ವಿಧಾನಸಭೆ : ಸಾಂಸ್ಕೃತಿಕ ನಗರ ಮೈಸೂರಿನ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಅಭಿವೃದ್ಧಿಗೆ ಈ ಬಾರಿ ಬಜೆಟ್ ನಲ್ಲಿ 750 ರಿಂದ 800 ಕೋಟಿ ರೂಪಾಯಿ ಮೀಸಲಿಡಲಾಗುತ್ತದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಜಿ.ಟಿ.ದೇವೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮೈಸೂರು ನಗರದ ವಿವಿಧ ಬಡಾವಣೆಗಳಲ್ಲಿ ಮಳೆನೀರು ಚರಂಡಿ ನಿರ್ಮಾಣ ಮಾಡಲಾಗಿದೆ. ಆದರೆ, ಕೆಲವು ಕಡೆ ಸಂಪರ್ಕ ಕಲ್ಪಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಈ ಕಾಮಗಾರಿ ಕೈಗೊಳ್ಳಲು 27 ಕೋಟಿ ವಿಶೇಷ ಅನುದಾನಕ್ಕಾಗಿ ಮೈಸೂರು ಮಹಾನಗರ ಪಾಲಿಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ, ಆರ್ಥಿಕ ಇಲಾಖೆ ಈ ಪ್ರಸ್ತಾವನೆಯನ್ನು ತಿರಸ್ಕರಿಸಿತ್ತು ಎಂದು ವಿವರಣೆ ನೀಡಿದರು.
ಇತ್ತೀಚೆಗೆ ಮಂಡಿಸಲಾದ ಬಜೆಟ್ ನಲ್ಲಿ ಮೈಸೂರಿನ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆಗಾಗಿ 1500 ಕೋಟಿ ರೂಪಾಯಿಗಳನ್ನು ಮೀಸಲಿಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದನ್ನು ಪುರಸ್ಕರಿಸಿರುವ ಮುಖ್ಯಮಂತ್ರಿಗಳು ಸುಮಾರು 750 ರಿಂದ 800 ಕೋಟಿ ರೂಪಾಯಿಗಳನ್ನು ಈ ಉದ್ದೇಶಕ್ಕಾಗಿ ಮೀಸಲಿಡಲಾಗುತ್ತಿದೆ ಎಂದು ಸಚಿವರು ಸದನಕ್ಕೆ ತಿಳಿಸಿದರು.
ಎಂಡಿಎದಿಂದ 300 ಕೋಟಿ
ಮೈಸೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸರ್ವಾಂಗೀಣ ಅಭಿವೃದ್ಧಿಗೆಂದು ಮೈಸೂರು ಅಭಿವೃದ್ಧಿ ಪ್ರಾಧಿಕಾರವನ್ನು ರಚನೆ ಮಾಡಲಾಗಿದೆ. ಇದಕ್ಕೆ 200 ಕೋಟಿ ರೂಪಾಯಿಗಳನ್ನೂ ನೀಡಲಾಗಿದೆ. ಇದೇ ವೇಳೆ, ನಗರದ ರಸ್ತೆಗಳಿಗೆ ವೈಟ್ ಟಾಪಿಂಗ್ ಯೋಜನೆಗಳಿಗಾಗಿ 300 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದರು.
ಸಿಎ ನಿವೇಶನಗಳ ಮಾರಾಟ
ವಿವಿಧ ಬಡಾವಣೆಗಳಲ್ಲಿ ಇರುವ ಸಿಎ ನಿವೇಶನಗಳನ್ನು ಮಾರಾಟ ಮಾಡುವಂತೆ ಜಿ.ಟಿ.ದೇವೇಗೌಡ ಅವರು ನೀಡಿದ ಸಲಹೆಗೆ ಸ್ಪಂದಿಸಿದ ಸಚಿವ ಬೈರತಿ ಸುರೇಶ್ ಅವರು, ಸಿಎ ನಿವೇಶನಗಳನ್ನು ಮಾರಾಟ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಇದರಿಂದ ಸುಮಾರು 4 ರಿಂದ 5 ಸಾವಿರ ಕೋಟಿ ರೂಪಾಯಿ ಆದಾಯವನ್ನು ನಿರೀಕ್ಷಿಸಲಾಗಿದೆ. ಈ ಹಣವನ್ನು ಮೈಸೂರು ಮತ್ತು ಹೊಸ ಬಡಾವಣೆಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಬಳಸಲು ರೂಪುರೇಶೆ ರೂಪಿಸಲಾಗುತ್ತದೆ ಎಂದು ಭರವಸೆ ನೀಡಿದರು.





