ಮೈಸೂರು

ಮಾ.24 ರಂದು ಸಚಿವ ಮಹದೇವಪ್ಪ ಮನೆಗೆ ದಸಂಸ ಮುತ್ತಿಗೆ ; ಇಲ್ಲಿದೆ ಕಾರಣ ?

ಮೈಸೂರು: ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಒಳಗೆ ಭವನದ ಕಾಮಗಾರಿ ಪಾರಂಭಿಸಲಾಗುತ್ತದೆ ಎನ್ನುವ ದಲಿತರ ಕನಸನ್ನು ಭಗ್ನಗೊಳಿಸಿ ಹುಸಿ ಭರವಸೆಗಳನ್ನು ನೀಡುವ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ ಮಹದೇವಪ್ಪನವರ ನೈತಿಕತೆಯನ್ನು ಎಚ್ಚರಿಸಲು ಮಾ.೨೪ರಂದು ವಿಜಯನಗರದಲ್ಲಿರುವ ಅವರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ದಸಂಸ ಜಿಲ್ಲಾ ಸಂಚಾಲಕ ಬೆಟ್ಟಯ್ಯಕೋಟೆ ಹೇಳಿದ್ದಾರೆ.

ಮೈಸೂರಿನಲ್ಲಿ ನನೆಗುದಿಗೆ ಬಿದ್ದಿರುವ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದ ಕಾಮಗಾರಿ ಪೂರ್ಣಗೊಳಿಸಲು ಇರುವ ತೊಡಕುಗಳನ್ನು ನಿವಾರಿಸಿ ಕಾಮಗಾರಿ ಪ್ರಾರಂಭಿಸಲು ಕ್ರಮ ಕೈಗೊಳ್ಳುವ ಬದಲು ಬೇಜವಾಬ್ದಾರಿ ಹೇಳಿಕೆ ನೀಡಿ ಶೋಷಿತ ಸಮುದಾಯವನ್ನುಗೊಂದಲಕ್ಕೀಡು ಮಾಡುತ್ತಿರುವ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ದಲಿತ ವಿರೋಧಿ ನಡೆಯನ್ನು ಖಂಡಿಸುತ್ತೇವೆ ಎಂದು ಹೇಳಿದ್ದಾರೆ.

ದಲಿತ ಸಂಘರ್ಷ ಸಮಿತಿ ಒತ್ತಾಯದಂತೆ ೨೮.೭.೨೦೧೦ ರಂದು ಸಮಾಜಕಲ್ಯಾಣ ಇಲಾಖೆಯಿಂದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನಿವೇಶನ ಹಸ್ತಾಂತರಿಸಿ ೧೫ ಕೋಟಿ ವೆಚ್ಚದಲ್ಲಿ ಅಂಬೇಡ್ಕರ್ ಸಮುದಾಯ ಭವನ ಕಾಮಗಾರಿ ಪ್ರಾರಂಭಿಸಲು ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಪಂಚಾಯಿತಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ, ಮೈಸೂರ ಮಹಾ ನಗರ ಪಾಲಿಕೆಗಳಿಂದ ಹಣ ಕ್ರೋಢಿಕರಿಸಿ ೧೪.೬೬ ಕೋಟಿ ರೂಪಾಯಿಗಳನ್ನು ಮೈಸೂರ ನಗರಾಭಿವೃದ್ಧಿ ಪ್ರಾಧಿಕಾರದ ಸುಪರ್ದಿಗೆ ನೀಡಲಾಗಿತ್ತು. ಅಂದಿನ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ರವರು ಶಂಕು ಸ್ಥಾಪನೆ ಮಾಡಿ ಕಾಮಗಾರಿಗೆ ಚಾಲನೆ ನೀಡಿದ್ದರು. ಅಧಿಕಾರಿಗಳ ನಿರ್ಲಕ್ಷ ಮತ್ತು ದಲಿತ ವಿರೋಧಿ ಧೋರಣೆಗಳಿಂದ ಕಾಮಗಾರಿ ನಿಧಾನಗತಿಯಲ್ಲಿ ನಡೆದ ಪರಿಣಾಮ ಅಪೂರ್ಣಗೊಂಡು ೧೩ ವರ್ಷಗಳೇ ಕಳೆದಿದೆ. ಈವರೆಗೆ ಕೇವಲ ಶೇ. ೭೦ರಷ್ಟು ಕಾಮಗಾರಿ ಮಾತ್ರ ನಡೆದಿದೆ. ಸರ್ಕಾರಗಳು ಬದಲಾಗಿವೆ ಮೈಸೂರಿನವರೇ ಆದ ಸಿದ್ದರಾಮಯ್ಯನವರು ಎರಡು ಬಾರಿ ಮುಖ್ಯಮಂತ್ರಿಗಳಾಗಿದ್ದಾರೆ.ಡಾ.ಎಚ್.ಸಿ. ಮಹದೇವಪ್ಪನವರು ಎರಡು ಬಾರಿ ಜಿಲ್ಲಾಉಸ್ತುವಾರಿ ಸಚಿವರಾಗಿದ್ದಾರೆ. ಆದರೆ, ಮೈಸೂರು ಜಿಲ್ಲೆಯ ದುರ್ಬಲ ಸಮುದಾಯಗಳ ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ ಶಕ್ತಿ ಕೇಂದ್ರವಾಗಬೇಕಿದ್ದ ಸಮುದಾಯ ಭವನ ಕಾಮಗಾರಿ ಮಾತ್ರ ಇನ್ನೂ ಪೂರ್ಣಗೊಂಡಿಲ್ಲ ಎಂಬುದು ದುರಂತ ಎಂದಿದ್ದಾರೆ.

೧೩ ವರ್ಷಗಳ ಹಿಂದೆ ೧೫ ಕೋಟಿಗೆ ಪೂರ್ಣಗೊಳ್ಳಬೇಕಿದ್ದ ಕಾಮಗಾರಿಗೆ ಈಗ ೪೧ ಕೋಟಿ ಬೇಕಾಗಿದೆ. ಹೆಚ್ಚುವರಿ ೨೭ ಕೋಟಿ ಹಣ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿದೆ. ಕಾಮಗಾರಿ ಪ್ರಾರಂಭಿಸಲು ಸಚಿವ ಸಂಪುಟದ ಅನುಮೋದನೆ ಬೇಕು ಅಷ್ಟೇ ಎಂದು ಹೇಳುವ ಸಚಿವರು ಸಂಪುಟ ಸಭೆ ಅನುಮೋದನೆ ಪಡೆಯುವ ಪ್ರಯತ್ನ ಈವರೆವಿಗೂ ಈಡೇರದೆ ವಿಫಲವಾಗಿದೆ ಎನ್ನಬಹುದಾಗಿದೆ.

ದಲಿತ ವಿರೋಧಿ ಧೋರಣೆ ಖಂಡಿಸಿ ಟೌನ್‌ಹಾಲ್‌ನ ಬಾಬಾ ಸಾಹೇಬ್‌ಅಂಬೇಡ್ಕರ್ ಪ್ರತಿಮೆ ಎದುರು ಪ್ರತಿಭಟನೆ ನಡೆಸಿತ್ತು. ಮನವಿಯನ್ನು ಸ್ವೀಕರಿಸಲು ಬಾರದ ಉಸ್ತುವಾರಿ ಸಚಿವರು ಏಪ್ರಿಲ್ ೧೪ರ ಒಳಗೆ ಕಾಮಗಾರಿ ಪ್ರಾರಂಭಿಸಲು ಸಚಿವ ಸಂಪುಟದ ಒಪ್ಪಿಗೆ ಪಡೆಯುವುದಾಗಿ ಜಿಲ್ಲಾಧಿಕಾರಿಗಳ ಮೂಲಕ ಹೇಳಿಸಿದ್ದರು. ತಾವೂ ಕೂಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದರು. ಆದರೆ ಈವರೆವಿಗೂ ಕಾಮಗಾರಿ ಪ್ರಾರಂಭಿಸುವ ಯಾವುದೇ ಪ್ರಯತ್ನ ನಡೆದಿಲ್ಲದಿರುವುದು ದಲಿತ ಸಮುದಾಯವನ್ನು ಗೊಂದಲಕ್ಕೀಡು ಮಾಡಿದೆ. ಹಾಗಾಗಿ ಉಸ್ತುವಾರಿ ಸಚಿವರಾದ ಎಚ್.ಸಿ ಮಹದೇವಪ್ಪನವರ ಭರವಸೆ ಭರವಸೆಯಾಗಿಯೇ ಉಳಿದಿದೆ. ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸುತ್ತಿರುವ ದಲಿತ ಸಂಘರ್ಷ ಸಮಿತಿ ದಲಿತರೇ ಆದ ಸಚಿವರ ನೈತಿಕತೆಯನ್ನು ಎಚ್ಚರಿಸಲು ೨೪ರಂದು ಅವರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುವುದಾಗಿ ಜಿಲ್ಲಾ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಂಡಿದೆ. ನಂತರ ದಲಿತ ಸಂಘರ್ಷ ಸಮಿತಿಯ ಪ್ರತಿಭಟನೆಯನ್ನು ದಿಕ್ಕುತಪ್ಪಿಸಲು ಸಚಿವ ಸಂಪುಟದಿಂದ ಒಪ್ಪಿಗೆ ಪಡೆದ ಯಾವುದೇ ಆದೇಶ  ಅಧಿಕೃತವಾಗಿ ಬರದಿದ್ದರೂ ಒಪ್ಪಿಗೆ ಪಡೆದಿದ್ದೇನೆ ಎಂದು ಸಚಿವರೇ ಸುಳ್ಳು ಹೇಳಿಕೆ ನೀಡುತ್ತಿದ್ದಾರೆ. ಇದು ಸಮುದಾಯವನ್ನು ಗೊಂದಲಕ್ಕೀಡು ಮಾಡುವ ಹೇಳಿಕೆಯಾಗಿದೆ. ಅವರ ಹೇಳಿಕೆಯಲ್ಲಿ ಯಾವುದೇ ನೈಜತೆ ಇಲ್ಲಾ ಎಂಬುದು ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ವಿಚಾರಿಸಿದಾಗ ತಿಳಿದು ಬಂದಿದೆ ಎಂದು ಕಿಡಿಕಾರಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಜ್ಯಸಭಾ ಸ್ಥಾನ ಕೇಳಿಲ್ಲ, ಚರ್ಚೆಯೂ ನಡೆಸಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್‌ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…

2 hours ago

ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ನಿಧನ

ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…

5 hours ago

ನೆಹರು ದಾಖಲೆ ಮುರಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೊಸ…

5 hours ago

ಓದುಗರ ಪತ್ರ: ಗೃಹ ಸಚಿವರೇ ಇತ್ತಲೂ ಗಮನಹರಿಸಿ

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಗೃಹಮಂತ್ರಿ ಪ್ರಿಯಾಂಕ್…

6 hours ago

ಓದುಗರ ಪತ್ರ: ಹೀಗೇಕೆ ಭಾವಿಸಬಾರದು?

ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ತಪ್ಪಿದ್ದು ಕರ್ನಾಟಕದ ಜನರಿಗೆ ಮಾಡಿದ ಅವಮಾನ ಎಂದು ಭಾವಿಸಿ ತಪ್ಪು ತಿಳಿಯುವುದಕ್ಕಿಂತ... ಇಳಿ ವಯಸ್ಸಿನಲ್ಲಿರುವ ದೇವೇಗೌಡರು…

6 hours ago

ಓದುಗರ ಪತ್ರ: ಎಲ್ಲ ಇಲಾಖಾ ಪರೀಕ್ಷೆಗಳ ಹೊಣೆಯನ್ನು ಕೆಇಎಗೆ ನೀಡಲಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ೨೦೨೪-೨೦೨೫ ರಲ್ಲಿ ಸುಮಾರು ೨೫ ಕ್ಕೂ ಹೆಚ್ಚು ಪರೀಕ್ಷೆಗಳನ್ನು ಆಯೋಜಿಸಿ ೨೬ ಲಕ್ಷಕ್ಕೂ ಹೆಚ್ಚು…

6 hours ago