Mysore
23
overcast clouds
Light
Dark

ಕುಡಿಯುವ ನೀರಿನ ಪರೀಕ್ಷೆ ಕಡ್ಡಾಯ: ಜಿಲ್ಲಾಧಿಕಾರಿ ಡಾ. ಕುಮಾರ

ಮಂಡ್ಯ:  ಜಿಲ್ಲೆಯ ಸಾರ್ವಜನಿಕರಿಗೆ ಕುಡಿಯುವ ನೀರನ್ನು ಸರಬರಾಜು ಮಾಡುವ ಮುನ್ನ ನಿಯಮಿತವಾಗಿ ನೀರಿನ ಪರೀಕ್ಷೆ ನಡೆಸಿ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಅವರು ಇಂದು ಜಿಲ್ಲಾಧಿಕಾರಿ ಕಛೇರಿಯ ಸಭಾಂಗಣದಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಾರ್ವಜನಿಕರಿಗೆ ಸರಬರಾಜು ಮಾಡುತ್ತಿರುವ ಕುಡಿಯುವ ನೀರಿನ ಗುಣಮಟ್ಟ ಪರಿಶೀಲನೆ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಕುರಿತು ಸಭೆ ನಡೆಸಿ ಮಾತನಾಡಿದರು.

ಕಲುಷಿತ ನೀರು ಸೇವನೆಯಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಕುಡಿಯುವ ನೀರಿಗೆ ಯಾವುದೇ ಕಲುಷಿತ ನೀರು ಸೇರ್ಪಡೆಯಾಗದಂತೆ ಎಚ್ಚರವಹಿಸಿ ಎಂದರು.

ಜಾಕ್ವೆಲ್ ಪಾಯಿಂಟ್ ಗೆ ನೀರು ಸೇರ್ಪಡೆಯಾಗುವ ನದಿಗಳು ಯಾವುದು ಎಂಬುದನ್ನು ತಿಳಿದು, ನೀರನ್ನು ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಬೇಕು.ಪರೀಕ್ಷೆ ನಡೆಸದೆ ಕುಡಿಯುವ ನೀರು ಸರಬರಾಜು ಮಾಡಿ ಸಾರ್ವಜನಿಕರ ಆರೋಗ್ಯಕ್ಕೆ ಯಾವುದೇ ತೊಂದರೆ ಉಂಟಾದಲ್ಲಿ ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಯ ಮುಖ್ಯಸ್ಥರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ನಗರ ಪ್ರದೇಶಗಳಲ್ಲಿ ನೀರಿನ ವ್ಯವಸ್ಥೆಯಡಿ ಬರುವ ಎಲ್ಲಾ ಪೈಪ್‌ ಲೈನ್ ಗಳನ್ನು ಪ್ರತಿದಿನವೂ ಕಣ್ಣಗಾವಲು ನಡೆಸಿ. ಪೈಪ್ ಲೈನ್ ಹಾನಿಯಾಗಿದ್ದರೆ ಕಲುಷಿತ ನೀರು ಕುಡಿಯುವ ನೀರಿಗೆ ಸೇರ್ಪಡೆಯಾಗುವ ಸಾಧ್ಯತೆಯಿದೆ. ಗಮನವಹಿಸಿ ದುರಸ್ಥಿ ಕಾರ್ಯ ನಡೆಯಬೇಕು ಎಂದರು.

ಒಂದು ವೇಳೆ ನಗರ ಪ್ರದೇಶಗಳಲ್ಲಿ ವಾಂತಿ, ಭೇದಿ ಪ್ರಕರಣ ಕಂಡು ಬಂದರೆ ತಕ್ಷಣ ಕುಡಿಯುವ ನೀರಿನ ಸರಬರಾಜು ವ್ಯವಸ್ಥೆಯನ್ನು ಸ್ಥಗಿತಗೊಳಿಸಿ, ಗುಣಮಟ್ಟವನ್ನು ಖಚಿತಪಡಿಸಿಕೊಳ್ಳಲು ಹೆಚ್ಚಿನ ಪರೀಕ್ಷೆಗಾಗಿ ಹತ್ತಿರದ ಇಲಾಖಾ ಪ್ರಯೋಗಾಲಯಗಳಿಗೆ ನೀರಿನ ಮಾದರಿಗಳನ್ನು ಸಲ್ಲಿಸಬೇಕು. ನೀರು ಕಲುಷಿತವೆಂದು ಕಂಡುಬಂದರೆ, ಕೂಡಲೇ ಸರಬರಾಜು ವ್ಯವಸ್ಥೆಯನ್ನು ಸಂಪೂರ್ಣವಾಗಿ ನಿಲ್ಲಿಸಿ, ಪರ್ಯಾಯ ಮೂಲಗಳಿಂದ ನೀರನ್ನು ಸರಬರಾಜು ಮಾಡಲು ಕ್ರಮಕೈಗೊಳ್ಳಿ ಎಂದು ಹೇಳಿದರು.

ನೀರಿನ ಸರಬರಾಜು ವ್ಯವಸ್ಥೆಯಲ್ಲಿರುವ ಎಲ್ಲಾ ನೀರು ಶೇಖರಣಾ ಘಟಕಗಳನ್ನು ಸ್ವಚ್ಛಗೊಳಿಸಿ ಪ್ರತಿ ಹಂತದಲ್ಲಿಯೂ ಕ್ಲೋರಿನೇಷನ್ ಮಾಡಲು ಕ್ರಮವಹಿಸಿ ಎಂದರು.

ನೀರಿನ ಮೂಲಗಳಾದ ಕೊಳವೆ ಬಾವಿಗಳ ಸುತ್ತಮುತ್ತಲೂ ಯಾವುದೇ ಕಲುಷಿತ ಅಥವಾ ಚರಂಡಿ ನೀರು ನಿಲ್ಲದಂತೆ ನೀರು ಸರಾಗವಾಗಿ ಹರಿಯಲು ಸೂಕ್ತ ಚರಂಡಿ ವ್ಯವಸ್ಥೆ ಕೈಗೊಂಡು ನೀರಿನ ಮೂಲದ ಸುತ್ತ ಕಾಂಕ್ರೀಟ್ ಕಟ್ಟೆ ಕಟ್ಟುವುದು ಸೂಕ್ತ ಎಂದು ಸಲಹೆ ನೀಡಿದರು.

ಕೆಲವು ನಗರ ಜನ ವಸತಿ ಪ್ರದೇಶಗಳಲ್ಲಿರುವ ಕೊಳವೆ ಬಾವಿಗಳ ಕೇಸಿಂಗ್ ಪೈಪ್ ಹಾನಿಯಾಗಿರುವುದು ಕಂಡು ಬಂದಿದ್ದು, ಭೂಮಿಯ ಮಟ್ಟಕ್ಕೆ ಅಥವಾ ಅದಕ್ಕಿಂತ ಕೆಳಗಿರುವ ಕೊಳವೆ ಬಾವಿಗಳ ಕೇಸಿಂಗ್ ಪೈಪ್‌ನ್ನು ಭೂಮಿಯ ಮಟ್ಟದಿಂದ ಎರಡು ಅಡಿ ಎತ್ತರಿಸಿ ಕಲುಷಿತ ನೀರು ಸೇರದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ ಎಂದರು.

ಕುಡಿಯುವ ನೀರು ಸರಬರಾಜಿನ ಕೊಳವೆ ಮಾರ್ಗಗಳು ಒಡೆದು ಹೋದಲ್ಲಿ ತಕ್ಷಣ ದುರಸ್ಥಿಪಡಿಸಲು ಕ್ರಮವಹಿಸಬೇಕು. ನೀರು ಸರಬರಾಜು ಕೊಳವೆ ಮಾರ್ಗದಲ್ಲಿ ಪೈಪ್ ಒಡೆದು ಹೋಗಿದ್ದಲ್ಲಿ, ಹೊರಗಿನ ಇತರೆ ವಸ್ತುಗಳು/ಕೊಳಚೆ ನೀರು/ಕುಡಿಯುವ ನೀರಿನ ಸರಬರಾಜಿನ ಪೈಪ್‌ಲೈನ್ ಒಳಗೆ ಹರಿಯದಂತೆ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.

ಸರ್ಕಾರದ ವಿವಿಧ ಯೋಜನೆಯಡಿ ಕುಡಿಯುವ ನೀರನ್ನು ಸರಬರಾಜು ಮಾಡಲು ನಿರ್ಮಿಸಿರುವ ಓವರ್‌ ಹೆಡ್ ಟ್ಯಾಂಕ್‌ಗಳ ನೀರಿನ ಗುಣಮಟ್ಟದ ಪರೀಕ್ಷೆಗಳನ್ನು (Both inlet & Outlet points) ಕನಿಷ್ಠ ತಿಂಗಳಿಗೊಮ್ಮೆ ಕೈಗೊಂಡು ಪರೀಕ್ಷಾ ವರದಿಗಳನ್ನು ಜಿಲ್ಲೆಯ ಕಾರ್ಯಪಾಲಕ ಅಭಿಯಂತರರುಗಳಿಗೆ ಸಲ್ಲಿಸಬೇಕು ಎಂದರು.

ಸಭೆಯಲ್ಲಿ ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕಿ ತುಷಾರಮಣಿ, ನಗರಸಭೆ ಪೌರಾಯುಕ್ತ ಆರ್ ಮಂಜುನಾಥ್ ಸೇರಿದಂತೆ ವಿವಿಧ ತಾಲ್ಲೂಕಿನ ಮುಖ್ಯ ಅಧಿಕಾರಿಗಳು ಉಪಸ್ಥಿತರಿದ್ದರು.