Mysore
28
broken clouds

Social Media

ಬುಧವಾರ, 29 ಏಪ್ರಿಲ 2026
Light
Dark

ಸರ್ಕಾರಿ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಿ: ಸಚಿವ ಎನ್.ಚಲುವರಾಯಸ್ವಾಮಿ

ಮಂಡ್ಯ: ಸರ್ಕಾರಿ ಯೋಜನೆಗಳ ಸವಲತ್ತನ್ನು ಕಾರ್ಮಿಕರು ಪರಿಣಾಮಕಾರಿಯಾಗಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಕರೆ ನೀಡಿದರು.

ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ನಗರದ ಚಿಕ್ಕ ಮಂಡ್ಯದಲ್ಲಿ ನಿರ್ಮಿಸಲಾಗಿರುವ ನೂತನ ಕಾರ್ಮಿಕ ಭವನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಸರ್ಕಾರ ಕಾರ್ಮಿಕರು, ರೈತರು ಹಾಗೂ ಮಹಿಳೆಯರ ಅಭಿವೃದ್ಧಿಗಾಗಿ ಶ್ರಮವಹಿಸುತ್ತದೆ ಎಂದು ಭರವಸೆ ನೀಡಿದರು.

ಕಾರ್ಮಿಕ ಮುಖಂಡರು ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳು ಕಾರ್ಮಿಕರಿಗೆ ಸರ್ಕಾರ ನೀಡುವ ಯೋಜನೆಗಳ ಕುರಿತು ಮನೆ ಮನೆಗೆ ಮಾಹಿತಿ ನೀಡುವ ಕಾರ್ಯ ಕೈಗೊಳ್ಳಿ. ಆಗ ಸರ್ಕಾರಿ ಯೋಜನೆಗಳು ಅವರನ್ನು ತಲುಪುತ್ತದೆ ಹಾಗೂ ಆರ್ಥಿಕ ಅಭಿವೃದ್ಧಿ ಹೊಂದುತ್ತಾರೆ ಎಂದು ತಿಳಿಸಿದರು.

ಕಾರ್ಮಿಕ ಭವನದ ಮೂಲ ಉದ್ದೇಶ ಕಾರ್ಮಿಕರಿಗೆ ಅಗತ್ಯ ಮಾಹಿತಿ ಒದಗಿಸುವುದು, ನವಭಾರತ ನಿರ್ಮಾಣಕ್ಕೆ ಕಾರ್ಮಿಕರ ಕೊಡುಗೆ ಅಪಾರ. ಆದ್ದರಿಂದ ಕಾರ್ಮಿಕರು ಕಾರ್ಮಿಕ ಭವನ ಸದುಪಯೋಗವನ್ನು ಪರಿಣಾಮಕಾರಿಯಾಗಿ ಪಡೆದುಕೊಳ್ಳಿ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಖಾಸಗಿ ವಾಹನ ಚಾಲಕರು ಮೃತ ಪಟ್ಟ ಸಂದರ್ಭದಲ್ಲಿ ಅವರ ಕುಟುಂಬದವರಿಗೆ ನೀಡುವ 5 ಲಕ್ಷ ರೂ ಪರಿಹಾರ ಚೆಕ್ ಹಾಗೂ ವಿದ್ಯಾರ್ಥಿ ವೇತನ ಚೆಕ್ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ರವಿಕುಮಾರ್, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ. ಆರ್ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಡಾ. ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

 

Tags:
error: Content is protected !!