Mysore
25
scattered clouds

Social Media

ಬುಧವಾರ, 15 ಜನವರಿ 2025
Light
Dark

ಜನರ ಸೇವೆ ಮಾಡಲು ನಾನು ರಾಜಕೀಯಕ್ಕೆ ಬಂದಿದ್ದೇನೆ: ರಾಜವಂಶಸ್ಥ ಯದುವೀರ್‌

ಮೈಸೂರು: ನಾನು ಜನರ ಸೇವೆ ಮಾಡಲು ರಾಜಕೀಯಕ್ಕೆ ಬಂದಿದ್ದೇನೆ. ಇದಕ್ಕಾಗಿ ಕಳೆದ 9 ವರ್ಷಗಳಿಂದ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದೇನೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದ್ದಾರೆ.

ಮೈಸೂರು ನಗರ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ನಿವೇದಿತಾ ನಗರದಲ್ಲಿ ಶುಕ್ರವಾರ ಸಂಜೆ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ನಾನು ರಾಜಕೀಯಕ್ಕೆ ಬರಬೇಕೆಂದು ಒಂದು ವರ್ಷದ ಹಿಂದೆಯೇ ಚಿಂತನೆ ನಡೆಸಿದ್ದೆ, ಕಳೆದ 9 ವರ್ಷಗಳಿಂದ ಹಲವು ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಜನರ ಸೇವೆ ಮಾಡಲು ಇಚ್ಛಿಸಿದ್ದು, ಅದಕ್ಕಾಗಿ ರಾಜಕೀಯಕ್ಕೆ ಬಂದಿದ್ದೇನೆ ಎಂದು ಯದುವೀರ್‌ ಹೇಳಿದರು.

ಸಮಾಜವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಮೈಸೂರು ಅರಸರು ಮೀಸಲಾತಿ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದರು. ಅದೇ ರೀತಿ ಕೇಂದ್ರ ಸರ್ಕಾರ ಜನರ ಏಳಿಗೆಗೆ ಶ್ರಮಿಸುತ್ತಿದೆ. ಇದರೊಂದಿಗೆ ಪರಂಪರೆಯ ರಕ್ಷಣೆ, ಭಾರತೀಯರ ಮೂಲಕ ಆಶಯಗಳನ್ನು ಉಳಿಸುವ ನಿಟ್ಟಿನಲ್ಲಿ ಮೋದಿ ಸರ್ಕಾರ ಕೆಲಸ ಮಾಡುತ್ತಿದೆ. ಇವೆಲ್ಲವೂ ನಮಗೆ ಸ್ಫೂರ್ತಿ ನೀಡಿದ್ದು, ವಿಕಸಿತ ಭಾರತ ಕಟ್ಟುವ ಕೆಲಸ ಮಾಡುವ ನಿಟ್ಟಿನಲ್ಲಿ ಶ್ರಮಿಸೋಣ ಎಂದು ಯದುವೀರ್‌ ಕರೆ ನೀಡಿದರು.

ಶಾಸಕ ಟಿ.ಎಸ್‌. ಶ್ರೀವತ್ಸ, ನಗರಾಧ್ಯಕ್ಷ ಎಲ್. ನಾಗೇಂದ್ರ, ಗ್ರಾಮಾಂತರ ಜಿಲ್ಲಾಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ, ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಧ್ಯಕ್ಷೆ ಮಂಜುಳ, ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ರಘು ಕೌಟಿಲ್ಯ, ಮಾಜಿ ಮೇಯರ್ ಶಿವಕುಮಾರ್ ಇತರರು ಹಾಜರಿದ್ದರು.

Tags: