ಮೈಸೂರು: ಧರ್ಮಸ್ಥಳದಲ್ಲಿ 2012ರಲ್ಲಿ ನಡೆದಿದ್ದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣ ಸಂಬಂಧ ಇತ್ತೀಚಿಗೆ ಸಮೀರ್ ಎಂಬಾತ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ, ಬಳಿಕ ಈ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ. ಇಂದು(ಮಾ.13)ನಗರಕ್ಕೆ ಆಗಮಿಸಿದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ.
ಸೌಜನ್ಯ ಕೊಲೆ ಪ್ರಕರಣ ಮತ್ತೆ ಮುನ್ನಲೆಗೆ ಬಂದಿರುವ ವಿಷಯಕ್ಕೆ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿ ಅವರು, ಸೌಜನ್ಯ ಕೊಲೆ ಪ್ರಕರಣ ಕುರಿತು ನ್ಯಾಯಾಲಯದಿಂದಲೂ ತೀರ್ಪು ಬಂದಿದೆ. ನಾನು ಒಂದು ಸಾಂವಿಧಾನಿಕ ಹುದ್ದೆಯಲ್ಲಿದ್ದುಕೊಂಡು ನ್ಯಾಯಾಲಯದ ತೀರ್ಪನ್ನು ಪ್ರಶ್ನೆ ಮಾಡಲಿಕ್ಕೆ ಆಗಲ್ಲ. ನಾನು ಮಾತ್ರ ಆ ಹೆಣ್ಣು ಮಗಳ ಪರವಾಗಿ ನಿಲ್ಲುತ್ತೇನೆ. ಆ ಪ್ರಕರಣದಲ್ಲಿ ಸಾವಿಗೀಡಾದ ಎಲ್ಲರಿಗೂ ನ್ಯಾಯ ಸಿಗಬೇಕು ಎನ್ನುವುದು ನನ್ನ ಆಶಯ. ಧರ್ಮಸ್ಥಳಕ್ಕೆ ಹೋದಾಗ ಸಂತ್ರಸ್ತ ಕುಟುಂಬದವರನ್ನು ಭೇಟಿ ಮಾಡುವುದಾಗಿ ಹೇಳಿದರು.
ಅಹವಾಲು ಸ್ವೀಕಾರ: ಕೇಂದ್ರ ಕಾರಾಗೃಹ ಆವರಣದಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿಚೌಧರಿ ಅವರು ಹಲವು ಮಹಿಳೆಯರಿಂದ ಮನವಿ ಸ್ವೀಕರಿಸಿದರು.





