ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಬಾಲಕನೊಬ್ಬ ಸಾವಿಗೀಡಾಗಿರುವ ಘಟನೆ ನಡೆದಿದೆ.
ಗ್ರಾಮದ ಪ್ರಸನ್ನ ಮತ್ತು ವಿಶಾಲಮ್ಮ ದಂಪತಿಯ ಪುತ್ರ, ಬೆಟ್ಟದಪುರ ಪಬ್ಲಿಕ್ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದ ಧನಂಜಯ (13) ಮೃತಪಟ್ಟ ಬಾಲಕ.
ಶನಿವಾರ ಮಧ್ಯಾಹ್ನ 3.30ರ ವೇಳೆಗೆ ಮನೆಯ ಹಿಂದೆ ಸ್ನೇಹಿತರ ಜೊತೆ ಕ್ರಿಕೆಟ್ ಆಡುತ್ತಿದ್ದಾಗ ಚೆಂಡನ್ನು ತರುವ ಸಲುವಾಗಿ ಬೇಲಿಯ ಹತ್ತಿರ ಹೋದಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿದ್ದಾನೆ. ತಕ್ಷಣ ಅಲ್ಲಿದ್ದ ಕೆಲಸಗಾರರು ಬಾಲಕನನ್ನು ವಿದ್ಯುತ್ ಸಂಪರ್ಕದಿಂದ ಬಿಡಿಸಿ, ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಪಿರಿಯಾಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ ಅಷ್ಟರಲ್ಲಿ ಆತ ಮೃತಪಟ್ಟಿರುವುದನ್ನು ವೈದ್ಯರು ದೃಢಪಡಿಸಿದ್ದಾರೆ.
ಈ ಸಂಬಂಧ ಮೃತ ಬಾಲಕನ ಚಿಕ್ಕಪ್ಪ ನಟರಾಜ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.




