- ಮಾನವ ಸರಪಳಿಯಲ್ಲಿ 60 ಸಾವಿರ ಜನರು ಭಾಗಿ
- ಮಾನವ ಸರಪಳಿಗೆ ಗಜಪಡೆ ಸಾಥ್
- ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ಶಾಸಕ ತನ್ವೀರ್ ಸೇಠ್ ಕರೆ
ಮೈಸೂರು: ಪ್ರಭಾಪ್ರಭುತ್ವದ ಗಟ್ಟಿಗೊಳ್ಳಬೇಕಾದರೆ ಮಾನವೀಯತೆ ಹಾಗೂ ಸಹಾಯ ಮಾಡುವ ಮೌಲ್ಯಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್ ಕರೆ ನೀಡಿದರು.
ನಗರದ ಅರಮನೆ ಉತ್ತರ ದ್ವಾರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಎದುರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೃಹತ್ ಮಾನವ ಸರಪಳಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡ ಭಾರತ ಇಂದು ಪ್ರಜಾಪ್ರಭುತ್ವದ ಅತೀ ದೊಡ್ಡ ದೇಶವಾಗಿದೆ. ರಾಜ್ಯದ ಬೀದರ್ ನಿಂದ ಹಿಡಿದು ಚಾಮರಾಜನಗರದ ವರೆಗೆ ಮಾನವ ಸರಪಳಿ ನಿರ್ಮಿಸಿ ಇತಿಹಾಸ ಸೃಷ್ಟಿಸುವುದಕ್ಕೆ ಸಾಕ್ಷಿ ಯಾಗಿದ್ದು ಇದರ ಉದ್ದೇಶ ಸಂವಿಧಾನವನ್ನು ಇನ್ನು ಗಟ್ಟಿಗೊಳಿಸುವುದು ಹಾಗೂ ಅರಿವು ಮೂಡಿಸುವುದಾಗಿದೆ ಎಂದರು.

‘ಡಾ.ಬಿ.ಆರ್. ಅಂಬೇಡ್ಕರ್ ದೇಶಕ್ಕೆ ಅತ್ಯುತ್ತಮ ಸಂವಿಧಾನವನ್ನು ನೀಡಿದ್ದಾರೆ. ಅದನ್ನು ನಾವೆಲ್ಲರೂ ನಮಗಾಗಿ ಅರ್ಪಿಸಿಕೊಂಡು ಶಾಸನವಾಗಿ ಒಪ್ಪಿಕೊಂಡಿದ್ದೇವೆ. ಕೈಹಿಡಿದು ನಿಲ್ಲುವುದರೊಂದಿಗೆ, ಪರಸ್ಪರ ಸಹಾಯ ಹಸ್ತ ಚಾಚುವುದನ್ನು ಎಲ್ಲರೂ ಮಾಡಬೇಕು ಎಂದು ಹೇಳಿದರು.
ಜಾತಿ ಯಾವುದೇ ಇರಬಹುದು. ಯಾವ ಮನುಷ್ಯನೂ ಅರ್ಜಿ ಹಾಕಿಕೊಂಡು ಹುಟ್ಟಿಲ್ಲ. ನಾವು ಸೃಷ್ಟಿಸಿರುವ ಜಾತಿಯಲ್ಲಿ ಮಾನವೀಯ ಮೌಲ್ಯಗಳಿಗೆ ಮಾನವ ಸಂಬಂಧಗಳಿಗೆ ಹೆಚ್ಚು ಆದ್ಯತೆ ನೀಡೋಣ ಎಂದು ಹೇಳಿದರು.
ವಿಧಾನಪರಿಷತ್ ಸದಸ್ಯ ಡಾ.ಡಿ. ತಿಮ್ಮಯ್ಯ ಮಾತನಾಡಿ, ‘ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮಾನತೆಯನ್ನು ಸಂವಿಧಾನ ನೀಡಿದೆ. ಎಲ್ಲರನ್ನೂ ಒಂದೆಂದು ಕಾಣಬೇಕು. ಎಲ್ಲರ ಹಿತವನ್ನೂ ಕಾಪಾಡಲು ನಾವೆಲ್ಲ ಮುಂದಾಗಬೇಕು’ ಎಂದರು.
ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆಯನ್ನು ಸಾಮೂಹಿಕವಾಗಿ ಓದಿಸಲಾಯಿತು. ಮಾನವ ಸರಪಳಿಯಲ್ಲಿ ಪಾಲ್ಗೊಂಡವರು ಕೈ ಕೈ ಹಿಡಿದುಕೊಂಡು ತಮ್ಮ ಎರಡು ಕೈಗಳನ್ನು ಮೇಲಕ್ಕೆ ಎತ್ತಿ ಹಿಡಿದು ಜೈಹಿಂದ್, ಜೈ ಕರ್ನಾಟಕ ಎಂಬ ಘೋಷಣೆಗಳನ್ನು ಕೂಗಲಾಯಿತು.

ಬೆಳಿಗ್ಗೆ ತಾಲೀಮು ಮುಗಿಸಿ ಅರಮನೆಗೆ ವಾಪಸಾಗುತ್ತಿದ್ದ ದಸರಾ ಮಹೋತ್ಸವದ 13 ಆನೆಗಳನ್ನು ಕೂಡ ಸಾಲಿನಲ್ಲಿ ನಿಲ್ಲಿಸಿದ್ದು ವಿಶೇಷವಾಗಿತ್ತು.
ಕಾರ್ಯಕ್ರಮದಲ್ಲಿ ಶಾಸಕರಾದ ಕೆ.ಹರೀಶ್ ಗೌಡ, ಡಿ.ರವಿಶಂಕರ್, ಮುಡಾ ಅಧ್ಯಕ್ಷ ಮರಿಗೌಡ, ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರವೀಂದ್ರ ಹೆಗಡೆ, ಸದಸ್ಯ ಕಾರ್ಯದರ್ಶಿ ಬಿ.ಜಿ. ದಿನೇಶ್, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ. ಗಾಯಿತ್ರಿ, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಪಿ.ಶಿವರಾಜು, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಬಿ.ರಂಗೇಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಂ.ಡಿ. ಸುದರ್ಶನ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.




