ಬೆಂಗಳೂರು : ಕಾಂಗ್ರೆಸ್ ವತಿಯಿಂದ ಆಯೋಜನೆ ಮಾಡಲಾಗಿರುವ ಭಾರತ್ ಜೋಡೊ ಯಾತ್ರೆಯು ಅ. 2ರಂದು ನಂಜನಗೂಡಿನ ಬದನವಾಳುವಿನಲ್ಲಿ ಮಹಾತ್ಮ ಗಾಂಧೀಜಿ ಅವರು ಸ್ಥಾಪಿಸಿದ ಖಾದಿ ಕೇಂದ್ರದಲ್ಲಿ ರಾಹುಲ್ ಗಾಂಧಿ ಅವರು ಗಾಂಧಿ ಜಯಂತಿಯನ್ನು ಆಚರಣೆ ಮಾಡಲಿದ್ದಾರೆ. ಈ ಮೂಲಕವಾಗಿ ಸಾಂಸ್ಕೃತಿಕ ನಗರಿ ಮೈಸೂರಿಗ ಜೋಡೋ ಯಾತ್ರೆಯು ಆಗಮಿಸಲಿದೆ. ಮೈಸೂರಿನಲ್ಲಿ ನಮ್ಮ ಯಾತ್ರೆಯು ಒಂದು ಐತಿಹಾಸಿಕ ಘಟನೆಗೆ ಸಾಕ್ಷಿಯಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮಾತನಾಡಿದರು.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಸಮಾಜದ ಪ್ರತೀ ವರ್ಗದವರನ್ನೂ ಕೂಡ ರಾಹುಲ್ ಗಾಂಧಿ ಅವರು ಭೇಟಿ ಮಾಡಿ ಅವರ ಕಷ್ಟ ಸುಖ ವಿಚಾರಿಸಲಿದ್ದಾರೆ. ಮಹಿಳೆಯರು, ಸಿವಿಲ್ ಸೊಸೈಟಿಗಳು, ಹೋರಾಟಗಾರರು ಮೊದಲಾದವರು ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಈಗಾಗಲೇ ಕರೆ ನೀಡಿದ್ದೇವೆ. ನೀವೂ ಬನ್ನಿ ನಿಮ್ಮ ಕುಟುಂಬದವರನ್ನೂ ಕರೆತನ್ನಿ ಎಂದು ಮಾಧ್ಯಮಗಳ ಮೂಲಕ ಜನಸಾಮಾನ್ಯರಿಗೆ ಕರೆ ನೀಡಿದರು.
ಕರ್ನಾಟಕದಲ್ಲಿ ಸೆ.30ರಿಂದ ಭಾರತ್ ಜೋಡೋ: ರಾಜ್ಯದಲ್ಲಿ ಈ ಯಾತ್ರೆ ಸೆ.30 ರಂದು ಬೆಳಗ್ಗೆ 9 ಗಂಟೆಗೆ ಗುಂಡ್ಲುಪೇಟೆಯಿಂದ ಆರಂಭವಾಗಲಿದೆ. ಅ. 2 ರಂದು ಬದನವಾಳು ಗ್ರಾಮದಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ದಸರಾ ಹಬ್ಬದ ಪ್ರಯುಕ್ತ 2 ದಿನಗಳ ಕಾಲ ಯಾತ್ರೆಗೆ ಬಿಡುವು ನೀಡಲಾಗುವುದು.
ಬಳಿಕ ಸುದ್ದಿಗೋಷ್ಠಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮಾತನಾಡಿ, ಇಂದು ಭಾರತ ಐಕ್ಯತಾ ಯಾತ್ರೆಯ ಸಿದ್ಧತಾ ಪರಿಶೀಲನಾ ಸಭೆ ಮಾಡಿದ್ದೇವೆ. ಪ್ರದೇಶ ಕಾಂಗ್ರೆಸ್ ಹಾಗೂ ರಾಜ್ಯ ನಾಯಕರು ಮಾಡಿರುವ ಎಲ್ಲಾ ಸಿದ್ಧತೆಗಳು ಎಐಸಿಸಿಗೆ ತೃಪ್ತಿ ತಂದಿದೆ. ನಮ್ಮ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೇವಾಲ ಅವರು ನಿತ್ಯ ತಯಾರಿ ಕುರಿತು ಪರಿಶೀಲನೆ ನಡೆಸುತ್ತಿದ್ದು, ರಾಜ್ಯದಲ್ಲಿನ ಯಾತ್ರೆ ಅತ್ಯಂತ ಯಶಸ್ವಿಯಾಗಲಿದೆ ಎಂಬ ವಿಶ್ವಾಸ ಇದೆ ಎಂದರು.





