಲನೆ ನೀಡಲಿದ್ದಾರೆ.
ಅಕ್ಟೋಬರ್ 4ರಂದು ಸಂಜೆ 6:00 ಗಂಟೆಗೆ ಶ್ರೀರಂಗನಾಥಸ್ವಾಮಿ ದೇವಾಲಯದ ಆವರಣದ ಶ್ರೀರಂಗ ವೇದಿಕೆಯಲ್ಲಿ ಶ್ರೀರಂಗಪಟ್ಟಣ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ ಜರುಗಲಿದೆ.