ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ.
ಇಂದು ಬೆಳಿಗ್ಗೆಯಿಂದಲೂ ಸಾವಿರಾರು ಭಕ್ತರು ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.
ಇನ್ನು ದೇವಸ್ಥಾನಕ್ಕೆ ಭಕ್ತರ ಸಂಖ್ಯೆಯಲ್ಲಿ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ನಂಜುಂಡೇಶ್ವರ ದೇವಸ್ಥಾನದ ಬಸ್ ನಿಲ್ದಾಣವನ್ನು ತಾತ್ಕಾಲಿಕವಾಗಿ ಬದಲಾವಣೆ ಮಾಡಲಾಗಿದೆ.
ದೇವಸ್ಥಾನದ ನದಿಯ ದಡದಲ್ಲಿದ್ದ ಬಸ್ ನಿಲ್ದಾಣವನ್ನು ಈಗ ಸಮೀಪದ ಮಾರ್ಗದಲ್ಲಿ ತಾತ್ಕಾಲಿಕ ನಿಲ್ದಾಣದ ವ್ಯವಸ್ಥೆ ಮಾಡಲಾಗಿದೆ.
ಬ್ಯಾರಿಕೇಡ್ ಅಳವಡಿಸಿ ಪೊಲೀಸರಿಂದ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸುಮಾರು 300 ಮೀಟರ್ ಅಂತರದಲ್ಲಿ ತಾತ್ಕಾಲಿಕ ನಿಲ್ದಾಣದ ವ್ಯವಸ್ಥೆ ಮಾಡಲಾಗಿದೆ.
ಇಂದು ಸಂಜೆ ಹಾಗೂ ರಾತ್ರಿ ದೇವಸ್ಥಾನ ಆವರಣದಲ್ಲಿ ಹಲವು ಸಂಗೀತ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ರಾತ್ರಿಯಿಡಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಕಾರಣ ನಿಲ್ದಾಣದಲ್ಲಿ ಕೆಲ ಮಾರ್ಪಾಡು ಮಾಡಲಾಗಿದೆ.




