ಮೈಸೂರು: ಆಷಾಢ ಮಾಸದ 2ನೇ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿಂದು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕುಟುಂಬ ಸಮೇತ ಭೇಟಿ ನೀಡಿ ತಾಯಿಯ ದರ್ಶನ ಪಡೆದರು.
ಇಂದು ಬೆಳ್ಳಂಬೆಳಿಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪತ್ನಿ ಉಷಾ, ಮಗಳು ಐಶ್ವರ್ಯ ಜೊತೆಗೂಡಿ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡಿ ತಾಯಿಯ ದರ್ಶನ ಪಡೆದರು. ಬಳಿಕ ಮಂತ್ರ ಪಠಿಸುತ್ತಾ ಚಾಮುಂಡೇಶ್ವರಿಗೆ ಈಡುಗಾಯಿ ಒಡೆದು ಹರಕೆ ತೀರಿಸಿದ ಅವರು, ನಾಡಿನ ಜನರಿಗೆ ಒಳ್ಳೆದಾಗಲಿ ಎಂದು ಪ್ರಾರ್ಥನೆ ಮಾಡಿದ್ದೇನೆ ಎಂದರು.
ದರ್ಶನದ ಬಳಿಕ ಸಿಎಂ ರೇಸ್ನಿಂದ ಹೊರ ಬಿದ್ರಾ ಎಂಬ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಯತ್ನ ವಿಫಲ ಆದ್ರೂ ಪ್ರಾರ್ಥನೆ ವಿಫಲ ಆಗಲ್ಲ. ನಾನು ನನಗೆ ಏನು ಬೇಕು ಅದನ್ನು ದೇವರ ಮುಂದೆ ಪ್ರಾರ್ಥನೆ ಮಾಡಿದ್ದೇನೆ. ಮಲ್ಲಿಕಾರ್ಜುನ ಖರ್ಗೆ ನಮಗೆ ಬುದ್ಧಿವಾದ ಹೇಳಿದ್ದಾರೆ. ಹೈಕಮಾಂಡ್ ಕೂಡ ಕೆಲ ವಿಚಾರ ಹೇಳಿದೆ. ಇಲ್ಲಿ ರಾಜಕೀಯ ಚರ್ಚೆ ಬೇಡ ಎಂದರು.
ಇನ್ನು ನೋಟಿಸ್ ಕೊಟ್ಟರು ಕೆಲ ಶಾಸಕರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಏನು ಪ್ರತಿಕ್ರಿಯೆ ನೀಡದೇ ತೆರಳಿದರು.





