ಮೈಸೂರು: ಗಾಯಗೊಂಡಿದ್ದ ಹುಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಕೊಡಗು ಜಿಲ್ಲೆ ಸಿದ್ದಾಪುರ ಸಮೀಪದ ಮಾಲ್ದಾರೆ ಅರಣ್ಯದಲ್ಲಿ ಗಾಯಗೊಂಡಿದ್ದ ಸುಮಾರು 8 ವರ್ಷ ಪ್ರಾಯದ ಗಂಡು ಹುಲಿಯನ್ನು ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕೊಡಗು ಜಿಲ್ಲೆಯ ಅರಣ್ಯಾಧಿಕಾರಿಗಳು ಮಂಗಳವಾರ ರಾತ್ರಿ ಮೈಸೂರಿನ ಕೂರ್ಗಳ್ಳಿಯಲ್ಲಿರುವ ಚಾಮುಂಡಿ ವನ್ಯಪ್ರಾಣಿ ಸಂರಕ್ಷಣೆ ಮತ್ತು ಪುನರ್ವಸತಿ ಕೇಂದ್ರಕ್ಕೆ ತಂದು ದಾಖಲಿಸಿದ್ದರು. ಆದರೆ, ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಹುಲಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.





