ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ಹಿನ್ನೆಲೆಯಲ್ಲಿ ಅಂದು ಯಾವುದೇ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಬಾರದು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು ಇಲಾಖೆಯ ವೈದ್ಯರು ಹಾಗೂ ಸಿಬ್ಬಂದಿ ಸಾರ್ವಜನಿಕ ಆರೋಗ್ಯ ಸೇವೆಯ ನಿರಂತರತೆ ಮತ್ತು ರೋಗಿಗಳ ಆರೋಗ್ಯ ಕಾಪಾಡುವ ಮಹತ್ವದ ಜವಾಬ್ದಾರಿ ಹೊಂದಿದ್ದಾರೆ. ಈ ಸಂಬಂಧ ಸಾರ್ವಜನಿಕರಿಗೆ ವೖದ್ಯಕೀಯ ಸೇವೆಯಲ್ಲಿ ತೊಂದರೆ ಆಗಬಾರದು ಎಂದು ಹೇಳಿದರು.
ಗರ್ಭಿಣಿಯರು, ಶಿಶುಗಳು, ವೃದ್ಧರು ಹಾಗೂ ಗಂಭೀರ ರೋಗಿಗಳಿಗೆ ಆದ್ಯತೆ ನೀಡಿ ಚಿಕಿತ್ಸೆ ನೀಡಬೇಕು ಮತ್ತು ಡಯಾಲಿಸಿಸ್, ಪ್ರಸೂತಿ, ಐಸಿಯು ಹಾಗೂ ಜೀವ ರಕ್ಷಕ ಸೇವೆಗಳು ನಿರಂತರವಾಗಿ ಲಭ್ಯವಿರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
108 ಆಂಬುಲೆನ್ಸ್ ಸೇವೆ ಹಾಗೂ ರೆಫರಲ್ ವ್ಯವಸ್ಥೆ ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಕ್ರಮವಹಿಸಬೇಕು ಮತ್ತು ತಾಲ್ಲೂಕು ಮಟ್ಟದಲ್ಲಿ ಕರ್ತವ್ಯ ವೈದ್ಯರನ್ನು ನಿಯೋಜಿಸಿ ಹಾಜರಾತಿ ಕಡ್ಡಾಯಗೊಳಿಸಬೇಕು ಎಂದು ಹೇಳಿದರು.
ಅಗತ್ಯವಿದ್ದಲ್ಲಿ ತಾತ್ಕಾಲಿಕವಾಗಿ ಹೆಚ್ಚುವರಿ ವೈದ್ಯರನ್ನು ನಿಯೋಜಿಸಿ ಖಾಸಗಿ ಆಸ್ಪತ್ರೆಗಳೊಂದಿಗೆ ಸಮನ್ವಯ ಸಾಧಿಸಿ ತುರ್ತು ಸಂದರ್ಭಗಳಲ್ಲಿ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು.ಔಷಧಿ ಮತ್ತು ಉಪಕರಣಗಳ ಲಭ್ಯತೆ ಕುರಿತು ದೈನಂದಿನ ಪರಿಶೀಲನೆ ನಡೆಸಬೇಕು ಮತ್ತು ಆಸ್ಪತ್ರೆಗಳಲ್ಲಿ ಸಹಾಯ ಕೌಂಟರ್ ವ್ಯವಸ್ಥೆ ಸಕ್ರಿಯಗೊಳಿಸಬೇಕು ಎಂದು ತಿಳಿಸಿದರು.
ಯಾವುದೇ ತುರ್ತು ಪರಿಸ್ಥಿತಿ ಉಂಟಾದಲ್ಲಿ ತಕ್ಷಣ ಜಿಲ್ಲಾಡಳಿತದ ಗಮನಕ್ಕೆ ತರಬೇಕು.ಸಂಘಟನೆಗಳ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರಲಾಗುತ್ತದೆ. ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ, ಸಂಧಾನ ಮೂಲಕ ಸಮಸ್ಯೆ ಪರಿಹರಿಸಿಕೊಳ್ಳಲು ಸಂಘಟನೆಗಳು ಸಹಕರಿಸಬೇಕು ಎಂದು ಹೇಳಿದರು.
ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಯಾವುದೇ ರೀತಿಯ ಮುಷ್ಕರಕ್ಕೆ ಮುಂದಾಗದೆ. ಆರೋಗ್ಯ ಸೇವೆಯನ್ನು ನಿರಂತರವಾಗಿ ನೀಡುವಂತೆ ಸಂಘಟನೆಗಳ ಪ್ರತಿನಿಧಿಗಳಿಗೆ ತಿಳಿಸಿ. “ಜನಾರೋಗ್ಯ ಸೇವೆ ಅತ್ಯಂತ ಪ್ರಾಮುಖ್ಯತೆಯದ್ದು ರೋಗಿಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ಕರ್ತವ್ಯ ನಿರ್ವಹಿಸುವುದು ಜವಾಬ್ದಾರಿಯಾಗಿದೆ” ಎಂದು ಸೂಚಿಸಿದರು.





