ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ 50-50 ನಿವೇಶನ ಹಂಚಿಕೆಯಲ್ಲಿ ನಡೆದ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರನ್ನು ಮೈಸೂರು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.
ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಎ1, ಪತ್ನಿ ಪಾರ್ವತಿ ಸಿದ್ದರಾಮಯ್ಯ ಎ2, ಮಲ್ಲಿಕಾರ್ಜುನಸ್ವಾಮಿ ಎ3, ಹಾಗೂ ದೇವರಾಜು ಎ4 ಆರೋಪಿಯನ್ನಾಗಿಸಿ ಮೈಸೂರಿನ ಲೋಕಾಯುಕ್ತ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಹೀಗಾಗಿ, ಮೈಸೂರು ಲೋಕಾಯುಕ್ತ ಅಧಿಕಾರಿಗಳು ಇಂದು(ಅಕ್ಟೋಬರ್ 25) ಬೆಳಿಗ್ಗೆ 10 ಗಂಟೆಗೆ ಕಚೇರಿಗೆ ಕರೆಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಲೋಕಾಯುಕ್ತ ಎಸ್.ಪಿ. ಟಿ.ಜೆ.ಉದೇಶ್ ಪಾರ್ವತಿ ಅವರನ್ನು ಮೂರು ಗಂಟೆಗಳ ಕಾಲ ವಿಚಾರಣೆ ನಡೆಸಿ ಮಹತ್ವದ ಹೇಳಿಕೆಗಳನ್ನು ಪಡೆದುಕೊಂಡು ಗೌಪ್ಯವಾಗಿ ಮಾಹಿತಿ ಸಂಗ್ರಹಿಸಿದ್ದಾರೆ. ಈ ಹಿಂದೆ ಪಾರ್ವತಿ ಅವರು ಮುಡಾದ 50:50 ಅನುಪಾತದ ಬದಲಿ ನಿವೇಶನಗಳನ್ನು ಹಿಂತಿರುಗಿಸುವ ಸಂದರ್ಭದಲ್ಲಿಯೂ ಸಹ ಗೌಪ್ಯತೆಯನ್ನು ಕಾಪಾಡಲಾಗಿತ್ತು.
ಈಗಾಗಲೇ ಮುಡಾ ಪ್ರಕರಣದಲ್ಲಿ ಎ3 ಆರೋಪಿ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಎ4 ಆರೋಪಿ ದೇವರಾಜು ಅವರನ್ನು ವಿಚಾರಣೆ ನಡೆಸಿ ಮಾಹಿತಿಯನ್ನು ಪಡೆದುಕೊಂಡಿದ್ದರು. ಬಳಿಕ, ಪಾರ್ವತಿ ಸಿದ್ದರಾಮಯ್ಯ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು.





